ಎಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು, ವೈದ್ಯರು ಹೇಳಿದ್ದೇನು?
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯದ ಕಾರಣಕ್ಕೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆ ವೈದ್ಯರು ರಕ್ತದೊತ್ತಡ ಇತರ ಪರೀಕ್ಷೆಗಳನ್ನು ಮಾಡಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ
ಬೆಂಗಳೂರು, ಮಾರ್ಚ್ 4: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯದ ಕಾರಣಕ್ಕೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಆಸ್ಪತ್ರೆ ವೈದ್ಯ ಸತೀಶ್, ಕುಮಾರಸ್ವಾಮಿ ಅವರಿಗೆ ರಕ್ತದೊತ್ತಡ ಸೇರಿದಂತೆ ವಿವಿಧ ಪರೀಕ್ಷೆ ಮಾಡಲಾಗಿದೆ. ಹೆದರುವ ಅಗತ್ಯ ಇಲ್ಲ. ಭಾನುವಾರ ಅಥವಾ ಸೋಮವಾರ ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗುರುವಾರ ಮೈಸೂರಿನಲ್ಲಿದ್ದ ಕುಮಾರಸ್ವಾಮಿ ಅವರು ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಬಳಲಿದ್ದರು. ಆ ಕಾರಣಕ್ಕೆ ಮುಂಚೆಯೇ ನಿಗದಿಯಾಗಿದ್ದ ಪತ್ರಿಕಾಗೋಷ್ಠಿ ಕೂಡ ಮುಂದೂಡಿದ್ದರು. ಆ ನಂತರ ಬೆಂಗಳೂರಿಗೆ ಹಿಂತಿರುಗಿದ್ದ ಅವರು ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.[ಜ್ವರದಿಂದ ಬಳಲುತ್ತಿದ್ದ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ]

ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯ ಸಂಬಂಧಿ ತೊಂದರೆ ಇಲ್ಲ. ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರುವ ಅವರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಎಚ್ ಡಿಕೆ ಅವರ ಪತ್ನಿ ಅನಿತಾ ಅವರು ಹೇಳಿದ್ದಾರೆ.
ಆಸ್ಪತ್ರೆಗೆ ಸಂಸದ ಪುಟ್ಟರಾಜು ಅವರು ಭೇಟಿ ನೀಡಿದ ನಂತರ ಮಾಧ್ಯಮದವರ ಜತೆ ಮಾತನಾಡಿ, ಒಂದು ವಾರದಿಂದ ಪ್ರವಾಸದಲ್ಲಿದ್ದ ಕುಮಾರಸ್ವಾಮಿಯವರಿಗೆ ಜ್ವರ-ಕೆಮ್ಮು ಆಗಿದೆ. ಈಗಾಗಲೇ ಚೇತರಿಕೆ ಕಂಡಿದೆ. ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಆಗುತ್ತಾರೆ ಎಂದು ಹೇಳಿದ್ದಾರೆ.












Click it and Unblock the Notifications