ಫೆ.22ರಿಂದ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಇಂದ್ರಧನುಷ್ 3.0 ಲಸಿಕಾ ಕಾರ್ಯಕ್ರಮ
ಬೆಂಗಳೂರು, ಫೆಬ್ರವರಿ 20: ಮಕ್ಕಳು ಹಾಗೂ ಗರ್ಭಿಣಿಯರಿಗೆ ಏಳು ರೋಗಗಳು ಬಾರದಂತೆ ತಡೆಯಲು ಮಾರ್ಚ್ 22ರವರೆಗೆ ಇಂದ್ರಧನುಷ್ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ 13 ಜಿಲ್ಲೆಗಳಲ್ಲಿ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರ ಇಂದ್ರಧನುಷ್ 3.0 ಅಭಿಯಾನ ಅನುಷ್ಠಾನಗೊಳಿಸಿದ್ದು, ಫೆಬ್ರವರಿ 22 ರಿಂದ ಮಾರ್ಚ್ 22 ರವರೆಗೆ ಈ ಅಭಿಯಾನ ನಡೆಸಲಾಗುವುದು. ಈವರೆಗೆ ತಲುಪಲಾಗದ ಪ್ರದೇಶಗಳನ್ನು ಗುರಿಯಾಗಿಟ್ಟುಕೊಂಡು ಈ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರ 2014ರ ಡಿಸೆಂಬರ್ 25ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಸಲುವಾಗಿ ಈ ಲಸಿಕೆ ಅಭಿಯಾನ ಆರಂಭಿಸಿತ್ತು. ನಂತರ 2017ರ ಅಕ್ಟೋಬರ್ 8 ರಂದು ಇಂಟೆನ್ಸಿಫೈಡ್ ಮಿಷನ್ ಇಂದ್ರಧನುಷ್ ಗೆ ಚಾಲನೆ ನೀಡಲಾಗಿತ್ತು. ಈಗ ಮುಂದಿನ ಭಾಗವಾಗಿ 3.0 ಗೆ ಚಾಲನೆ ದೊರೆತಿದೆ. ಕಾಮನಬಿಲ್ಲಿನಲ್ಲಿ ಏಳು ಬಣ್ಣಗಳಿರುವಂತೆಯೇ, ಇಂದ್ರಧನುಷ್ ಏಳು ರೋಗಗಳು ಬಾರದಂತೆ ತಡೆಯುತ್ತದೆ ಎಂದು ವಿವರಣೆ ನೀಡಿದರು.
ಡಿಫ್ತೀರಿಯಾ, ವೂಫಿಂಗ್ ಕಾಫ್, ಟೆಟಾನಸ್, ಟ್ಯೂಬರ್ ಕ್ಯುಲೋಸಿಸ್, ಪೋಲಿಯೊ, ಮಿಸಲ್ಸ್, ಹೆಪಟೈಟಸ್ ಗೆ ಬಿಗೆ ಇದರಲ್ಲಿ ಲಸಿಕೆ ನೀಡಲಾಗುವುದು. ಬೆಂಗಳೂರು, ಬಿಬಿಎಂಪಿ ವ್ಯಾಪ್ತಿ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಈ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.
ಈ ಜಿಲ್ಲೆಗಳಲ್ಲಿ ವಲಸಿಗರನ್ನು ಹೊಂದಿದ ಸ್ಲಂ, ಇಟ್ಟಿಗೆ ಸುಡುವ ಜಾಗ, ಅಲೆಮಾರಿಗಳು ವಾಸಿಸುವ ಸ್ಥಳ, ಕಟ್ಟಡ ನಿರ್ಮಾಣ ಸ್ಥಳ ಮೊದಲಾದ ಕಡೆಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದರು.












Click it and Unblock the Notifications