ಐಟಿ ಕ್ರಾಂತಿ ಎರಡನೇ ಹಂತದ ನಗರಗಳನ್ನು ತಲುಪಬೇಕು
ಬೆಂಗಳೂರು, ನ. 20 : ಡಿಜಿಟಲ್ ಸಾಕ್ಷರತೆಯನ್ನು ಪ್ರತಿಯೊಬ್ಬರಿಗೂ ತಲುಪಿಸುವ ಮೂಲಕ ಮನೆಗೊಬ್ಬರನ್ನು ಕಂಪ್ಯೂಟರ್ ಸಾಕ್ಷರರನ್ನಾಗಿ ತಯಾರು ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ್ ಹೇಳಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಅವರು ಘೋಷಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ವಿದ್ಯಾರ್ಥಿ ಅಂತರ್ಜಾಲ ಪ್ರಪಂಚಕ್ಕೆ ಚಾಲನೆ ನೀಡಿ ಮಾತನಾಡಿದ, ಸಚಿವ ಎಸ್.ಆರ್.ಪಾಟೀಲ್, ಮಹಿಳೆಯರಿಗೆ, ಶ್ರಮಿಕ ವರ್ಗದವರಿಗೆ ಮತ್ತು ನಿರುದ್ಯೋಗಿ ಯುವಕರು ಸೇರಿದಂತೆ ಗ್ರಾಮೀಣ ಹಂತದವರೆಗೆ ಡಿಜಿಟಲ್ ಸಾಕ್ಷರತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಲಿದೆ ಎಂದು ಹೇಳಿದರು.

ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಸಚಿವರು, ಮಾಹಿತಿ ತಂತ್ರಜ್ಞಾನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಶಿಕ್ಷಣ ಇಲಾಖೆ ಇಂಟೆಲ್ ಕಂಪೆನಿ ಸಹಯೋಗದಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ ಕಾರ್ಯಕ್ರಮ ಆಯೋಜಿಸಿದೆ ಎಂದು ತಿಳಿಸಿದರು.
400 ಕೇಂದ್ರಗಳಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕುರಿತು ಮಾಹಿತಿ ನೀಡಲಾಗುತ್ತದೆ. ನಾಲ್ಕು ಲಕ್ಷ ವಿದ್ಯಾರ್ಥಿಗಳು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು. ಮೂರು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ. ಕಳೆದ ಐದು ವರ್ಷಗಳಲ್ಲಿ 10 ಲಕ್ಷ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ ಎಂದರು.
ಗ್ರಾಮ ಪಂಚಾಯಿತಿಗಳಿಗೆ ಬ್ರಾಂಡ್ಬ್ಯಾಂಡ್ ಸಂಪರ್ಕ ನೀಡಲು ಕೇಂದ್ರ ಸರ್ಕಾರ ರೂ 20 ಸಾವಿರ ಕೋಟಿ ಮಂಜೂರು ಮಾಡಿದೆ. ಈಗಾಗಲೇ ಸಂಪರ್ಕ ನೀಡುವ ಕಾರ್ಯ ಆರಂಭವಾಗಿದ್ದು, ಇದರಿಂದ ಗ್ರಾಮೀಣ ಪ್ರದೇಶದಲ್ಲೂ ಮಾಹಿತಿ ತಂತ್ರಜ್ಞಾನ ಆಧಾರಿತ ಚಟುವಟಿಕೆಗಳನ್ನು ಹೆಚ್ಚಿಸಲು ಅನುಕೂಲವಾಗಲಿದೆ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು. ಐಟಿ ಕ್ರಾಂತಿ ಎರಡನೇ ಮತ್ತು ಮೂರನೇ ಹಂತದ ನಗರಗಳಿಗೂ ನಗರಗಳಿಗೂ ವಿಸ್ತರಣೆ ಆಗಬೇಕು ಅದಕ್ಕಾಗಿ ಸರ್ಕಾರ ಪ್ರಯತ್ನಸಲಿದೆ ಎಂದು ಹೇಳಿದರು.
ಭಾರತ ರತ್ನ ಪ್ರೊ.ಸಿ.ಎನ್.ಆರ್. ರಾವ್ ವಿಜ್ಞಾನ ಸಂಶೋಧನೆಗೆ ಹೆಚ್ಚಿನ ಸಂಪನ್ಮೂಲ ಒದಗಿಸುವ ಕುರಿತು ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಅವರ ವಿಚಾರಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದ್ದು, ವಿಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದರು. ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆ ಕುಂಠಿತವಾಗಿಲ್ಲ. ದೇಶದ ಒಟ್ಟು ಸಾಫ್ಟ್ವೇರ್ ರಫ್ತಿನಲ್ಲಿ ಕರ್ನಾಟಕ ಶೇಕಡಾ 40ರಷ್ಟು ಪಾಲು ಹೊಂದಿದೆ ಎಂದು ಅವರು ಹೇಳಿದರು.
2.5 ಲಕ್ಷ ಗ್ರಾಮ ಪಂಚಾಯಿತಿಗೆ ವೈ ಫೈ ಸಿಗುತ್ತಂತೆ!












Click it and Unblock the Notifications