ಆರ್. ಆರ್. ನಗರ ಉಪ ಚುನಾವಣೆ; ಜೆಡಿಎಸ್ ಮಹತ್ವದ ಘೋಷಣೆ
ಬೆಂಗಳೂರು, ಮೇ 22 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಆದರೆ, ರಾಜಕೀಯ ಪಕ್ಷಗಳು ಸದ್ದಿಲ್ಲದೇ ತಯಾರಿಯಲ್ಲಿ ತೊಡಗಿವೆ. 2018ರ ಚುನಾವಣೆಯಲ್ಲಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮುನಿರತ್ನ ಅನರ್ಹಗೊಂಡಿದ್ದು, ಕ್ಷೇತ್ರಕ್ಕೆ ಶಾಸಕರು ಇಲ್ಲ.
Recommended Video
ಆರ್. ಆರ್. ನಗರ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಬೆಂಗಳೂರು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಸ್ಪಷ್ಟನೆಯೊಂದನ್ನು ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು.
ಫೇಸ್ಬುಕ್ನಲ್ಲಿ ಆರ್. ಆರ್. ನಗರ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿಯಾಗಿ ಹನಮಂತರಾಯಪ್ಪ ಕಣಕ್ಕಿಳಿಯಲಿದ್ದಾರೆ ಎಂಬ ಪೋಸ್ಟ್ಗಳು ಹರಿದಾಡುತ್ತಿವೆ. ಇದು ಸುಳ್ಳು ಸುದ್ದಿ ಎಂದು ಆರ್. ಪ್ರಕಾಶ್ ಸ್ಪಷ್ಟನೆ ಕೊಟ್ಟಿದ್ದಾರೆ.
ಆರ್. ಆರ್. ನಗರ ಕ್ಷೇತ್ರದ 2018ರ ಚುನಾವಣಾ ಫಲಿತಾಂಶದ ಕುರಿತು ಕರ್ನಾಟಕ ಹೈಕೋರ್ಟ್ನಲ್ಲಿ ತರಕಾರು ಅರ್ಜಿ ಸಲ್ಲಿಕೆಯಾಗಿತ್ತು. ಆದ್ದರಿಂದ, ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿರಲಿಲ್ಲ.

ಕಾರ್ಯಕರ್ತರಿಗೆ ಕರೆ
'ಆರ್. ಆರ್. ನಗರ ಕ್ಷೇತ್ರದ ಉಪ ಚುನಾವಣೆ ವಿಷಯವಾಗಿ ಕೆಲವು ಕಿಡಿಗೇಡಿಗಳು ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿಯಾಗಿ ಹನುಮಂತರಾಯಪ್ಪ ಕಣಕ್ಕಿಳಿಯಲಿದ್ದಾರೆ ಎಂದು ಅಪ ಪ್ರಚಾರ ಮಾಡುತ್ತಿದ್ದಾರೆ. ಕಾರ್ಯಕರ್ತರು ಈ ರೀತಿಯ ಗೊಂದಲಕ್ಕೆ ಒಳಗಾಗಬಾರದು' ಎಂದು ಆರ್. ಪ್ರಕಾಶ್ ಸ್ಪಷ್ಟನೆ ನೀಡಿದ್ದಾರೆ.

ಗೊಂದಲಕ್ಕೆ ಒಳಗಾಗಬೇಡಿ
'ಜೆಡಿಎಸ್ ಪಕ್ಷದ ವರಿಷ್ಠರು, ಕಾರ್ಯಕರ್ತರೊಡನೆ ಸಮಾಲೋಚಿಸಿ ಸೂಕ್ತ ಅರ್ಹ ಅಭ್ಯರ್ಥಿಯನ್ನು ಉಪಚುನಾವಣೆ ಕಣಕ್ಕೆ ಆಯ್ಕೆ ಮಾಡಲಿದ್ದು, ಕಾರ್ಯಕರ್ತರುಗಳ ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗಬಾರದು' ಎಂದು ಆರ್. ಪ್ರಕಾಶ್ ಮನವಿ ಮಾಡಿದ್ದಾರೆ.

2018ರಲ್ಲಿ ಯಾರು ಅಭ್ಯರ್ಥಿ?
ಆರ್. ಆರ್. ನಗರ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಕಣಕ್ಕಿಳಿದಿದ್ದರು. 60,360 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈ ಬಾರಿ ಉಪ ಚುನಾವಣೆಗೆ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.

ಮುನಿರತ್ನ ಗೆಲುವು
ಆರ್. ಆರ್. ನಗರದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದ ಮುನಿರತ್ನ 1 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯಿಂದ ಕಣಕ್ಕಿಳಿದಿದ್ದ ಮುನಿರಾಜು ಗೌಡ 82,573 ಮತಗಳನ್ನು ಪಡೆದು ಸೋಲು ಕಂಡಿದ್ದರು. ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈಗ ಮನಿರತ್ನ ಬಿಜೆಪಿಯಲ್ಲಿದ್ದಾರೆ.











Click it and Unblock the Notifications