ಬಿಬಿಎಂಪಿ; ಅಕ್ರಮ ತನಿಖೆಗೆ ಸಮಿತಿ ರಚನೆಗೆ ಹೈಕೋರ್ಟ್ ತಡೆ
ಬೆಂಗಳೂರು, ಡಿಸೆಂಬರ್ 10: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 2019ರಿಂದ 2023ರ ಮೇ ತಿಂಗಳ ಅವಧಿಯಲ್ಲಿ ನಡೆದಿರುವ ವಿವಿಧ ಕಾಮಗಾರಿಗಳ ಅಕ್ರಮ ಕುರಿತು ತನಿಖೆ ನಡೆಸಲು 4 ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಇದರಿಂದಾಗಿ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹುಳುಕು ಹೊರತರುವ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಜತೆಗೆ ಗುತ್ತಿಗೆದಾರರಿಗೆ ಒಂದು ರೀತಿಯಲ್ಲಿ ಜಯ ಸಿಕ್ಕಂತಾಗಿದೆ. ಪಾಲಿಕೆ ಕಾಮಗಾರಿಗಳ ಸಂಬಂಧ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನಡೆಯುತ್ತಿರುವ ವಾಗ್ಯುದ್ಧಕ್ಕೆ ಹೊಸ ತಿರುವು ಸಿಕ್ಕಂತಾಗಿದೆ.

ಮೆರ್ಸಸ್ ನಿಕ್ಷೇಪ ಇನ್ಫ್ರಾ ಪ್ರಾಜೆಕ್ಟ್ಸ್ ಸೇರಿದಂತೆ 17 ಗುತ್ತಿಗೆ ಕಂಪನಿಗಳು ಮತ್ತು 28 ಮಂದಿ ಗುತ್ತಿಗೆದಾರರು ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.
ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಹಿಂದಿನ ಸರ್ಕಾರದ ನಿಲುವುಗಿಂತ ಭಿನ್ನವಾದ ನಿಲುವು ಅನ್ನು ಕೈಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿರುವ ತನ್ನ ಕ್ರಮದ ಕುರಿತು ರಾಜ್ಯ ಸರ್ಕಾರ ಸಮರ್ಥನೆ ನೀಡಬೇಕಿದೆ. ಅದಕ್ಕಾಗಿ ತನಿಖಾ ಸಮಿತಿ ಮತ್ತು ಏಕ ವ್ಯಕ್ತಿ ತನಿಖಾ ಆಯೋಗ ರಚನೆ ಮಾಡಿರುವ ಸರ್ಕಾರದ ಆದೇಶ, ಅದಕ್ಕೆ ಸಂಬಂಧಿಸಿದ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ ಎಂದು ಆದೇಶದಲ್ಲಿ ಹೈಕೋರ್ಟ್ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಬಿಬಿಎಂಪಿ ವ್ಯಾಪ್ತಿಯಲ್ಲಿ 2019ರಿಂದ 2023ರ ಮೇ ತಿಂಗಳ ಅವಧಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನ, ನಗರೋತ್ಥಾನ ಅನುದಾನ ಮತ್ತು ಬಿಬಿಎಂಪಿ ಅನುದಾನಗಳ ಅಡಿಯಲ್ಲಿ ಹಲವು ಕಾಮಗಾರಿಗಳು ನಡೆದಿದ್ದವು.
ಕಾಮಗಾರಿಗಳ ಸಂಬಂಧ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆ, ನಿರ್ದಿಷ್ಟ ಗುತ್ತಿಗೆದಾರರನ್ನು ಬಿಟ್ಟು ನಕಲಿ ಗುತ್ತಿಗೆದಾರರಿಗೆ ಹಣ ಪಾವತಿ, ನಕಲಿ ಬಿಲ್ ಸೃಷ್ಟಿ, ಕಾಮಗಾರಿ ನಡೆಸದೆಯೇ ಬಿಲ್ ಪಾವತಿ, ಕಳಪೆ ಗುಣಮಟ್ಟ ಕಾಮಗಾರಿ ನಡೆಸಿರುವುದು ಸೇರಿದಂತೆ ಹಲವು ಆರೋಪಗಳು ಕೇಳಿಬಂದಿದ್ದವು.
ಇದರಿಂದ ಆ ಕುರಿತು ತನಿಖೆ ನಡೆಸಲು ರಾಜ್ಯ ನಗರಾಭಿವೃದ್ಧಿ ಇಲಾಖೆಯು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ನಾಲ್ಕು ಸಮಿತಿ ರಚನೆ ಮಾಡಲಾಗಿತ್ತು. ಉಜ್ವಲ್ ಕುಮಾರ್ ಘೋಷ್ ನೇತೃತ್ವದಲ್ಲಿ ನಾಲ್ವರು ಸದಸ್ಯರನ್ನು ಒಳಗೊಂಡ ಘನತ್ಯಾಜ್ಯ ನಿರ್ವಹಣೆ ಕಾಮಗಾರಿ ತನಿಖಾ ಸಮಿತಿ ರಚಿಸಲಾಗಿತ್ತು.
ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ 6 ಸದಸ್ಯರನ್ನು ಒಳಗೊಂಡ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಒಎಫ್ಸಿ ಕೇಬಲ್ ಅಳವಡಿಕೆಯ ಅಕ್ರಮ ತನಿಖಾ ಸಮಿತಿ, ಪಿ.ಸಿ. ಜಾಫರ್ ನೇತೃತ್ವದಲ್ಲಿ 4 ಸದಸ್ಯರ ಬೃಹತ್ ನೀರುಗಾಲುವೆ, ಸ್ವಾಧೀನಾನುಭವ (ಒಸಿ) ನೀಡುವ ಅಕ್ರಮದ ತನಿಖಾ ಸಮಿತಿ ರಚನೆ ಮಾಡಲಾಗಿತ್ತು.
ಡಾ. ವಿಶಾಲ್ ನೇತೃತ್ವದಲ್ಲಿ 6 ಸದಸ್ಯರ ಕೆರೆ ಅಭಿವೃದ್ಧಿ, ಸ್ಮಾರ್ಟ್ ಸಿಟಿ ಹಾಗೂ ವಾರ್ಡ್ ಮಟ್ಟದ ಕಾಮಗಾರಿಗಳ ತನಿಖಾ ಸಮಿತಿಯನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ.












Click it and Unblock the Notifications