ದೇವನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಜಗದೀಶ್ ಶೆಟ್ಟರ್ ದಿಢೀರ್ ಭೇಟಿ
ಬೆಂಗಳೂರು ಜನವರಿ 04: ಪರಿಹಾರ ಧನ ನೀಡಲು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ. CETUM, WIPRO, SHELL ಸೇರಿದಂತೆ ಹಲವಾರು ಏರೋಸ್ಪೇಸ್ ಕೈಗಾರಿಕೆಗಳಿಗೂ ಭೇಟಿ ನೀಡಿ ಅಭಿವೃದ್ದಿ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಹರಳೂರು ಮುದ್ದೇನಹಳ್ಳಿಯಲ್ಲಿನ ರಕ್ಷಣಾ, ಏರೋಸ್ಪೇಸ್ ಹೈ ಟೆಕ್ ಇಂಡಸ್ಟ್ರಿ ಲೇಔಟ್ ಕೈಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಈ ಎಚ್ಚರಿಕೆ ನೀಡಿದ್ದಾರೆ.
ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆಂದು ಹಲವಾರು ರೈತರಿಂದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇಂತಹ ರೈತರಿಗೆ ಪರಿಹಾರ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪರಿಹಾರ ಬಿಡುಗಡೆಗೆ ಅಧಿಕಾರಿಗಳು ಲಂಚಕ್ಕೆ ಕೈಚಾಚಿದರೆ ಅಂತಹ ಅಧಿಕಾರಿಗಳ ವಿರುದ್ಧ ದೂರು ನೀಡಿ. ತಕ್ಷಣವೇ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಲೂಕಿನ ಹರಳೂರು, ಪೋಲನಹಳ್ಳಿ, ಮುದ್ದೇನಹಳ್ಳಿ ಸೇರಿದಂತೆ ಹಲವು ಕಡೆ ದಿಢೀರ್ ಭೇಟಿ ನೀಡಿದ ಸಚಿವರು ಇಲ್ಲಿನ ರೈತರೊಂದಿಗೆ ಮಾತುಕತೆ ನಡೆಸಿದರು. ಪರಿಹಾರ ವಿತರಣೆಯಲ್ಲಿ ಯಾವುದಾದರೂ ಲೋಪವಾಗುತ್ತಿದೆಯೇ ಎಂಬುದರ ಬಗ್ಗೆ ಮಾಹಿತಿ ಪಡೆದರು.
ನೂತನ ಕೈಗಾರಿಕಾ ಪ್ರದೇಶಕ್ಕೆಂದು ಸರ್ಕಾರ 1800 ಎಕರೆ ಪ್ರದೇಶವನ್ನ ಸ್ವಾಧಿನಪಡಿಸಿಕೊಂಡಿದೆ. ಇಲ್ಲಿ ಹಲವು ಬಗೆಯ ಕೈಗಾರಿಕೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಕೈಗಾರಿಕಾ ಪ್ರದೇಶಗಳು ಅಭಿವೃದ್ಧಿ ಹೊಂದಿದರೆ ಉದ್ಯೋಗ ಸೃಷ್ಟಿಯಾಗುತ್ತವೆ. ಇಲ್ಲಿ ರೈತರ ಮಕ್ಕಳಿಗೆ ಉದ್ಯೋಗ ಲಭಿಸುತ್ತದೆ. ಕೈಗಾರಿಕೆಗೆಂದು ಭೂಮಿ ಕೊಟ್ಟಿರುವ ರೈತರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರಗಳನ್ನು ಸೂಚಿಸಬೇಕು ಎಂದು ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿರುವುದರಿಂದ ದೇಶ ವಿದೇಶಗಳ ಉದ್ಯಮಿಗಳು ಬಂಡವಾಳ ಹೂಡಿಕೆಗೆ ಮುಂದಾಗುತ್ತಿದ್ದಾರೆ. ಇದಲ್ಲದೇ, ದೇವನಹಳ್ಳಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಇರುವುದರಿಂದ ಈ ಪ್ರದೇಶ ಮತ್ತಷ್ಟು ಅಭಿವೃದ್ಧಿ ಕಾಣಲಿದೆ ಎಂದು ಹೇಳಿದರು.












Click it and Unblock the Notifications