ಜಯ ಕರ್ನಾಟಕ ಸಂಘಟನೆಯ ಸ್ಥಾಪಕ ಮುತ್ತಪ್ಪ ರೈ ನಿಧನ
ಬೆಂಗಳೂರು, ಮೇ 15: ಜಯ ಕರ್ನಾಟಕ ಸಂಘಟನೆಯ ಸ್ಥಾಪಕ, ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ (68) ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ.
Recommended Video
ಕಳೆದ ಎರಡು ವರ್ಷದಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಮುತ್ತಪ್ಪ ರೈ ಒಂದು ವಾರದ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪಾಪಿಗಳ ಲೋಕದಲ್ಲಿ: ಮುತ್ತಪ್ಪ ರೈ ಯಾರು?
ಇಂದು ಸಂಜೆ 4 ಗಂಟೆಗೆ ರಾಮನಗರ ತಾಲೊಕಿನ ಬಿಡದಿಯಲ್ಲಿರುವ ಸ್ವಗ್ರಾಮದಲ್ಲಿ ಮುತ್ತಪ್ಪ ರೈ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೊರೊನಾ ಭೀತಿ ಇರುವ ಹಿನ್ನೆಲೆ ಕೇವಲ ಕುಟುಂಬಸ್ಥರಿಗೆ ಮಾತ್ರ ಅಂತ್ಯಕ್ರಿಯೆ ಭಾಗಿಯಾಗಲು ಅವಕಾಶ ನೀಡಲಾಗಿದೆ.
ಸಂಘಟನೆ ಕಾರ್ಯಕರ್ತರು ಸೇರುವ ನಿರೀಕ್ಷೆಯಿಂದ ಸದ್ಯ, ಮಣಿಪಾಲ್ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. ಅಂದ್ಹಾಗೆ, ಮುತ್ತಪ್ಪರೈ ಅವರಿಗೆ ಇಬ್ಬರು ಮಕ್ಕಳು, ಮೂವರು ಸಹೋದರರು ಹಾಗೂ ಒಬ್ಬ ಸಹೋದರಿ ಇದ್ದಾರೆ.
ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ನ ನಿಕಟಪೂರ್ವ ಅಧ್ಯಕ್ಷರೂ ಆಗಿರುವ ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದರು.
ಕಳೆದ ಎರಡು ವರ್ಷದಿಂದ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮುತ್ತಪ್ಪ ರೈ ನವದೆಹಲಿ, ಚೆನ್ನೈ, ಬೆಂಗಳೂರು ಸೇರಿದಂತೆ ವಿವಿಧ ಕಡೆ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸೆ ಪಡೆದಿದ್ದರು. ಲಿವರ್ ಕ್ಯಾನ್ಸರ್ ಗುಣವಾಯಿತು. ಆದರೆ ಮೆದುಳಿನಲ್ಲಿ ಕ್ಯಾನ್ಸರ್ ಗಡ್ಡೆ ತೀವ್ರವಾಗಿ ಕಾಡಿತ್ತು.