ಜಯಲಲಿತಾ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಪಿಐಎಲ್
ಬೆಂಗಳೂರು, ಅ.10 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜೆ.ಜಯಲಲಿತಾ ಅವರ ಶಿಕ್ಷೆಯನ್ನು ತಡೆಹಿಡಿಯಬೇಕು ಎಂದು ತಮಿಳುನಾಡಿನ ನಿವಾಸಿಯೊಬ್ಬರು ಕರ್ನಾಟಕ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದಾರೆ. ಕೋರ್ಟ್ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಲಿದೆ.
ತಮಿಳುನಾಡಿನ ನಿವಾಸಿಯಾದ ಬಿ.ಆರ್. ಸತ್ಯನಾರಾಯಣ ಎಂಬುವವರು ಗುರುವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಸಲ್ಲಿಸಿದ್ದು, ಜಯಲಲಿತಾ ಅವರ ಬಂಧನದಿಂದಾಗಿ ತಮಿಳುನಾಡಿನಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಭಾವಾನಾತ್ಮಕ ಬಿಕ್ಕಟ್ಟು ಏರ್ಪಟ್ಟಿದೆ. ಆದ್ದರಿಂದ ಜಯಲಲಿತಾ ಅವರಿಗೆ ವಿಶೇಷ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ತಡೆಹಿಡಿಯಬೇಕು ಎಂದು ಮನವಿ ಮಾಡಿದ್ದಾರೆ. [ಜಯಾ ಸುಪ್ರೀಂಗೆ ಮೊರೆ, ಸೋಲೊಪ್ಪಿಕೊಂಡ ರಾಮ್?]

ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ನ್ಯಾ.ಆರ್.ಬಿ ಬೂದಿಹಾಳ್ ಅವರಿದ್ದ ವಿಭಾಗೀಯ ಪೀಠ, ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವ್ಯಾಪ್ತಿಗೆ ಬರುವುದಿಲ್ಲ. ಆದ್ದರಿಂದ ಮೊದಲು ಅರ್ಜಿಯ ಮಾನ್ಯತೆ ಕುರಿತು ಪೀಠಕ್ಕೆ ಮನವರಿಕೆ ಮಾಡಿಕೊಡುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದರು. ಅರ್ಜಿದಾರರ ಪರ ವಕೀಲರು ಒಂದು ದಿನದ ಕಾಲಾವಕಾಶವನ್ನು ಕೋರಿದ್ದು, ಶುಕ್ರವಾರಕ್ಕೆ ಅರ್ಜಿಯ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿಗಳು ಮುಂದೂಡಿದ್ದಾರೆ. [ಪಶ್ಚಾತ್ತಾಪ ಪಡಲು ನಾನೇನು ತಪ್ಪು ಮಾಡಿಲ್ಲ]
ಸುಪ್ರೀಂಗೆ ಮನವಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಯಲಲಿತಾ ಗುರುವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ಅರ್ಜಿಯನ್ನು ಸಲ್ಲಿಕೆ ಮಾಡಿದ್ದು, ಈ ಅರ್ಜಿಯನ್ನು ಶುಕ್ರವಾರವೇ ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳಬೇಕು ಎಂಬ ಕೋರಿಕೆಯನ್ನೂ ಇಟ್ಟಿದ್ದಾರೆ. [ಅಮ್ಮ ತಮಿಳುನಾಡಿಗೆ ಸ್ಥಳಾಂತರ?]
ಬೆಂಗಳೂರಿನ ವಿಶೇಷ ನ್ಯಾಯಾಲಯ ತಮಗೆ ಕೇವಲ ನಾಲ್ಕು ವರ್ಷ ಶಿಕ್ಷೆ ವಿಧಿಸಿದೆ. ಅಲ್ಲದೆ ತಾವು ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಜಾಮೀನು ನೀಡಬೇಕು ಎಂದು ಜಯಲಲಿತಾ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಆದ್ದರಿಂದ ಇಂದು ಜಯಲಲಿತಾ ಅವರ ಎರಡು ಅರ್ಜಿಗಳ ವಿಚಾರಣೆ ನಡೆಯುವ ಸಾಧ್ಯತೆ ಇದೆ.












Click it and Unblock the Notifications