ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ
ಬೆಂಗಳೂರು, ಜುಲೈ 15: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಜಾತ್ಯಾತೀಯ ಜನಾತದಳ (ಜೆಡಿಎಸ್) ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದಲ್ಲಿ ಶುಕ್ರವಾರ ಸಂಜೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕೋವಿಡ್ ಸೋಂಕಿಗೆ ತುತ್ತಾಗಿರುವ ಕಾರಣಕ್ಕೆ ಹೋಂ ಐಸೋಲೇಷನ್ನಲ್ಲಿರುವ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಮತ್ತು ಮಳೆ, ನೆರೆ ಕಾರಣಕ್ಕೆ ತಮ್ಮ ಕ್ಷೇತ್ರಗಳಲ್ಲಿಯೇ ಬೀಡುಬಿಟ್ಟಿರುವ ಪಕ್ಷದ ಎಲ್ಲ ಶಾಸಕರು ವರ್ಚುಯಲ್ ವೇದಿಕೆ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು.
ಹೆಚ್. ಡಿ. ದೇವೇಗೌಡ ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ಮೀಸಲು ಸೌಲಭ್ಯ ಕಲ್ಪಿಸಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ್ದರು. ಮೊದಲ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ರಾಷ್ಟ್ರಪತಿ ಆಗುತ್ತಿರುವುದು ಹೆಮ್ಮೆಯ ಸಂಗತಿ. ಇದು ದೇವೇಗೌಡರ ಆಶಯಕ್ಕೆ ಅನುಗುಣವಾಗಿದೆ. ದ್ರೌಪದಿ ಮುರ್ಮು ಅವರ ಹಿನ್ನೆಲೆ, ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿ ಇಟ್ಟುಕೊಂಡು ಅವರಿಗೆ ಬೆಂಬಲ ನೀಡಲಾಗುತ್ತಿದೆ. ಇದರಲ್ಲಿ ಆ ಪಕ್ಷ ಈ ಪಕ್ಷ ಎನ್ನುವ ಮಾತಿಲ್ಲ. ಅಭ್ಯರ್ಥಿಯನ್ನು ಮಾನದಂಡವಾಗಿಟ್ಟುಕೊಂಡು ಬೆಂಬಲ ಘೋಷಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ದೇವೇಗೌಡರ ಭೇಟಿ ಮಾಡಿದ್ದ ದ್ರೌಪದಿ ಮುರ್ಮು
ದ್ರೌಪದಿ ಮುರ್ಮು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ಜೆಡಿಎಸ್ ಪಕ್ಷದ ವರಿಷ್ಠರಾದ ಹೆಚ್. ಡಿ. ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಯಾಚಿಸಿದ್ದರು. ನಂತರ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಖುದ್ದು ದೇವೇಗೌಡರು ಹಾಗೂ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮತ ಕೇಳಿದ್ದರು. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಜೆಡಿಎಸ್ ತೀರ್ಮಾನ ಕೈಗೊಂಡಿದೆ ಎಂದು ಬಂಡೆಪ್ಪ ಕಾಶೆಂಪೂರ್ ಮಾಹಿತಿ ನೀಡಿದರು.
ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಮತ ಹಾಕುತ್ತೇವೆ ಎಂದು ಅವರು ತಿಳಿಸಿದರು.

