ರೈತ ಪ್ರತಿಭಟನೆ ಬೆಂಬಲಿಸಿ ಕರವೇ ಟ್ವಿಟ್ಟರ್ ಅಭಿಯಾನ
ಬೆಂಗಳೂರು, ಮಾರ್ಚ್ 4: ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಮಾರ್ಚ್ 6ರಂದು ರೈತಪರ ಟ್ವಿಟ್ಟರ್ ಅಭಿಯಾನ ಕೈಗೊಳ್ಳಲಿರುವುದಾಗಿ ತಿಳಿಸಿದೆ.
ಮಾರ್ಚ್ 6ರಂದು ಸಂಜೆ 5 ಗಂಟೆಯಿಂದ ಕರ್ನಾಟಕ ರಕ್ಷಣಾ ವೇದಿಕೆ #ರೈತಹೋರಾಟದೊಂದಿಗೆಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದ್ದು, ಈ ಅಭಿಯಾನಕ್ಕೆ ಕೈ ಜೋಡಿಸಲು ಕರೆ ನೀಡಿದೆ. ಈ ಹಿಂದೆಯೂ ಸಂಘ ಟ್ವಿಟ್ಟರ್ ಅಭಿಯಾನ ನಡೆಸಿತ್ತು.
ಕೇಂದ್ರ ಸರ್ಕಾರ ರೈತರ ಹೋರಾಟವನ್ನು ದಮನಿಸಲು ಪ್ರಯತ್ನಿಸುತ್ತಿದೆ. ಪ್ರತಿಭಟನಾ ಸ್ಥಳಕ್ಕೆ ವಿದ್ಯುತ್, ನೀರು ಸರಬರಾಜು ನಿಲ್ಲಿಸಿದೆ. ರೈತ ಮುಖಂಡರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಬಂಧಿಸಲಾಗುತ್ತಿದೆ ಎಂದು ಆರೋಪಿಸಿ, ಅವರಿಗೆ ಬೆಂಬಲದ ರೂಪವಾಗಿ ಅಭಿಯಾನ ಆರಂಭಿಸಿರುವುದಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ನಾವೆಲ್ಲರೂ ರೈತರ ಹೋರಾಟವನ್ನು ಬೆಂಬಲಿಸಬೇಕಿದೆ. ಕರ್ನಾಟಕ ರೈತರ ಆಂದೋಲನದ ಜತೆ ಇದೆ ಎಂಬುದನ್ನು ಸಾಬೀತುಪಡಿಸಬೇಕಿದೆ. ದೆಹಲಿಯಲ್ಲಿ ಕೊರೆಯುವ ಚಳಿಯಲ್ಲಿ ತಿಂಗಳುಗಳಿಂದ ಪ್ರತಿಭಟನೆಯಲ್ಲಿ ತೊಡಗಿರುವ ಅನ್ನದಾತರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಬೇಕಿದೆ. ಈ ಸಂಕಷ್ಟದ ಕಾಲದಲ್ಲಿ ನಾವೆಲ್ಲರೂ ಒಂದಾಗಿ ಸೇರಿ ರೈತರ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಬೇಕಿದೆ ಎಂದು ಹೇಳಿದರು.
ರೈತ ವಿರೋಧಿಯಾಗಿರುವ ಮೂರು ಕೃಷಿ ಮಸೂದೆಗಳನ್ನು ಕೂಡಲೇ ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಬಲ ನೀಡಬೇಕು ಎಂಬ ಎರಡು ಬೇಡಿಕೆಗಳು ನ್ಯಾಯಪರವಾಗಿವೆ. ಒಕ್ಕೂಟ ಸರ್ಕಾರ ಹಟ ಮುಂದುವರೆಸದೇ ಎರಡೂ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.












Click it and Unblock the Notifications