Karnataka Elections: ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ- ಆತ್ಮಹತ್ಯೆ ಬೆದರಿಕೆ, ಕೋಲಾರದಿಂದ ಸ್ಪರ್ಧಿಸುವಂತೆ ಪಟ್ಟು
ಕೋಲಾರದಿಂದ ಬೆಂಗಳೂರಿಗೆ ಆಗಮಿಸಿರುವ ಸಿದ್ದರಾಮಯ್ಯ ಬೆಂಬಲಿಗರು ಅವರ ಮನೆಗೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಸಿದ್ದರಾಮಯ್ಯನವರಿಗೆ ಆಗ್ರಹಿಸುತ್ತಿದ್ದಾರೆ.
ಬೆಂಗಳೂರು, ಮಾರ್ಚ್ 21: ಕರ್ನಾಟಕ ವಿಧಾನಸಭೆ ಚುನಾವಣೆಗೆ ( Karnataka Assembly Elections 2023 ) ಕೆಲ ದಿನಗಳು ಬಾಕಿ ಉಳಿದಿವೆ. ಜೆಡಿಎಸ್ ( JDS ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮಾರ್ಚ್ 22 ರಂದು ಕಾಂಗ್ರೆಸ್ ( Congress ) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಆಡಳಿತ ರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ.
ಈ ಎಲ್ಲ ಬೆಳವಣಿಗಗಳ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ರಾಜ್ಯದ ಗಮನ ಸೆಳೆದಿದೆ. ಪ್ರಸ್ತುತ ಬಾದಾಮಿ ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ ಕೋಲಾರ ಅಥವಾ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯಬಹುದೆಂದು ಹೇಳಲಾಗುತ್ತಿದೆ.

ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಎರಡು ತಿಂಗಳ ಹಿಂದೆ ಘೋಷಿಸಿದ್ದರು. ಆದರೆ, ಈಗ ಕೇಂದ್ರ ನಾಯಕರು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಒಳಿತೆಂದು ಸಿದ್ದರಾಮಯ್ಯನವರಿಗೆ ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವುದು ಅನುಮಾನವೆಂದು ಹೇಳಲಾಗುತ್ತಿದೆ. ಪುತ್ರ ಯತೀಂದ್ರ ಅವರು ಶಾಸಕರಾಗಿರುವ ವರಣಾ ಕ್ಷೇತ್ರವು ಸಿದ್ದರಾಮಯ್ಯನವರಿಗೆ ಸೇಫ್ ಕ್ಷೇತ್ರವೆಂಬ ಕಾರಣಕ್ಕೆ ಈ ಸಲಹೆಯನ್ನು ವರಿಷ್ಠರು ನೀಡಿದ್ದಾರೆ ಎಂದು ವರದಿಯಾಗಿದೆ.
ಇದೆಲ್ಲದರ ನಡುವೆ ಕೋಲಾರದಿಂದ ಬೆಂಗಳೂರಿಗೆ ಆಗಮಿಸಿರುವ ಸಿದ್ದರಾಮಯ್ಯ ಬೆಂಬಲಿಗರು ಅವರ ಮನೆಗೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಸಿದ್ದರಾಮಯ್ಯನವರಿಗೆ ಆಗ್ರಹಿಸುತ್ತಿದ್ದಾರೆ. ಅವರು ಕೋಲಾರದಿಂದ ಸ್ಪರ್ಧಿಸದೇ ಹೋದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಭಿಮಾನಿಯೊಬ್ಬ ಹೇಳಿದ್ದಾನೆ. ಶರ್ಟ್ ಬಿಚ್ಚಿ ಬಾರಕೋಲಿನಿಂದ ಅಭಿಮಾನಿಯೊಬ್ಬ ಹೊಡೆದುಕೊಂಡಿದ್ದಾನೆ.
ಇದಲ್ಲದೇ ರಾಜಾಜಿನಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯನವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಭವ್ಯಾ ನರಸಿಂಹ ಮೂರ್ತಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲೇಬೇಕೆಂದು ಬೆಂಬಲಿಗರು ಒತ್ತಾಯ ಮಾಡಿದ್ದಾರೆ. ಎಂಎಲ್ಸಿ ಪುಟ್ಟಣ್ಣ ಅವರು ಕಾಂಗ್ರೆಸ್ ಸೇರಿದ್ದಾರೆ. ಅವರು ರಾಜಾಜಿನಗರದಿಂದ ಸ್ಪರ್ಧಿಸಬಹುದೆಂಬ ಮಾತುಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಭವ್ಯಾ ನರಸಿಂಹ ಮೂರ್ತಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯನವರು ಕೋಲಾರದಿಂದ ಸ್ಪರ್ಧಿಸುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯನವರು ಎಲ್ಲಿಂದ ಬೇಕಾದರೂ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಎಲ್ಲಿಯಾದರೂ ಕಣಕ್ಕಿಳಿಯಿರಿ. ಗೆದ್ದುಬನ್ನಿ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದರ ಬಗ್ಗೆ ಸಿದ್ದರಾಮಯ್ಯನವರೇ ತೀರ್ಮಾನಿಸುತ್ತಾರೆ. ಅವರೇ ಮಾಹಿತಿ ನೀಡುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಚುನಾವಣೆಯಲ್ಲಿ ಗೆದ್ದು ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಿದ್ದರಾಮಯ್ಯನವರು ವರುಣಾದಿಂದ ಸ್ಪರ್ಧಿಸಿದರೆ ಗೆಲುವು ಖಚಿತವಾಗುವ ಲಕ್ಷಣಗಳಿವೆ. ಹೀಗಾಗಿ, ಅವರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಬಹುದು. ಇದು ಕಾಂಗ್ರೆಸ್ ಗೆಲುವಿಗೆ ಸಹಾಯ ಮಾಡಬಹುದು. ಕಾರಣ, ಸಿದ್ದರಾಮಯ್ಯನವರ ಜನಪ್ರಿಯತೆಯನ್ನು ಬಳಸಿಕೊಳ್ಳಬೇಕೆನ್ನುವುದು ಕಾಂಗ್ರೆಸ್ ವರಿಷ್ಠರ ಅಭಿಲಾಸೆ ಆಗಿದೆ.
ಈಗ ಬಂದಿರುವ ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬಹುದೆಂದು ಹೇಳಲಾಗುತ್ತಿದೆ. ಆಡಳಿತಾ ರೂಢ ಬಿಜೆಪಿಗೆ ಆಡಳಿತ ವಿರೋಧಿ ಅಲೆಯ ಸಂಕಷ್ಟ ಶುರುವಾಗಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಇದು ಕಾಂಗ್ರೆಸ್ಗೆ ವರವಾಗಲಿದೆ ಎನ್ನಲಾಗುತ್ತಿದೆ.












Click it and Unblock the Notifications