ನ್ಯಾ.ದಿನೇಶ್ ಮಹೇಶ್ವರಿ ಸುಪ್ರೀಂಗೆ ಪದೋನ್ನತಿ: ಕುಮಾರಸ್ವಾಮಿ ಅಭಿನಂದನೆ
ಬೆಂಗಳೂರು, ಜನವರಿ 17: ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿರುವ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ಗುರುವಾರ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ರಾಜ್ಯ ಹೈಕೋರ್ಟ್ ನಲ್ಲಿ ಅವಧಿಯಲ್ಲಿ ಅವರು ನೀಡಿರುವ ಹಲವು ತೀರ್ಪುಗಳು ಅದರಲ್ಲೂ ನಗರದ ಸ್ವಚ್ಛತೆ ಗೆ ಸಂಬಂಧಿಸಿದಂತೆ ನೀಡಿರುವ ನಿರ್ದೇಶನ ಸರ್ಕಾರಕ್ಕೆ ಮಾರ್ಗಸೂಚಿಯಂತಿತ್ತು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ವ್ಯಕ್ತಪಡಿಸಿ, ಕೃತಜ್ಞತೆ ಸಲ್ಲಿಸಿದರು. ಅವರ ಮುಂದಿನ ವೃತ್ತಿ ಜೀವನಕ್ಕೆ ಮುಖ್ಯಮಂತ್ರಿಗಳು ಶುಭ ಹಾರೈಸಿದರು.
ಬುಧವಾರ ನ್ಯಾ. ದಿನೇಶ್ ಮಹೇಶ್ವರಿ ಹಾಗೂ ದೆಹಲಿ ಹೈಕೋರ್ಟ್ನ ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಬ್ಬರನ್ನು ನೇಮಕ ಮಾಡಿದ್ದಾರೆ. ದಿನೇಶ್ ಮಹೇಶ್ವರಿ ಅವರು ಜೋಧ್ಪುರ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರುವ ಇವರು, ರಾಜಸ್ಥಾನದ ಬೇರೆ ಬೇರೆ ಕಡೆಗಳಲ್ಲಿ ವಕೀಲರಾಗಿ ಕೆಲಸ ಮಾಡಿದ್ದರು.

2004ರಲ್ಲಿ ರಾಜಸ್ಥಾನ ಹೈಕೋರ್ಟ್ನ ನ್ಯಾಯಧೀಶರಾಗಿ ನೇಮಕವಾಗಿದ್ದ ಇವರು, 2014ರಲ್ಲಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಸೇವೆ ಮಾಡಿದ್ರು. 2016ರಲ್ಲಿ ಮೇಘಾಲಯ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸಿದ್ದರು. 2018ರ ಫೆಬ್ರವರಿ 12ರಂದು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಆರಂಭಿಸಿದ್ದರು.
ಕರ್ನಾಟಕದಲ್ಲಿ ಬಿಬಿಎಂಪಿ ಸೇರಿದಂತೆ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಚಳಿ ಬಿಡಿಸಿದ್ದರು. ರಾಜ್ಯ ಸರ್ಕಾರಕ್ಕೂ ಸಾಕಷ್ಟು ವಿಚಾರಗಳಲ್ಲಿ ಕಿವಿ ಹಿಂಡಿದ್ದರು. ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇವರನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.












Click it and Unblock the Notifications