ಇಂದಿನಿಂದ ಅಧಿವೇಶನ: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ
ಬೆಂಗಳೂರು, ಜನವರಿ 28: ವಿಧಾನಮಂಡಲ ಅಧಿವೇಶನ ಇಂದಿನಿಂದ (ಗುರುವಾರ) ಫೆಬ್ರವರಿ 5ರವರೆಗೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಈ ಏಳು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅಧಿವೇಶನ ನಡೆಯುವ ವಿಧಾನಸೌಧದ ಸುತ್ತಲೂ ಎರಡು ಕಿಮೀ ವ್ಯಾಪ್ತಿಯಲ್ಲಿ ಜನವರಿ 28ರಿಂದ ಫೆ. 5ರವರೆಗೂ ಸೆಕ್ಷನ್ 144ರ ಅಡಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ನಾಳೆಯಿಂದ ಜಂಟಿ ಅಧಿವೇಶನ; ಸರ್ಕಾರಕ್ಕೆ ಮಹತ್ವದ ಸಂದೇಶ ಕೊಟ್ಟ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ!
ಈ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ನಡೆಸುವುದು ಮತ್ತು ಸಭೆ ಮಾಡುವುದನ್ನು, ಸ್ಫೋಟಕ ಸಿಡಿಸುವುದು, ಪ್ರತಿಕೃತಿ ದಹನ, ಘೋಷಣೆ ಕೂಗುವುದು, ಶಸ್ತ್ರಾಸ್ತ್ರ ಹಾಗೂ ಮಾರಕಾಸ್ತ್ರಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಮುಂದೆ ಓದಿ.
ರಾಜ್ಯಪಾಲರ ಭಾಷಣ
ವಿಧಾನಮಂಡಲ ಅಧಿವೇಶನದಲ್ಲಿ ಮೂರು ಸುಗ್ರೀವಾಜ್ಞೆಗಳು ಸೇರಿ 11 ಮಸೂದೆಗಳು ಮಂಡನೆಯಾಗಲಿವೆ. ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಭಾಷಣ ಮಾಡಲಿದ್ದಾರೆ.
ಕೋವಿಡ್ ಪರೀಕ್ಷೆ ಕಡ್ಡಾಯವಿಲ್ಲ
ಈ ಬಾರಿಯ ಅಧಿವೇಶನದಲ್ಲಿ ಭಾಗವಹಿಸುವ ಸದಸ್ಯರು ಆರ್ಟಿ-ಪಿಸಿಆರ್ ಕೋವಿಡ್ ಪರೀಕ್ಷೆಗೆ ಒಳಗಾಗುವುದು ಕಡ್ಡಾಯವಿಲ್ಲ. ಆದರೆ ದೈಹಿಕ ಅಂತರ ಕಾಪಾಡಿಕೊಳ್ಳುವುವುದು, ಮಾಸ್ಕ್ ಧರಿಸುವುದು ಮುಂತಾದ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.
ಪರಿಷತ್ನಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ
ವಿಧಾನಪರಿಷತ್ನಲ್ಲಿ ಸಭಾಪತಿ ಮತ್ತು ಉಪ ಸಭಾಪತಿ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ. ಆದರೆ ಇಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ನಡೆದಿದೆ. ವಿಧಾನಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ನಿರ್ಧರಿಸಿದೆ. ಉಪ ಸಭಾಪತಿ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ಅವರನ್ನು ಬಿಜೆಪಿ ಕಣಕ್ಕಿಳಿಸಲಿದೆ. ಅವರು ಗುರುವಾರ ಬೆಳಿಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರ ಹೆಸರನ್ನು ಜೆಡಿಎಸ್ ಅಂತಿಮಗೊಳಿಸಿದೆ.
ಹೊರಟ್ಟಿ ಆಯ್ಕೆಗೆ ವರಿಷ್ಠರ ಒಪ್ಪಿಗೆ
ಸಭಾಪತಿ ಸ್ಥಾನಕ್ಕೆ ಬೆಂಬಲಿಸುವಂತೆ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮನವಿ ಮಾಡಿದ್ದರು. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಕೂಡ ಹಸಿರು ನಿಶಾನೆ ತೋರಿಸಿದ್ದಾರೆ. ಹೀಗಾಗಿ ಪರಿಷತ್ನಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ನಡೆಯಲಿದೆ.
Recommended Video
ಸಭಾಪತಿ ವಿರುದ್ಧ ಮತ್ತೆ ಅವಿಶ್ವಾಸ
ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಎರಡನೆಯ ಬಾರಿ ಅವಿಶ್ವಾಸ ಮಂಡಿಸಿದೆ. ಬಿಜೆಪಿ ನಡೆಗೆ ಜೆಡಿಎಸ್ ಕೂಡ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಉಪ ಸಭಾಪತಿ ಆಯ್ಕೆಯಾದ ಕೂಡಲೇ ಪ್ರತಾಪ್ ಚಂದ್ರ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.