ಜಾತಿ ಸಮೀಕ್ಷೆ: ಸುಧಾಮೂರ್ತಿ ದಂಪತಿ ಮಾಹಿತಿ ಸೋರಿಕೆ, ಸರ್ಕಾರ ನ್ಯಾಯಾಂಗ ನಿಂದನೆ ಆರೋಪ
ಬೆಂಗಳೂರು, ಅಕ್ಟೋಬರ್ 18: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಾರ್ವಜನಿಕರು ನೀಡುವ ಮಾಹಿತಿ ಗೌಪ್ಯತೆಯನ್ನು ಕಾಪಾಡುತ್ತೇವೆ ಎಂದು ನಿಮ್ಮ ಸರ್ಕಾರ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದೆ. ಇನ್ಫೋಸಿಸ್ ಸಂಸ್ಥೆ ಮುಖಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ಕುಟುಂಬದವರು ನೀಡಿರುವ ಮಾಹಿತಿ ಹೇಗೆ ಬಹಿರಂಗವಾಯಿತು? ಮಾಹಿತಿ ಸೋರಿಕೆ ಮಾಡಿದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸುತ್ತೀರಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಆರೋಪಿಸಿದರು.
ನಾವು ಹಿಂದುಳಿದವರಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಾವು ಮಾಹಿತಿ ನೀಡುವುದಿಲ್ಲ ಎಂದು ಸುಧಾಮೂರ್ತಿ ಅವರು ಬರೆದಿದ್ದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಚರ್ಚೆಗಳು ನಡೆದಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ ಅವರು, ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿಯವರೇನು ಬೃಹಸ್ಪತಿಗಳೇ? ಈ ಸಮೀಕ್ಷೆ ಹಿಂದೂಳಿದವರಿಗೆ ಮಾತ್ರವಲ್ಲ ಎಂಬುದನ್ನು ಈಗಾಗಲೇ ಹೇಳಿದ್ದೇವೆ ಎಂದೆಲ್ಲ ತಿರುಗೇಟು ನೀಡಿದ್ದಾರೆ. ಜಾತಿ ಗಣತಿಯಲ್ಲಿ ಭಾಗಿಯಾಗದವರು ದೇಶ್ರದೋಹಿಗಳು ಎಂದು ಸುಧಾಮೂರ್ತಿ ದಂಪತಿ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಸಹ ಕಿರಿ ಕಾರಿದ್ದರು.

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರ್.ಅಶೋಕ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಸಮೀಕ್ಷೆಯಲ್ಲಿ ಸಾರ್ವಜನಿಕರು ನೀಡುವ ಮಾಹಿತಿಯ ಗೌಪ್ಯತೆಯನ್ನು ಕಾಪಾಡುತ್ತೇವೆ ಎಂದು ನಿಮ್ಮ ಸರ್ಕಾರ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದೆ. ಆ ನಿಯಮ ಪಾಲನೆ ಆಗಿಲ್ಲ. ಹೈಕೋರ್ಟ್ ಆದೇಶಿಸಿದ್ದು, ಅದರಲ್ಲಿ "ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ. ಜಾತಿಗಣತಿ ಸಮೀಕ್ಷೆಯಲ್ಲಿ ಸಾರ್ವಜನಿಕರು ನೀಡುವ ಮಾಹಿತಿಯ ಗೌಪ್ಯತೆ ಕಾಪಾಡಬೇಕು' ಎಂದು ತಿಳಿಸಿದೆ.
ಈ ಎರಡೂ ಅಂಶಗಳ ಬಗ್ಗೆ ಸ್ವತಃ ಮಾನ್ಯ ಹೈಕೋರ್ಟ್ ಸ್ಪಷ್ಟನೆ ನೀಡಿದ್ದರೂ ಸಹ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ವರ್ತಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ನಿಂದನೆ ಎಸಗುತ್ತಿದೆ ಎಂದು ಆರೋಪಿಸಿದರು. ಬೆಂಗಳೂರಿನಲ್ಲಿ ಹದಗೆಟ್ಟಿರುವ ರಸ್ತೆಗಳ ಬಗ್ಗೆ ಖ್ಯಾತ ಉದ್ಯಮಿಗಳು ದನಿ ಎತ್ತಿದಾಗ, "ನಿಮ್ಮ ಸಿಎಸ್ಆರ್ ನಿಧಿಯಲ್ಲಿ ನೀವೇ ರಸ್ತೆಗುಂಡಿ ಮುಚ್ಚಿ", "ನಿಮ್ಮ ಸಿಎಸ್ಆರ್ ನಿಧಿಯ ಲೆಕ್ಕಕೊಡಿ" ಎಂದು ಬೆದರಿಸಿ ಅವಮಾನ ಮಾಡಿದ್ದ ಕಾಂಗ್ರೆಸ್ ನಾಯಕರು ಈಗ ಒಂದು ಹೆಜ್ಜೆ ಮುಂದೆ ಹೋಗಿ "ಇನ್ಫೋಸಿಸ್ ನವರು ಬೃಹಸ್ಪತಿಗಳಾ?", "ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸದವರು ದೇಶದ್ರೋಹಿಗಳು" ಎಂದು ನಿಂದಿಸುವ ಮೂಲಕ ಮತ್ತೊಮ್ಮೆ ದರ್ಪ, ದುರಹಂಕಾರ ಮೆರೆದಿದ್ದಾರೆ ಎಂದು ಸಿಎಂ ಹಾಗೂ ಕಾಂಗ್ರೆಸ್ ನಾಯಕರ ನಡೆ, ಆಡಳಿತವನ್ನು ಕಟುವಾಗಿ ಟೀಕಿಸಿದರು.
ರಾಜ್ಯ ಹೈಕೋರ್ಟ್ ನ್ಯಾಯಾಲಯವೇ ಈ ಸಮೀಕ್ಷೆ ಕಡ್ಡಾಯವಲ್ಲ ಅಂತ ಸ್ಪಷ್ಟವಾಗಿ ಹೇಳಿರುವಾಗ ಈ ಸಮೀಕ್ಷೆಯಲ್ಲಿ ಭಾಗವಹಿಸದವರು ದೇಶದ್ರೋಹಿಗಳು ಹೇಗಾಗುತ್ತಾರೆ ಬಿ.ಕೆ ಹರಿಪ್ರಸಾದ್ ಅವರೇ? ಎಂದು ಪ್ರಶ್ನಿಸಿದರು. ನಮ್ಮ ನಾಡಿನ, ದೇಶದ ಖ್ಯಾತ ಉದ್ಯಮಿಗಳನ್ನು ನಿಂದಿಸುವ, ಲಕ್ಷಾಂತರ ಜನಕ್ಕೆ ಉದ್ಯೋಗ ಕೊಟ್ಟು ದೇಶದ ಆರ್ಥಿಕತೆಗೆ ಶಕ್ತಿ ತುಂಬಿರುವ ಉದ್ಯಮಿಗಳ ಬಗ್ಗೆ ನಾಲಿಗೆ ಹರಿಬಿಡುವ ಕಾಂಗ್ರೆಸ್ ನಾಯಕರಿಗೆ ನಿಜಕ್ಕೂ ನಾಚಿಕೆಯಾಗಬೇಕು ಎಂದು ದೂರಿದರು.












Click it and Unblock the Notifications