BJP-JDS Alliance: ಮೋದಿ ಜೊತೆಗಿನ ಅಂದಿನ ಸತ್ಯವನ್ನು ಮೊದಲ ಬಾರಿಗೆ ಬಹಿರಂಗ ಪಡಿಸಿದ ದೇವೇಗೌಡ್ರು
ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಬಗ್ಗೆ ಇದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಬಿಜೆಪಿ - ಜೆಡಿಎಸ್ ಮೈತ್ರಿ ಖಚಿತವಾಗಿದ್ದು, ಹೆಚ್ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರೇ ಈ ಬಗ್ಗೆ ಖಚಿತಪಡಿಸಿದ್ದಾರೆ.
ಕೆಲ ದಿನಗಳ ಹಿಂದೆ ನಾನು ದೆಹಲಿಗೆ ಹೋಗಿದ್ದೂ ನಿಜ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೂ ನಿಜ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದ್ದರೆ. ಇನ್ನು ಕೆಲ ದಿನಗಳಲ್ಲಿಯೇ ಕರ್ನಾಟಕದಲ್ಲಿ ಹೊಸ ರಾಜಕೀಯ ಅಧ್ಯಾಯ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳುವ ಮೂಲಕ ಮೈತ್ರಿಯನ್ನು ಖಚಿತಪಡಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಪ್ರೀತಿ, ವಿಶ್ವಾಸ ಇದೆ. 2018ರಲ್ಲಿಯೇ ದೆಹಲಿಯಲ್ಲಿ ಒಮ್ಮೆ, "ಈ ಕೂಡಲೇ ರಾಜೀನಾಮೆ ನೀಡಿ. ನಾಳೆಯೇ ಹೊಸದಾಗಿ ಪ್ರಮಾಣ ಸ್ವೀಕಾರ ಮಾಡಿ. ಬಿಹಾರದ ನಿತೀಶ್ ಕುಮಾರ್ ಅವರಂತೆ ನಿಮ್ಮನ್ನೂ ದೀರ್ಘಾವಧಿ ಮುಖ್ಯಮಂತ್ರಿಯನ್ನಾಗಿ ಮಾಡುವುದು ನನ್ನ ಜವಾಬ್ದಾರಿ ಎಂದು ಹೇಳಿದ್ದರು. ಆದರೆ, ನನ್ನನ್ನು ನೋಡಿಕೊಂಡು ಕುಮಾರಸ್ವಾಮಿ ಅವರು ಮೋದಿ ಅವರ ಆಫರ್ ಅನ್ನು ನಯವಾಗಿ ತಿರಸ್ಕರಿಸಿದ್ದರು." ಎನ್ನುವ ವಿಚಾರವನ್ನು ಹೇಳಿದ್ದಾರೆ.
ಪಕ್ಷ ಉಳಿಸಲು ಮೈತ್ರಿ
ಕೆಲವು ದಿನಗಳಿಂದ ಚರ್ಚೆ ನಡೆಯುತ್ತಿದೆ. ಜೆಡಿಎಸ್ ಎಲ್ಲಿದೆ? 28 ಸ್ಥಾನಗಳಲ್ಲಿ ಕನಿಷ್ಠ 24 ಸ್ಥಾನಗಳನ್ನು ನಾವೇ ಗೆಲ್ಲುತ್ತೇವೆ. 4 ಸ್ಥಾನಗಳು ಬಿಜೆಪಿಗೆ ಹೋಗಬಹುದು, ಜೆಡಿಎಸ್ ಎಲ್ಲಿದೆ ಎಂಬ ಚರ್ಚೆ 3 ದಿನಗಳಿಂದ ನಡೆಯುತ್ತಿದೆ. ಅದಕ್ಕೆ ಉತ್ತರ ಕೊಡುವ ಕಾಲ ಬಂದಿದೆ ಎಂದರು.
ಹೊಸ ಮೈತ್ರಿ ಮಾತುಕತೆಯ ನೈತಿಕತೆ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ನಾನು ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದೆ ಎನ್ನುವುದರಲ್ಲಿ ರಹಸ್ಯ ಏನೂ ಇಲ್ಲ. ಆದರೆ, ನೈತಿಕತೆ ಬಗ್ಗೆ ಮಾತನಾಡುವ ರಾಜ್ಯದ ಯಾವ್ಯಾವ ನಾಯಕರಿಗೆ ಅದೆಷ್ಟು ನೈತಿಕತೆ ಇದೆ ಎಂದು ನಾನು ವಿಶ್ಲೇಷಣೆ ಮಾಡಬಲ್ಲೆ. ಆದರೆ, ವ್ಯಕ್ತಿಗತ ನಿಂದನೆ ಮಾಡುವುದು ನನ್ನ ಉದ್ದೇಶ ಅಲ್ಲ, ಈ 91ನೇ ವಯಸ್ಸಿನಲ್ಲಿ ಅಂಥ ನಿಂದನೆಯಿಂದ ನಾನೇನು ಸಾಧಿಸ್ತೀನಿ ಎಂದು ಪ್ರಶ್ನೆ ಮಾಡಿದ್ದಾರೆ.
