ಕರ್ನಾಟಕಕ್ಕೆ ಅರುಣ್ ಸಿಂಗ್ ಆಗಮನ: ತಣ್ಣಗಾಗಲಿದೆಯೇ ಬಿಜೆಪಿ ಭಿನ್ನಮತ?
ಬೆಂಗಳೂರು, ಜೂನ್ 16: ಕರ್ನಾಟಕ ಬಿಜೆಪಿಯಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ ಗೊಂದಲವನ್ನು ಬಗೆಹರಿಸಲು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬುಧವಾರ ಮಧ್ಯಾಹ್ನ 3.30ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ನಂತರ ಪಕ್ಷದ ಕಚೇರಿಯಲ್ಲಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ನಂತರ ನಾಳೆ ಹಾಗೂ ನಾಡಿದ್ದು ಎಲ್ಲ ಸಚಿವರು ಹಾಗೂ ಶಾಸಕರಿಂದ ವೈಯಕ್ತಿಕ ಅಭಿಪ್ರಾಯ ಆಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಕಳೆದ ಒಂದು ತಿಂಗಳಿನಿಂದ ಜೋರಾಗಿತ್ತು. ಈ ವಿಷಯ ಹೈಕಮಾಂಡ್ ಕಿವಿಗೂ ಬಿದ್ದಿದ್ದು, ನಾಯಕತ್ವ ಬದಲಾವಣೆ ಕೂಗಿಗೆ ಬ್ರೇಕ್ ಹಾಕಲು ರಾಜ್ಯ ಉಸ್ತುವಾರಿಯನ್ನು ಕರ್ನಾಟಕಕ್ಕೆ ಕಳುಹಿಸಿಕೊಡುತ್ತಿದೆ. ಆ ಮೂಲಕ ಭಿನ್ನಮತೀಯರಿಗೆ ಸ್ಪಷ್ಟನೆ ಜೊತೆಗೆ ಎಚ್ಚರಿಕೆಯನ್ನೂ ನೀಡಬಹುದು.

ಸಚಿವ ಸಿ.ಪಿ. ಯೋಗೇಶ್ವರ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್ ಇವರುಗಳು ನಾಯಕತ್ವ ಬದಲಾವಣೆ ಮಾಡಬೇಕೆಂದು ದೆಹಲಿ ಭೇಟಿ ಮಾಡಿದ್ದಾರೆ ಎಂಬ ಗುಸುಗುಸು ಹರಿದಾಡುತ್ತಿದೆ. ಈ ಮೂವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ನಿಷ್ಠ ಶಾಸಕರು ಹಾಗೂ ಸಿಎಂ ಬಿಎಸ್ವೈ ಆಪ್ತ ಸಚಿವರು ಒತ್ತಡ ಹೇರಲಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿರಲಿದ್ದು, ಎಲ್ಲ ಬಿಜೆಪಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಶಾಸಕ ಎಂ.ಪಿ. ರೇಣುಕಾಚಾರ್ಯರ ಸಹಿ ಸಂಗ್ರಹದ ಬಗ್ಗೆಯೂ ಚರ್ಚೆ ನಡೆಯಲಿದೆ.
ಯಾರೂ ಎಷ್ಟೇ ನಾಯಕತ್ವ ಬದಲಾವಣೆಯಾಗಬೇಕೆಂದು ಒತ್ತಾಯಿಸಿದರೂ, ಈಗಿನ ಕೋವಿಡ್ ಪರಿಸ್ಥಿತಿ ಹಾಗೂ ರಾಜಕೀಯ ಪರಿಸ್ಥಿತಿಯಲ್ಲಿ ಅದು ಸಾಧ್ಯವಿಲ್ಲ. ಪಕ್ಷದ ಆಂತರಿಕೆ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸದಂತೆ ಎಲ್ಲ ಭಿನ್ನಮತ ಶಾಸಕರು ಹಾಗೂ ನಾಯಕರಿಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಎಚ್ಚರಿಕೆ ನೀಡಲಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂಬುದನ್ನು ಈ ಸಂದರ್ಭದಲ್ಲಿ ಘೋಷಿಸಿಲಿದ್ದಾರೆ.
ಅಷ್ಟೇ ಅಲ್ಲದೆ ರಾಜ್ಯ ಆರೋಗ್ಯ ಇಲಾಖೆ ಸಚಿವ ಕೆ. ಸುಧಾಕರ್ರಿಂದ ರಾಜ್ಯದ ಕೊರೊನಾ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.












Click it and Unblock the Notifications