ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರವೇ ಮಹಿಳಾ ಕಾರ್ಯಕರ್ತರಿಂದ ಹಲ್ಲೆ ?
ಬೆಂಗಳೂರು, ನವೆಂಬರ್ 2: ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಕಾರ್ಯಕರ್ತರು ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹಲ್ಲೆ ಖಂಡಿಸಿ ವೈದ್ಯರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಜುಲೈ ತಿಂಗಳಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರ ತಪ್ಪಿನಿಂದಾಗಿ ಕಣ್ಣು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಮಿಂಟೋ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಕಾರ್ಯಕರ್ತರು ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವೈದ್ಯರ ನಿರ್ಲಕ್ಷ್ಯದಿಂದ ದೃಷ್ಟಿ ಕಳೆದುಕೊಂಡ 15 ಮಂದಿ ಸಂತ್ರಸ್ತರು ಪರಿಹಾರಕ್ಕಾಗಿ ಶುಕ್ರವಾರ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು. ಆ ಸಮಯದಲ್ಲಿ ಆಗಮಿಸಿದ್ದ ವೈದ್ಯರೊಬ್ಬರು ಇಂಗ್ಲಿಷ್ನಲ್ಲಿ ಮಾತನಾಡಿದ್ದಾರೆ. ಆಗ ಕರವೇ ಕಾರ್ಯಕರ್ತರು ಕನ್ನಡದಲ್ಲೇ ಪ್ರತಿಕ್ರಿಯಿಸಬೇಕು ಎಂದು ವೈದ್ಯರಿಗೆ ಕ್ಷಮೆ ಕೇಳುವಂತೆ ಅವರನ್ನು ಸುತ್ತುವರೆದಿದ್ದಾರೆ. ಬಳಿಕ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ಘಟನೆ ಸಂಬಂಧ ಕರವೇ ಮಹಿಳಾ ಉಪಾಧ್ಯಕ್ಷೆ ಅಶ್ವಿನಿ ಗೌಡ ಪ್ರತಿಕ್ರಿಯೆ ನೀಡಿದ್ದು, ನೊಂದವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದು ನಿಜ ಆದರೆ ವೈದ್ಯರ ಮೇಲೆ ಹಲ್ಲೆ ನಡೆಸಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ಸುಮಾರು 20 ಮಂದಿ ನಿನ್ನೆ ಮಿಂಟೋ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಹಲ್ಲೆಗೊಳಗಾದವರಲ್ಲಿ ವಿಕ್ಟೋರಿಯಾ, ಬೌರಿಂಗ್ ಮತ್ತು ವಾಣಿ ವಿಲಾಸ್ ಆಸ್ಪತ್ರೆಯ ಜೂನಿಯರ್ ವೈದ್ಯರುಗಳಿದ್ದರು ಎಂದು ಮಿಂಟೋ ಆಸ್ಪತ್ರೆಯ ನಿರ್ದೇಶಕಿ ಸುಜಾತಾ ರಾಠೋಡ್ ಹೇಳಿದ್ದಾರೆ.












Click it and Unblock the Notifications