ನಾಳೆಯಿಂದ ಜೆಡಿಎಸ್ 'ಜನತಾ ಸಂಗಮ': ಮಾಜಿ ಪ್ರಧಾನಿ ದೇವೇಗೌಡ ಉಪಸ್ಥಿತಿ
ಬೆಂಗಳೂರು, ನವೆಂಬರ್ 07: ಮುಂದಿನ ಚುನಾವಣೆ ಸಿದ್ಧತೆಯೂ ಸೇರಿದಂತೆ ಪಕ್ಷವನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಸಲುವಾಗಿ ನಾಳೆಯಿಂದ (ನವೆಂಬರ್ 8-15) ಒಂದು ವಾರದ ಕಾಲ ಜನತಾ ಪರ್ವ 1.0 ಎರಡನೇ ಹಂತದ ಕಾರ್ಯಗಾರ 'ಜನತಾ ಸಂಗಮ' ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಈ ಕಾರ್ಯಾಗಾರ ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ನಡೆಯಲಿದ್ದು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಕೆ.ಕುಮಾರಸ್ವಾಮಿ, ಪಕ್ಷದ ಶಾಸಕರು, ಮಾಜಿ ಶಾಸಕರು ಸೇರಿದಂತೆ ಅನೇಕ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ಮುಖ್ಯವಾಗಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಕಾರ್ಯಾಗಾರದ ಮೊದಲ ದಿನ ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರು ಪಕ್ಷದ ಮಾಸಪತ್ರಿಕೆ 'ಜನತಾ ಪತ್ರಿಕೆ'ಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ದಿನ ಒಂದಕ್ಕೆ ಎರಡು ಜಿಲ್ಲೆಗಳನ್ನು ಒಳಗೊಂಡಂತೆ ಸಭೆಗಳನ್ನು ನಡೆಸಲಾಗುವುದು. ಈ ಸಭೆಯಲ್ಲಿ ಮುಂದಿನ ಚುನಾವಣಾ ಸಿದ್ಧತೆ ಸಂಬಂಧ ಚರ್ಚಿಸಲಿದ್ದೇವೆ. ಮೊದಲ ದಿನ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಲಾಗುವುದು ಹಾಗೂ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ ಅಭ್ಯರ್ಥಿಗಳು ಹಾಗೂ ಮುಖಂಡರು, ಕಾರ್ಯಕರ್ತರ ನಡುವೆ ಸಮನ್ವಯತೆ ಸಾಧಿಸುವುದು ಈ ಕಾರ್ಯಾಗಾರದ ಬಹುಮುಖ್ಯ ಉದ್ದೇಶವಾಗಿದೆ ಎಂದು ಅವರು ಮಾಹಿತಿ ನೀಡಿದರು.
ʼಜನತಾ ಪತ್ರಿಕೆʼಯನ್ನು ನಾಡಿನ ಆಸ್ಮಿತೆಗೆ ಸಂಬಂಧಪಟ್ಟ ವಿಚಾರಗಳ ಜತೆಗೆ ರಾಷ್ಟ್ರಕ್ಕೆ ಸಂಬಂಧಿಸಿದ ವಿಚಾರಗಳನ್ನು ಒಳಗೊಂಡಿರುತ್ತದೆ. ಜತೆಗೆ, ಸಮಾಜ ಹಾಗೂ ಜನರ ಸಂಕಷ್ಟಗಳಿಗೆ ಮಿಡಿಯುವ ದನಿಯಾಗಿರುತ್ತದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
ಕಾರ್ಯಾಗಾರಕ್ಕೆ ಭರದ ಸಿದ್ಧತೆ:
ಕಾರ್ಯಾಗಾರಕ್ಕಾಗಿ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಏಳು ದಿನಗಳ ಕಾರ್ಯಾಗಾರವು ಅರ್ಥಪೂರ್ಣವಾಗಿ ಎಲ್ಲ ಕ್ರಮಗಳನ್ನೂ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ನ.8ರಂದು ಚಿಕ್ಕಬಳ್ಳಾಪುರ-ಕೋಲಾರ; 9ರಂದು ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ, ಬೀದರ್, ಯಾದಗಿರಿ, ಕಲಬುರಗಿ; 10ರಂದು ಧಾರವಾಡ, ಹುಬ್ಬಳ್ಳಿ-ಧಾರವಾಡ ನಗರ, ಉತ್ತರ ಕನ್ನಡ, ಗದಗ, ಹಾವೇರಿ, ದಾವಣಗೆರೆ; 11ರಂದು ವಿಜಯಪುರ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಕೊಡಗು; 12ರಂದು ಚಾಮರಾಜನಗರ, ಮಂಡ್ಯ, ಮೈಸೂರು, ಮೈಸೂರು ನಗರ; 13ರಂದು ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ತುಮಕೂರು; 15ರಂದು ಬೆಳಗಾವಿ, ಚಿಕ್ಕೋಡಿ, ಹಾಸನಕ್ಕೆ ಸಂಬಂಧಪಟ್ಟ ಸಭೆಗಳು ನಡೆಯಲಿವೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
(ಒನ್ಇಂಡಿಯಾ ಸುದ್ದಿ)












Click it and Unblock the Notifications