ಲಾಕ್ಡೌನ್ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ ಎಂದ ಬಸವರಾಜ್ ಬೊಮ್ಮಾಯಿ
ಬೆಂಗಳೂರು, ಮೇ. 15: ರಾಜ್ಯದಲ್ಲಿ ಮೊದಲ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಕೊರೊನಾ ಸೋಂಕು ಜಾಸ್ತಿಯಾದ ಹಿನ್ನೆಲೆಯಲ್ಲಿ ಮೊದಲ ಲಾಕ್ ಡೌನ್ ಮೇ. 12 ಕ್ಕೆ ಮುಗಿಯುವ ಮೊದಲೇ ಅದನ್ನು ಮೇ. 24 ಕ್ಕೆ ವಿಸ್ತರಣೆ ಮಾಡಿದರು. ಇದೀಗ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೀಡಿರುವ ಹೇಳಿಕೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ ಸುಳಿವು ನೀಡಿದೆ. ಮೇ. 24 ರಿಂದ ಪುನಃ ಜೂನ್ ಮೊದಲ ವಾರದ ವರೆಗೂ ಲಾಕ್ ಡೌನ್ ವಿಸ್ತರಣೆಯಾಗಲಿದೆಯಾ ? ಎಂಬ ಪ್ರಶ್ನೆ ಎದ್ದಿದೆ.
ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಉಚಿತ ಊಟ ಕಲ್ಪಿಸುವ ಇಸ್ಕಾನ್ ಅಕ್ಷಯ್ ಪಾತ್ರ ದಾಸೋಹ ಕಾರ್ಯಕ್ರಮಕ್ಕೆ ಕೆ.ಆರ್. ಮಾರ್ಕೆಟ್ ನಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಶನಿವಾರ ಅಧಿಕೃತವಾಗಿ ಚಾಲನೆ ನೀಡಿದರು. ಇಸ್ಕಾನ್ ಅವರ ಅಕ್ಷಯ ಪಾತ್ರ ಯೋಜನೆ ಬಗ್ಗೆ ಪ್ರಶಂಸೆ ಮಾಡಿದ ಗೃಹ ಸಚಿವರು, ಲಾಕ್ ಡೌನ್ ಸಮಯದಲ್ಲಿ ಯಾರೂ ಹಸಿವಿನಿಂದ ಇರಬಾರದು. ಈ ಹಿನ್ನೆಲೆಯಲ್ಲಿ ಇಸ್ಕಾನ್ ನಮ್ಮ ಜತೆ ಕೈ ಜೋಡಿಸಿದೆ. ಈ ಬಾರಿಯೂ ಅವರ ಸಹಕಾರಕ್ಕೆ ಮನವಿ ಮಾಡಿದ್ದೆ. ಅದರ ಫಲವಾಗಿ ಇಂದು ಪೊಲೀಸ್ ಸಿಬ್ಬಂದಿ ಸೇರಿದಂತೆ ಊಟದ ಅವಶ್ಯಕತೆ ಇರುವರಿಗೆ ಮಧ್ಯಾಹ್ನದ ವೇಳೆ ಉಚಿತ ಊಟ ವಿತರಿಸುತ್ತಿದೆ. ಇಂತಹ ಕಾರ್ಯಕ್ರಮ ಉದ್ಘಾಟನೆ ನನಗೆ ಸಂತಸ ಉಂಟು ಮಾಡಿದೆ ಎಂದರು.
ಲಾಕ್ ಡೌನ್ ವಿಸ್ತರಣೆ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಮತ್ತೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಅಧಿಕೃತವಾಗಿ ಚರ್ಚೆ ಮಾಡಿಲ್ಲ. ಆದರೆ ಕೇಂದ್ರ ಸೇರಿದಂತೆ ತಜ್ಞರು ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಕಠಿಣ ಲಾಕ್ ಡೌನ್ ಅನಿವಾರ್ಯ ಎಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ. ಆ ಸಂದರ್ಭದಲ್ಲಿ ನ ಪರಿಸ್ಥಿತಿ ಹಾಗೂ ಕೋವಿಡ್ ಅಂಕಿ ಅಂಶಗಳನ್ನು ಪರಿಶೀಲಿಸಲಿದ್ದಾರೆ. ಆ ಬಳಿಕ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳೇ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಪರೀಕ್ಷೆ ಕಡಿಮೆ ಮಾಡಿಲ್ಲ: ಕೋವಿಡ್ ಆರ್ಟಿ ಪಿಸಿಆರ್ ಪರೀಕ್ಷಾ ಪ್ರಮಾಣವನ್ನು ಕಡಿಮೆ ಮಾಡಿಲ್ಲ. ಈ ಹಿಂದೆ ಸಾರ್ವಜನಿಕ ಸ್ಥಳಗಳಾದ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶ ಗಳಲ್ಲಿ ಟೆಸ್ಟಿಂಗ್ ನಡೆಯುತ್ತಿತ್ತು. ಆದರೆ ಈಗ ಲಾಕ್ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ನಡೆಯುತ್ತಿದ್ದ ಟೆಸ್ಟಿಂಗ್ ನಿಂತಿದೆ. ಹೀಗಾಗಿ ಟೆಸ್ಟಿಂಗ್ ಸಂಖ್ಯೆ ಕಡಿಮೆಯಾಗಿದೆ. ಆದರೆ ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ನಾವು ಕಡ್ಡಾಯವಾಗಿ ಆರ್ಟಿಪಿಸಿಆರ್ ತಪಾಸಣೆಗೆ ಒಳಪಡಿಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
Recommended Video
ಅಕ್ಷಯ ಪಾತ್ರೆ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ್, ಚಿಕ್ಕಪೇಟೆ ಕ್ಷೇತ್ರದ ಶಾಸಕರಾದ ಉದಯ ಗರುಡಾಚಾರ್ ರಾಜ್ಯ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.