ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆ : ದೇವೇಗೌಡ
ಬೆಂಗಳೂರು, ಅ.3 : ಕಾಂಗ್ರೆಸ್ ಪಕ್ಷದ ನಾಯಕರು ಲೋಕಸಭೆ ಉಪ ಚುನಾವಣೆ ಗೆದ್ದಿದ್ದೇವೆ ಎಂದು ಬೀಗುವುದು ಬೇಡ. ಲೋಕಸಭೆ ಚುನಾವಣೆಯಲ್ಲಿ ಜನರು ಅವರಿಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಗುರುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಲೋಕಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಸಜ್ಜಾಗಿದೆ ಎಂದು ಘೋಷಿಸಿದರು. ಉಪ ಚುನಾವಣೆಯ ಸೋಲು ಪಕ್ಷದ ಕಾರ್ಯಕರ್ತರ ಉತ್ಸಾಹ ಕಡಿಮೆ ಮಾಡಿಲ್ಲ ಎಂದರು.

ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಉಪ ಚುನಾವಣೆ ಗೆದ್ದಿರುವ ಕಾಂಗ್ರೆಸ್ ನಾಯಕರು, 2014ರ ಲೋಕಸಭೆ ಚುನಾವಣೆಯಲ್ಲಿ 25 ಸೀಟು ಗೆಲ್ಲುವ ಭ್ರಮೆಯಲ್ಲಿದ್ದಾರೆ. ಅವರಿಗೆ ಜನರು ಸರಿಯಾದ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಕೃತಜ್ಞತಾ ಸಮಾವೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗೌಡರು, ಜನರ ಬಾಯಿಗೆ ಲಡ್ಡು ಕೊಟ್ಟ ಆ ತಾಯಿಗೆ ಸಾಷ್ಟಾಂಗ ನಮಸ್ಕಾರ ಮಾಡುವೆ. ಅವರು ಕಾವೇರಿ ಮಾತೆ ಆಗಲಿ ಎಂದು ವ್ಯಂಗ್ಯವಾಡಿದರು.
ಅ.23 ಮತ್ತು 24 ರಂದು ಬೆಂಗಳೂರಿನಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ. ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.
ನವೆಂಬರ್ ಮೊದಲ ವಾರದಲ್ಲಿ ರಾಯಚೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಈ ಮೂಲಕ ಲೋಕಸಭೆ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.
ಹೋಗಲಿ ಬಿಡಿ : ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಗೆ ಮರಳುತ್ತೇನೆ ಎಂದು ಹೇಳಿದರೆ, ತಡೆಯಲು ನಾನ್ಯಾರು. ಅವರು ಹೋಗುವುದಾದರೆ, ಹೋಗಲಿ ಬಿಡಿ ಎಂದು ಎಚ್.ಡಿ.ದೇವೇಗೌಡ ಹೇಳಿದರು. ನರೇಂದ್ರ ಮೋದಿ ಅವರನ್ನು ಯತ್ನಾಳ್ ಹೊಗಳಿದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.(ಬಿಜೆಪಿಗೆ ಮರಳಲು ಯತ್ನಾಳ್ ಸಿದ್ಧ)











Click it and Unblock the Notifications