ಜಿ ಪರಮೇಶ್ವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ
ಬೆಂಗಳೂರು, ಅಕ್ಟೋಬರ್ 10: ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿರುವ ಅವರ ನಿವಾಸ ಹಾಗೂ ತುಮಕೂರಿನ ಮರಳೂರಿನಲ್ಲಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಹಾಗೂ ಡಿಗ್ರಿ ಕಾಲೇಜಿನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆರು ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಆರ್.ಎಲ್.ಜಾಲಪ್ಪ ಆಸ್ಪತ್ರೆ ಸಮೂಹದ ಮೇಲೆ ಐಟಿ ದಾಳಿ
ಐಟಿ ದಾಳಿಗೆ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದೆ ನಡೆಯಲಿ ಸಂತೋಷ, ಏನಾದರೂ ತಪ್ಪುಗಳಿದ್ದರೆ ತಿಳಿಸಲಿ, ದಾಳಿ ಮಾಡಬೇಡಿ ಎಂದು ಹೇಳಲು ಸಾಧ್ಯವಿಲ್ಲ, ಕಾನೂನನ್ನು ಮೀರಿ ಅಥವಾ ಮುಚ್ಚಿಟ್ಟು ಏನಾದರೂ ವ್ಯವಹಾರ ನಡೆಸಿದ್ದಲ್ಲಿ ಅವರೇ ಬಹಿರಂಗಪಡಿಸುತ್ತಾರೆ ಎಂದು ತಿಳಿಸಿದ್ದಾರೆ.
ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿರುವ ಕುರಿತು ಮಾಹಿತಿ ಬಂದಿದೆ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಕಾನೂನು ಬಾಹಿರವಾಗಿ ಏನಾದರೂ ನಡೆದಿದ್ದರೆ ಅಧಿಕಾರಿಗಳು ಕ್ರಮ ಜರುಗಿಸಲಿ ನಮ್ಮ ಅಭ್ಯಂತರವಿಲ್ಲ ಎಂದು ಪರಮೇಶ್ವರ ಹೇಳಿದ್ದಾರೆ.
ಅಷ್ಟೇ ಅಲ್ಲದೆ ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆ, ದೊಡ್ಡಬಳ್ಳಾಪುರದ ಸೋಮೇಶ್ವರ ನಗರದಲ್ಲಿರುವ ಮಗನ ಮನೆಯ ಮೇಲೂ ಐಟಿ ದಾಳಿ ನಡೆದಿದೆ.
ಬಿಜೆಪಿ ನಾಯಕರ ಮೇಲೆ ಯಾಕೆ ದಾಳಿ ನಡೆಯೊಲ್ಲ
ಕೇವಲ ಕಾಂಗ್ರೆಸ್ ನಾಯಕರ ಮನೆ ಮೇಲೆ ಮಾತ್ರ ಯಾಕೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ, ಬಿಜೆಪಿಯವರು ಯಾರೂ ತಪ್ಪು ಮಾಡಿಲ್ಲವೇ, ಅವರ ಮೇಲೆ ಯಾಕೆ ದಾಳಿ ಮಾಡುವುದಿಲ್ಲ ಇದು ಕೇವಲ ರಾಜಕೀಯ ದುರುದ್ದೇಶದಿಂದ ಕೂಡಿದ್ದು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಆರ್ಎಲ್ ಜಾಲಪ್ಪ ಮಗನ ಮನೆ ಮೇಲೂ ಐಟಿ ದಾಳಿ
ದೊಡ್ಡ ಬಳ್ಳಾಪುರದಲ್ಲಿರುವ ಆರ್ಎಲ್ ಜಾಲಪ್ಪ ಅವರ ಮಗನ ಮನೆಯ ಮೇಲೂ ಐಟಿ ದಾಳಿ ನಡೆದಿದೆ. ಅಷ್ಟೇ ಅಲ್ಲದೆ ಕೋಲಾರದಲ್ಲಿರುವ ಆರ್ಎಲ್ ಜಾಲಪ್ಪ ಆಸ್ಪತ್ರೆ ಮೇಲೂ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಿಕೆ ಶಿವಕುಮಾರ್ ಮನೆ ಮೇಲೂ ಐಟಿ ದಾಳಿ ನಡೆದಿತ್ತು
2017ರಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಮನೆಯ ಮೇಲೂ ಐಟಿ ದಾಳಿ ನಡೆದಿತ್ತು. ಡಿಕೆ ಶಿವಕುಮಾರ್ ಅವರ ಮಾವನ ಮೈಸೂರಿನ ಮನೆ, ಆಪ್ತ ದ್ವಾರಕನಾಥ್ ಹಾಗೂ ಸದಾಶಿವನಗರದಲ್ಲಿರುವ ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ರಾತ್ರಿಯೂ ಮನೆಯಿಂದ ಹೊರಬರಲಿಲ್ಲ. ಮನೆಗೇ ಸಹಾಯಕರ ಮೂಲಕ ಊಟ ತರಿಸಿಕೊಂಡು ಅಲ್ಲೇ ವಾಸ್ತವ್ಯ ಹೂಡಿದ್ದರು.
ಪರಮೇಶ್ವರ ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ
ಡಾ. ಜಿ ಪರಮೇಶ್ವರ ನಿವಾಸ ಹಾಗೂ ತುಮಕೂರಿನ ಪರಳೂರಿನಲ್ಲಿರುವ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜು, ಡಿಗ್ರಿ ಕಾಲೇಜು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.