Jagadish Shettar Joins Congress: ಶೆಟ್ಟರ್ ಕರೆತರಲು ವಿಶೇಷ ವಿಮಾನ ಕಳುಹಿಸಿದ ಕೆಪಿಸಿಸಿ ಅಧ್ಯಕ್ಷರು
ಬೆಂಗಳೂರು, ಏಪ್ರಿಲ್ 16: ವಿಧಾನಸಭಾ ಚುನಾವಣೆ 2023ರ ಟಿಕೆಟ್ ಕೈ ತಪ್ಪುತ್ತಿದ್ದಂತೆ ಬಂಡಾಯವೆದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಭಾನುವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಈ ಸಂಬಂಧ ಶೆಟ್ಟರ್ ಅವರನ್ನು ಕರೆತರಲು ಕಾಂಗ್ರೆಸ್ ನಾಯಕರು ವಿಶೇಷ ವಿಮಾನವನ್ನು ರವಾನಿಸಿದ್ದಾರೆ.
ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಆಘಾತ ನೀಡಿದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಪ್ರತಿನಿಧಿಸುವ ಶಾಸಕ ಜಗದೀಶ್ ಶೆಟ್ಟರ್ ಅವರನ್ನು ಕರೆತರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹುಬ್ಬಳ್ಳಿಗೆ ವಿಶೇಷ ವಿಮಾನವೊಂದನ್ನು ಕಳುಹಿಸಿದ್ದಾರೆ.

ಉದ್ಯಮಿಯು ಆದ ಹಾಗೂ ಕೆಪಿಸಿಸಿ ಸದಸ್ಯರು ಆಗಿರುವ ಯು.ಬಿ.ಶೆಟ್ಟಿ ಅವರ ನೇತೃತ್ವದಲ್ಲಿ ವಿಶೇಷ ವಿಮಾನವು ಇನ್ನೇನು ಕೆಲವೇ ಕ್ಷಣಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ನ ಕೆಲವು ಮುಖಂಡರು ಶೆಟ್ಟರ್ ಅವರು ಶಿರಸಿಯಿಂದ ಬರುವುದನ್ನೆ ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಸದಸ್ಯರಾದ ರಾಬರ್ಟ್ ದದ್ದಾಪುರಿ ಅವರು ಹೇಳಿದರು.

ಶಿರಸಿಯಲ್ಲಿರುವ ಜಗದೀಶ್ ಶೆಟ್ಟರ್ ಅವರು ಅಲ್ಲಿಂದ ಹುಬ್ಬಳ್ಳಿಗೆ ಬಂದು ನಂತರ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ನ ಪ್ರಮುಖ ಮುಖಂಡರನ್ನು ಅವರು ಭೇಟಿ ಮಾಡಲಿದ್ದಾರೆ. ನಂತರ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಭಾವುಟ ಹಿಡಿದು ತಮ್ಮ ಪಕ್ಷ ಸೇರ್ಪಡೆಯನ್ನು ಅಧಿಕೃತಗೊಳಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಶಿರಸಿಯಿಂದ ಬರುತ್ತಿರುವ ಶೆಟ್ಟರ್
ಬಿಜೆಪಿಯಿಂದಲೇ ಸತತವಾಗಿ ಆರಿಸಿ ಬಂದಿದ್ದ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಲು ನಿರ್ಧರಿಸಿದ ಬಳಿಕ ಪಕ್ಷದ ಮುಖಂಡರು ಸಭೆ ನಡೆಸಿದರು. ಶನಿವಾರ ಹುಬ್ಬಳ್ಳಿಯ ಶೆಟ್ಟರ್ ಮನೆಯಲ್ಲಿ ಸಂಧಾನ ಮಾತುಕತೆ ನಡೆದಿದೆ. ಆ ಸಭೆ ವಿಫಲವಾದ ನಂತರ ಸುದ್ದಿಗೋಷ್ಠಿ ನಡೆಸಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿಯೇ ತಿರುತ್ತೇನೆ ಎಂದು ಪ್ರಕಟಿಸಿದ್ದಾರೆ.
ಭಾನುವಾರ ಬೆಳಗ್ಗೆ ಶಿರಸಿಗೆ ತೆರಳಿರುವ ಶೆಟ್ಟರ್ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ. ಸಭಾಧ್ಯಕ್ಷರ ಜೊತೆಗೆ ಒಂದಷ್ಟು ಮಾತುಕತೆ ಆಗಿದೆ ಎನ್ನಲಾಗಿದೆ. ಬಳಿಕ ಉದ್ದೇಶದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಜಗದೀಶ್ ಶೆಟ್ಟರ್ ಅವರ ಪಕ್ಷಾಂತರ ನಿರ್ಧಾರ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ.
ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಕ್ಷೇತ್ರದಲ್ಲಿ ಬಲ
ಬಿಜೆಪಿ ಪಕ್ಷ ಟಿಕೆಟ್ ವಿಚಾರದಲ್ಲಿ ನಡೆದುಕೊಂಡ ರೀತಿಯೇ ಶೆಟ್ಟರ್ ಮುನಿಸಿಗೆ ಕಾರಣವಾಗಿದೆ. ಪಕ್ಷಾಂತರಕ್ಕೂ ಅದೇ ಕಾರಣವಾಗಿದೆ. ಇದರ ಬೆನ್ನಲ್ಲೆ ಕಾಂಗ್ರೆಸ್ ಸೇರ್ಪಡೆ ಖಚಿತವಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ವಿಶೇಷ ವಿಮಾನವನ್ನು ಕಳುಹಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಸೇರ್ಪಡೆ ಮನಸ್ಸನ್ನು ಅತ್ತಿತ್ತ ವಾಲದಂತೆ ನೋಡಿಕೊಳ್ಳಲಾಗುತ್ತಿದೆ. ಎಷ್ಟು ಸಾಧ್ಯವೋ ಅಷ್ಟು ಬೇಗ ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡು ಬಡಿಬೇಕು ಎಂಬ ಅವಸರ ಕೆಪಿಸಿಸಿ ಅಧ್ಯಕ್ಷರಲ್ಲಿ ಕಾಣಬಹುದಾಗಿದೆ.
ಶೆಟ್ಟರ್ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವ ಕುದುರೆ. ಅವರು ಸತತವಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಅವರ ಪಕ್ಷ ಸೇರ್ಪಡೆಯಿಂದ ಆ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಸಾಧ್ಯವಾಗುತ್ತದೆ. ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಇಲ್ಲಿ ಬಲ ಬರಲಿದೆ ಎಂಬುದು ಕೆಪಿಸಿಸಿ ಅಧ್ಯಕ್ಷರ ಲೆಕ್ಕಾಚಾರವಾಗಿದೆ.












Click it and Unblock the Notifications