ಎರಡು ವರ್ಷಗಳಿಂದ ಪರಿಹಾರ ಬಿಡುಗಡೆ ಮಾಡಿಲ್ಲ: ಎಚ್ಡಿಡಿ
ಬೆಂಗಳೂರು, ಆ. 28: ಬದಲಾದ ಕಾಲಘಟ್ಟದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೂ ಬದಲಾಗಿದ್ದಾರೆ. ಕೊರೊನಾ ವೈರಸ್ ಪರಿಣಾಮದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರೆ ಪೀಡಿತ ಪ್ರದೇಶಗಳ ಜೆಡಿಎಸ್ ನಾಯಕರೊಂದಿಗೆ ವರ್ಚುವಲ್ ಸಭೆ ನಡೆಸಿದರು. ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಡಿಯೋ ಸಂವಾದವನ್ನು ನಡೆಸಿದ್ದೇನೆ ಎಂದು ಸಭೆ ಬಳಿಕ ತಿಳಿಸಿದ್ದಾರೆ.
Recommended Video
ರಾಜ್ಯದ ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧ್ಯಕ್ಷರ ಜೊತೆ ಮಾಜಿ ಪ್ರಧಾನಿ ದೇವೇಗೌಡರು ಸಭೆ ನಡೆಸಿದರು. ವಿಡಿಯೋ ಕಾನ್ಪೆರನ್ಸ್ ಮೂಲಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಚರ್ಚೆ ನಡೆಸಿದರು. ನೆರೆ ಹಾವಳಿ, ನೊಂದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಕೈಗೊಂಡಿರುವ ಕಾರ್ಯಗಳು, ಹಾಗೂ ಇನ್ನೂ ಕಲ್ಪಿಸಬೇಕಾದ ಸೌಲಭ್ಯಗಳ ಕುರಿತು ಚರ್ಚೆ ನಡೆಸಿದರು.
ದೇವೇಗೌಡ್ರ ಮನೆಗೆ ಔತಣಕ್ಕೆ ಹೋದ ಸಚಿವ ಗೋಪಾಲಯ್ಯ: ಬಿಜೆಪಿಯಲ್ಲಿ ತಳಮಳ
ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು, ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಡಿಯೋ ಸಂವಾದ ನಡೆಸಿದ್ದೇವೆ ಎಂದು ದೇವೇಗೌಡರು ಸಭೆಯ ಬಳಿಕ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಸರ್ಕಾರ ನೆರೆ ಪೀಡಿತರು ಹಾಗೂ ರೈತರಿಗೆ ಕೊಡಲಬೇಕಾದ ಪರಿಹಾರವನ್ನು ಬಿಡುಗಡೆ ಮಾಡಿಲ್ಲ. ಕೋವಿಡ್ ಕಡಿಮೆಯಾದ ತಕ್ಷಣ ನಾವೇ ಜಿಲ್ಲಾ ಪ್ರವಾಸ ಮಾಡುತ್ತೇವೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿ ರೈತರ ವಸ್ತುಸ್ಥಿತಿಯನ್ನು ಅರಿಯಲಿದ್ದಾರೆ. ಜೊತೆಗೆ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಕೊಡುತ್ತೇವೆ ಎಂದು ದೇವೇಗೌಡರು ತಿಳಿಸಿದ್ದಾರೆ.
ಸರ್ಕಾರ ತಕ್ಷಣ ರೈತರು ಹಾಗೂ ನೆರೆ ಪೀಡಿತರಿಗೆ ಎರಡೂ ವರ್ಷಗಳ ಪರಿಹಾರವನ್ನು ಬಿಡುಗಡೆ ಮಾಡಲಿ ಎಂದು ದೇವೇಗೌಡರು ಆಗ್ರಹಿಸಿದ್ದಾರೆ.