ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್ನಿಂದ ಪುಟ್ಟಣ್ಣ ಉಚ್ಚಾಟನೆ
ಬೆಂಗಳೂರು, ನವೆಂಬರ್ 6: ವಿಧಾನ ಪರಿಷತ್ ಸದಸ್ಯ ಪುಟ್ಟಣ ಅವರನ್ನು ಜೆಡಿಎಸ್ನಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಕಾರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜೆಡಿಎಸ್ ತಿಳಿಸಿದೆ.
ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಆದ ತಮ್ಮನ್ನು ಈ ಕೂಡಲೇ ಜಾರಿಗೆ ಬರುವಂತೆ ಜನತಾದಳ (ಜಾತ್ಯಾತೀತ) ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್ಕೆ ಕುಮಾರಸ್ವಾಮಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಪುಟ್ಟಣ್ಣ ಬಿಜೆಪಿಗೆ; ಎಂಎಲ್ಸಿಗೆ ತಿರುಗೇಟು ನೀಡಿದ ಜೆಡಿಎಸ್!
ಕಳೆದ ತಿಂಗಳು ರಾಮನಗರದಲ್ಲಿ ಮಾತನಾಡಿದ್ದ ಪುಟ್ಟಣ್ಣ, ಜೆಡಿಎಸ್ ತೊರೆಯುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಮುಂದಿನ ನಡೆಯ ಬಗ್ಗೆ ಬಳಿಕ ತಿಳಿಸುವುದಾಗಿ ಹೇಳಿದ್ದರು. ಎರಡು ಮೂರು ಜನರನ್ನು ಹೊರತುಪಡಿಸಿ ಉಳಿದ ಎಲ್ಲ ಪರಿಷತ್ ಸದಸ್ಯರು ಕೂಡ ಈ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ. ಎಲ್ಲರೂ ಸೇರಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಜೆಡಿಎಸ್ ಬಿಡಲು ಕಾರಣ ಏನೆಂದು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಅವರು ಹೇಳಿದ್ದರು. ಆದರೆ ಅವರು ಅಧಿಕೃತವಾಗಿ ರಾಜೀನಾಮೆ ನೀಡಿ ಹೊರಬರುವ ಮೊದಲೇ ಪಕ್ಷ ವಿರೋಧಿ ಚಟುವಟಿಕೆ ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಪುಟ್ಟಣ್ಣ ಅವರ ಅಧಿಕಾರಾವಧಿ 2020ರವರೆಗೂ ಇದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಪುಟ್ಟಣ್ಣ ಅವರು ಬಿಜೆಪಿ ನಾಯಕರೊಂದಿಗೆ ಹಲವು ಬಾರಿ ಕಾಣಿಸಿಕೊಂಡಿದ್ದರು. ಅಲ್ಲದೆ, ದೇವೇಗೌಡ, ಕುಮಾರಸ್ವಾಮಿ ಮತ್ತು ಜೆಡಿಎಸ್ನ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು.