ಕರ್ನಾಟಕ ಬಂದ್: ಬಸ್ಗಳ ಮೇಲೆ ಕಲ್ಲು ತೂರಾಟ, ಹಲವೆಡೆ ಪರಿಸ್ಥಿತಿ ಉದ್ವಿಗ್ನ
ಬೆಂಗಳೂರು, ಡಿಸೆಂಬರ್ 05: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರುದ್ಧ ವಿವಿಧ ಕನ್ನಡಪರ ಸಂಘಟನೆಗಳು ಬಂದ್ಗೆ ಕರೆ ನೀಡಿವೆ.
Recommended Video
ಇಂದು ಅಲ್ಲಲ್ಲಿ ಟಯರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರೆ, ಹಲವೆಡೆ ಬಸ್ಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ಇನ್ನು ಟೌನ್ಹಾಲ್ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಆರಂಭವಾಗಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಹಲವು ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇನ್ನೂ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನಿಸಿದರೆ ರಾಜ್ಯ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದಂತಿದೆ.
ಬಿಎಂಟಿಸಿ, ಕೆಎಸ್ಆರ್ಟಿಸಿ, ಮೆಟ್ರೋ ಸೇವೆಗಳು ಲಭ್ಯವಿದೆ. ಕರ್ನಾಟದ ಗಡಿ ಭಾಗದಲ್ಲಿ ಎಂಇಎಶ್ ಪುಂಡರು ಕನ್ನಡಿಗರನ್ನು ಪದೇ ಪದೇ ಕೆಣಕುತ್ತಿರುವ ಬೆನ್ನಿನಲ್ಲೇ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಕನ್ನಡಪರ ಸಂಘಟನೆಗಳ ಸಿಟ್ಟು ನೆತ್ತಿಗೇರುವಂತೆ ಮಾಡಿದೆ.
ಸರ್ಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯಲೇಬೇಕು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಅನೇಕ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್'ಗೆ ಕರೆ ನೀಡಿವೆ. ಅಲ್ಲದೆ, ವಿವಿಧೆಡೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿವೆ.
ಇದಲ್ಲದೆ ಹೊಸೂರು ರಸ್ತೆಯ ಹಳೇ ಚಂದಾಪುರ ಬಳಿ ಬಿಎಂಟಿಸಿ ಬಸ್ ಮೇಲೂ ಕಲ್ಲು ತೂರಾಟ ನಡೆದಿರುವುದಾಗಿ ವರದಿಗಳು ತಿಳಿಸಿವೆ. ಇನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕರ್ನಾಟಕ ಬಂದ್'ಗೆ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.
ಮಂಗಳೂರಿನಲ್ಲಿ ಬಂದ್'ಗೆ ಯಾವುದೇ ರೀತಿಯ ಬಿಸಿ ತಟ್ಟಿಲ್ಲ. ತಮಿಳುನಾಡು ಗಡಿ ಆನೇಕಲ್ ನಲ್ಲಿ ಕರ್ನಾಟಕ ಬಂದ್'ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಟೌನ್'ಹಾಲ್ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಈ ನಡುವೆ ಪ್ರತಿಭಟನೆಯ ಕಾವು ಈಗಷ್ಟೇ ಆರಂಭವಾಗುತ್ತಿದ್ದು, ಬೆಂಗಳೂರಿನ ಕೆಆರ್.ಪುರಂನ ಪೈ ಲೈಔಟ್ ನಲ್ಲಿ ಬಿಎಂಟಿಸಿ ಬಸ್'ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದು ವರದಿಯಾಗಿದೆ.