ಮೋದಿ ಅವರು ಕುಮಾರಸ್ವಾಮಿಯವರನ್ನು ಕರೆದು, "ನೀನು ರಾಜೀನಾಮೆ ಕೊಡು, ನೀನು ಬದುಕಿರೋವರೆಗೂ ನಿನ್ನ ಸಿಎಂ ಮಾಡ್ತೀನಿ" ಎಂದು ಹೇಳಿದ್ದರು. ಹೇಗೆ ನಿತೀಶ್ ಕುಮಾರ್ ಅವರನ್ನು ಸಿಎಂ ಆಗಿ ಮಾಡಿದ್ದೆನೋ ಅದೇ ರೀತಿ ನಿನ್ನನ್ನೂ ಸಿಎಂ ಮಾಡ್ತೀನಿ ಅಂದರು. ಆದರೆ, ನಮ್ಮ ತಂದೆಗೆ ನೋವು ಕೊಡೊಲ್ಲ ಎಂದು ವಾಪಸ್ ಬಂದರು. ಅವರ ಆರೋಗ್ಯ ಕೆಟ್ಟಿದೆ ಎಂದು ವಾಪಸ್ ಬಂದರು. ಆಗ ಎಲ್ಲಿದ್ದರು ಕಾಂಗ್ರೆಸ್ನವರು? ಎಲ್ಲಿದ್ದರು ಅವರು? ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದವರು ಎಲ್ಲಿದ್ದರು? ಅವರಿಗೆ ದೇವೆಗೌಡರ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಎಂದು ಪ್ರಶ್ನೆ ಮಾಡಿದರು.
ಬಿಜೆಪಿ ನಾಯಕರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದೆ ಹೌದು, ದೇವೆಗೌಡ ಮತ್ತೆ ಪ್ರಧಾನಿ ಆಗೊದಕ್ಕೆ ಈ ಭೇಟಿ ಮಾಡಿದ್ದಲ್ಲ, ಈ ಪಕ್ಷ ಉಳಿಸಲು. ಮೋದಿಯವರು ಅವರಾಗಿಯೇ ವಿಶ್ವಾಸದಿಂದ ಭೇಟಿ ಮಾಡಲು ಮುಂದೆ ಬಂದಾಗ ಅವರ ಜತೆ ಮಾತನಾಡಿದ್ದು ಸತ್ಯ. ಆದರೆ ನಾವು ಯಾವ ಸೀಟನ್ನು ಕೇಳಲಿಲ್ಲ.
ಸೀಟು ಹಂಚಿಕೆ ಬಗ್ಗೆ ಹೆಚ್ಡಿಕೆ ತೀರ್ಮಾನ
ಮಂಡ್ಯದಲ್ಲಿ ಬಿಜೆಪಿಯ ಮತಗಳು ಇಲ್ಲವೇ? ರಾಮನಗರದಲ್ಲಿ ಬಿಜೆಪಿಯ ಓಟ್ ಇಲ್ವೇ? ಕೋಲಾರ, ತುಮಕೂರಿನಲ್ಲಿ ಇಲ್ವೇ? ಹಾಗಂದ ಮಾತ್ರಕ್ಕೆ ಜೆಡಿಎಸ್ನಲ್ಲಿ ಏನೂ ಇಲ್ಲ ಎಂದು ಯಾರೂ ಭಾವಿಸಬಾರದು. ಈ ಬಗ್ಗೆ ಬಿಜೆಪಿ ನಾಯಕರಿಗೆ ಮಾತುಕತೆಯ ವೇಳೆಯೇ ಹೇಳಿದ್ದೇನೆ. ವಿಜಯಪುರದಲ್ಲಿ, ರಾಯಚೂರಿನಲ್ಲಿ ನನ್ನ ಪಕ್ಷದ ಶಕ್ತಿ ಕೊಟ್ಟರೆ ಮಾತ್ರ ಬಿಜೆಪಿ ಗೆಲ್ಲುತ್ತೆ ಎಂದು ಹೇಳಿದ್ದೇನೆ. ಬೀದರ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ನಮ್ಮ ಶಕ್ತಿ ಇದೆ. ಚಿಕ್ಕಮಗಳೂರಿನ ಲೋಕಸಭೆ ಕ್ಷೇತ್ರದಲ್ಲಿಯೂ ನಮ್ಮ ಶಕ್ತಿ ಇದೆ. ನಾನು ವಿನಮ್ರವಾಗಿ ಈ ವಿಷಯ ತಿಳಿಸಿದ್ದೇನೆ ಎಂದು ಮೈತ್ರಿ ಬಗ್ಗೆ ಮಾಹಿತಿ ನೀಡಿದರು.
ಈ ವಿಚಾರವಾಗಿ ಕುಮಾರಸ್ವಾಮಿ ಅವರು ಅಂತಿಮವಾಗಿ ಎಷ್ಟು ಸೀಟು ಹಂಚಿಕೆ ಮಾಡಿಕೊಳ್ಳಬೇಕೆಂದು ಬಿಜೆಪಿ ನಾಯಕರ ಜತೆ ಕೂತು ಚರ್ಚೆ ನಡೆಸಿ ತೀರ್ಮಾನ ಮಾಡುತ್ತಾರೆ ಎಂದು ದೇವೇಗೌಡರು ಹೇಳಿದರು.












Click it and Unblock the Notifications