ರಜನೀಶ್ ಗೋಯಲ್ ವಿರುದ್ಧ ಕಿಕ್ ಬ್ಯಾಕ್ ಆರೋಪ

ಬೆಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹಾಗೂ ಮರಿತಿಬ್ಬೇಗೌಡ, ರಜನೀಶ್ ಗೋಯಲ್ 2010ನೇ ಸಾಲಿನಲ್ಲಿ 90 ಉಪನ್ಯಾಸಕರಿಗೆ ಕಾನೂನು ಬಾಹಿರ ಬಡ್ತಿ ನೀಡಿದ್ದು, ಬಡ್ತಿ ವೇತನಕ್ಕಾಗಿ 12 ಕೋಟಿ ಬಿಡುಗಡೆ ಮಾಡಿ, ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ದೂರಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಡಿ.21ರೊಳಗೆ ಲೋಕಾಯುಕ್ತ ತನಿಖೆಗೆ ಒಪ್ಪಿಸಬೇಕು. ಇಲ್ಲದಿದ್ದರೆ ಡಿಸೆಂಬರ್ 22ರಿಂದ ಮುಖ್ಯಮಂತ್ರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಜೆಡಿಎಸ್ ನಾಯಕರು ಎಚ್ಚರಿಕೆ ನೀಡಿದರು. ಗೋಯಲ್ ಅವರನ್ನು ಬಂಧಿಸಿ ಮಂಪರು ಪರೀಕ್ಷೆಗೊಳಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ಉನ್ನತ ಶಿಕ್ಷಣ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧವೂ ವಾಗ್ದಾಳಿ ನಡೆಸಿದ ಜೆಡಿಎಸ್ ನಾಯಕರು, ದೇಶಪಾಂಡೆ ಅವರು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಗೋಯಲ್ ದೇಶಪಾಂಡೆಯ ಏಜೆಂಟ್ರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ದೇಶಪಾಂಡೆಯನ್ನು ಸಚಿವ ಸಂಪುಟದಿಂದ ವಜಾ ಮಾಡಿ, ಉನ್ನತ ಶಿಕ್ಷಣ ಇಲಾಖೆಯ ಭ್ರಷ್ಟಾಚಾರದ ಕುರಿತ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ 90 ಸಹಾಯಕ ಪ್ರಾಧ್ಯಾಪಕರನ್ನು ಸಹ ಪ್ರಾಧ್ಯಾಪಕರನ್ನಾಗಿ ಉನ್ನತ ಶಿಕ್ಷಣ ಇಲಾಖೆ ಬಡ್ತಿ ನೀಡಿತ್ತು. ಈ ಪ್ರಕರಣದಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದವು. ಬೆಂಗಳೂರಿನ ಯುವಿಸಿಇ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಈ ವ್ಯವಹಾರ ಉನ್ನತ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎಂದು ಆರೋಪಿಸಿದ್ದರು.
ಈ ಬಗ್ಗೆ ವಿಧಾನ ಪರಿಷತ್ ಸದಸ್ಯರ ನಿಯೋಗವೊಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿತ್ತು. ಸದ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.












Click it and Unblock the Notifications