ಫೋಟೊ, ವಿಡಿಯೋ ನಿಷೇಧಕ್ಕೆ ಜೆಡಿಎಸ್ ವಿರೋಧ
ಸರಕಾರಿ ಕಚೇರಿಯಲ್ಲಿ ಫೋಟೊ, ವಿಡಿಯೋ ನಿಷೇಧ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಂಡೆಪ್ಪ ಕಾಶೆಂಪೂರ್ ಅವರು, ನಾವು ಸರಿಯಾಗಿದ್ದರೆ ಫೋಟೊ ವಿಡಿಯೋಗೆ ಯಾಕೆ ಹೆದರಬೇಕು?. ಹೀಗೆ ನಿಷೇಧ ಮಾಡಿದರೆ 40 ಪರ್ಸೆಂಟ್ ಕಮಿಷನ್ ಆರೋಪ ನಿಜ ಆಗುತ್ತದೆ. ಸರಕಾರ ಪಾರದರ್ಶಕವಾಗಿ ಇದ್ದರೆ ಭಯ ಯಾಕೆ?. ಆ ಆದೇಶವನ್ನು ಕೂಡಲೇ ಸರಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜುಲೈ 17ರಂದು ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದ 'ಜನತಾಮಿತ್ರ' ಕಾರ್ಯಕ್ರಮವನ್ನು 10 ದಿನಗಳ ಕಾಲ ಮುಂದೂಡಲಾಗಿದೆ ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

ಜನರ ಉತ್ಸವ ಮಾಡುತ್ತೇವೆ ಎಂದ ಜೆಡಿಎಸ್
ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಂಡೆಪ್ಪ ಕಾಶೆಂಪೂರ್, "ನಾವು ಜನರ ಉತ್ಸವ ಮಾಡುತ್ತೇವೆ. ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಅಂತ ನಾವು ತೋರಿಸಿದ್ದೇವೆ. ನೀರಾವರಿ ವಿಚಾರದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ" ಎಂದರು.
"ರಾಜ್ಯದಲ್ಲಿ ಈಗ ಸುರಿಯುತ್ತಿರುವ ಮಳೆ ನೀರು ಸಮುದ್ರದ ಪಾಲಾಗುತ್ತಿದೆ. ನಮ್ಮ ದೃಷ್ಟಿ ಜನರ ಕಡೆಗೆ. ಹೀಗಾಗಿ ನಾವು ಯಾವುದೇ ಉತ್ಸವ ಮಾಡುವುದಿಲ್ಲ. ನಾವು ಜನರ ಉತ್ಸವ ಮಾಡಿದ್ದೇವೆ. ನಾವು ವೈಯಕ್ತಿಕ ಉತ್ಸವ ಮಾಡುವುದಿಲ್ಲ. ಜನರಿಗೆ ನಾವು ಏನು ಮಾಡುತ್ತೇವೆ ಎಂಬುದನ್ನು ಹೇಳಿ ಜನರ ಮುಂದೆ ಹೋಗುತ್ತೇವೆ" ಎಂದು ಹೇಳಿದರು.

ಬಿಜೆಪಿಯವರು ಹೆದರಿ ಸಭೆ ಮಾಡುತ್ತಿದ್ದಾರೆ
"ಡಿಸೆಂಬರ್ನಲ್ಲಿ ಚುನಾವಣೆ ನಡೆಯಬಹುದು ಎಂದು ಹೇಳುತ್ತಿದ್ದಾರೆ. ನಾವು ಚುನಾವಣಾ ತಯಾರಿಯಲ್ಲಿ ತೊಡಗಿದ್ದೇವೆ. ಬಿಜೆಪಿಯವರು ಗಾಬರಿಯಾಗಿ, ಎಲ್ಲೆಲ್ಲೂ ಹೋಗಿ ಸಭೆ ಮಾಡುತ್ತಿದ್ದಾರೆ. ನಮಗೆ ಯಾವುದೇ ಭಯ ಇಲ್ಲ, ಯಾಕೆಂದರೆ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದ್ದಾರೆ. ಹಾಗಾಗಿ ಡಿಸೆಂಬರ್ನಲ್ಲೇ ಚುನಾವಣೆ ಆಗಲಿ, ಯಾವಾಗಲೇ ಆದರೂ ಚುನಾವಣೆ ಎದುರಿಸಲು ನಾವು ಸಿದ್ದರಿದ್ದೇವೆ" ಎಂದು ಹೇಳಿದರು.












Click it and Unblock the Notifications