ಇಸ್ರೇಲ್ ಮಾದರಿ ಕೃಷಿ ಪದ್ಧತಿ ಅನುಷ್ಠಾನಕ್ಕೆ ಇಸ್ರೇಲ್ ತಂತ್ರಜ್ಞರ ನೆರವು
ಬೆಂಗಳೂರು, ಫೆಬ್ರವರಿ 21: ಇಸ್ರೇಲ್ ರಾಯಭಾರಿ ಡಾ.ರಾನ್ ಮಲ್ಕಾ ಅವರ ನೇತೃತ್ವದ ತಂಡ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದು ಗೃಹ ಕಚೇರಿ ಕೃಷ್ಣಾ ದಲ್ಲಿ ಭೇಟಿ ಮಾಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಸ್ರೇಲ್ ಮಾದರಿ ಕೃಷಿ ಪದ್ಧತಿಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಇಸ್ರೇಲ್ ಸಹಭಾಗಿತ್ವದಲ್ಲಿ ಇದನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಎಲ್ಲ ಸಹಕಾರವನ್ನು ನೀಡುವುದಾಗಿ ತಿಳಿಸಿದರು.
ಕೃಷಿ ಕ್ಷೇತ್ರಕ್ಕೆ ಈ ಬಾರಿಯ ಆಯವ್ಯಯದಲ್ಲಿ 450 ಕೋಟಿ ರೂ.ಗಳ ಅನುದಾನವನ್ನು ಮೀಸಲಿರಿಸಿದ್ದು, ನಮ್ಮ ಕೃಷಿಕ ಸಮುದಾಯಕ್ಕೆ ಈ ಬಗ್ಗೆ ಅರಿವು ಮೂಡಿಸಲು ಇಸ್ರೇಲ್ ಕೃಷಿ ತಜ್ಞರ ಅಗತ್ಯವಿದೆ. ಈ ಯೋಜನೆಯನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವ ಸರ್ಕಾರದ ಉದ್ದೇಶಕ್ಕೆ ಇಸ್ರೇಲ್ ಸಹಕಾರ ನೀಡಬೇಕೆಂದರು.
ಇಸ್ರೇಲ್ ರಾಯಭಾರಿ ಡಾ.ರಾನ್ ಮಲ್ಕಾ ಅವರು ಮಾತನಾಡಿ, ಭಾರತ ಮತ್ತು ಇಸ್ರೇಲ್ನ ನಡುವೆ ಸ್ನೇಹ ಬಾಂಧವ್ಯವಿದ್ದು, ಕರ್ನಾಟಕದಲ್ಲಿ ಇಸ್ರೇಲ್ ಈಗಾಗಲೇ ಸ್ಟಾರ್ಟ್ ಅಪ್ ಕಂಪನಿಗಳನ್ನು ಹೊಂದಿದೆ ಎಂದರು. ಕರ್ನಾಟಕದ ಮೂಲಭೂತ ಸೌಕರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು,ಕರ್ನಾಟಕ - ಇಸ್ರೇಲ್ ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ನಿಧಿಯಡಿ ತಂತ್ರಜ್ಞಾನ, ಕೃಷಿ ಜೈವಿಕ ತಂತ್ರಜ್ಞಾನ, ಏವಿಯಾನಿಕ್ಸ್ ಸೇರಿದಂತೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕದ ಪ್ರವಾಸೋದ್ಯಮದ ಸಾಧ್ಯತೆಗಳ ಸದ್ಬಳಕೆ , ಜ್ಞಾನ ಹಂಚಿಕೆ ಹಾಗೂ ಜಲ ನಿರ್ವಹಣೆಗೆ ಸಂಬಂಧಿಸಿದಂತೆ , ಇಸ್ರೇಲ್ ಬಳಸುತ್ತಿರುವ ತಂತ್ರಜ್ಞಾನವನ್ನು ಕರ್ನಾಟಕದೊಂದಿಗೆ ಹಂಚಿಕೊಳ್ಳಲು ಸಿದ್ಧವಿರುವುದಾಗಿ ತಿಳಿಸಿದರು.
ಇಂಡೋ ಇಸ್ರೇಲ್ ಸಹಭಾಗಿತ್ವದಲ್ಲಿ ಉತ್ಕೃಷ್ಟ ಕೇಂದ್ರ ( centres of excellence)ಗಳನ್ನು ಸಹ ಸ್ಥಾಪಿಸಲಾಗಿದೆ. ಈ ಎಲ್ಲ ಯೋಜನೆಗಳನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಇಸ್ರೇಲ್ ಮತ್ತು ಕರ್ನಾಟಕ ಒಟ್ಟಾಗಿ ಕಾರ್ಯನಿರ್ವಹಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಇಸ್ರೇಲ್ನ ದಕ್ಷಿಣ ಭಾರತದ ಕೌನ್ಸಲ್ ಜನರಲ್ ಡಾನಾ ಖುರ್ಷ್, ಇಸ್ರೇಲ್ ರಾಯಭಾರಿ ಕಚೇರಿಯ ಉಪ ರಾಯಭಾರಿ ಮಾಯಾ ಕದೋಷ್, ಕೃಷಿ ಸಚಿವ ಎನ್.ಹೆಚ್.ಶಿವಶಂಕರರೆಡ್ಡಿ, ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ , ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಮಹೇಶ್ವರ ರಾವ್ ಉಪಸ್ಥಿತರಿದ್ದರು.