ಸಂಸದ ತೇಜಸ್ವಿ ಸೂರ್ಯ ಪ್ರತಿನಿಧಿಸುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ಗೆ ಬೇಡಿಕೆ ಇಟ್ಟ ಸೋಮಣ್ಣ
ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಹೀನಾಯ ಸೋಲು ಅನುಭವಿಸಿರುವ ಬಿಜೆಪಿಗೆ ಹೊಸ ಸಂಕಷ್ಟಗಳು ಎದುರಾಗುತ್ತಲೇ ಇವೆ. ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಂದು ಎರಡು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡುವಲ್ಲಿ ಬಿಜೆಪಿ ವಿಫಲಗೊಂಡಿದೆ. ಈ ಬೆಳವಣಿಗೆಯ ನಡುವೆಯೇ ಪಕ್ಷದ ಹಿರಿಯ ನಾಯಕರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿರುವ ಮಾಜಿ ಸಚಿವ, ಹಿರಿಯ ನಾಯಕ ವಿ ಸೋಮಣ್ಣ ಅವರು ಇದೀಗ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದಾರೆ.
ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸೋಮಣ್ಣ ಅವರು ವರುಣಾ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುವಿಸಿದ್ದಾರೆ. ಈ ಎರಡು ಸೋಲುಗಳಿಂದ ವಿಚಲಿತರಾಗಿರುವ ಸೋಮಣ್ಣ ಬಿಜೆಪಿ ರಾಜ್ಯ ಘಟಕದ ಅದ್ಯಕ್ಷ ಸ್ಥಾನದ ಮೇಲೆ ದೃಷ್ಟಿ ನೆಟ್ಟಿದ್ದಾರೆ. ಒಂದು ವೇಳೆ, ಅಧ್ಯಕ್ಷ ಪಟ್ಟ ದೊರೆಯದೇ ಹೋದಲ್ಲಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಶುಕ್ರವಾರ ಮಾತನಾಡಿದ ಸೋಮಣ್ಣ ಅವರು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಮಹತ್ವಾಕಾಂಕ್ಷೆಯನ್ನು ಬಹಿರಂಗಪಡಿಸಿದರು.

ನಾನು ಕೂಡ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಕ್ಷೇತ್ರದಲ್ಲಿ ಪಕ್ಷವು 20 ವರ್ಷಗಳಿಂದ ಒಂದೇ ಸಮುದಾಯಕ್ಕೆ ಟಿಕೆಟ್ ನೀಡುತ್ತ ಬಂದಿದೆ. ಇತರೆ ಸಮುದಾಯಗಳಿಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಬೇಕು. ಮತ್ತೊಮ್ಮೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸೋಮಣ್ಣ ಹೇಳಿದರು.
ಪಕ್ಷಕ್ಕಾಗಿ ಕೆಲಸ ಮಾಡದ ಮತ್ತು ಇತರ ಪಕ್ಷಗಳಿಗೆ ರಹಸ್ಯವಾಗಿ ಕೆಲಸ ಮಾಡುವ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೋಮಣ್ಣ ಒತ್ತಾಯಿಸಿದರು.
ಕಳೆದ ತಿಂಗಳು, ಸೋಮಣ್ಣ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒತ್ತಾಯಿಸಿ ಹೈಕಮಾಂಡ್ಗೆ ಪತ್ರ ಬರೆದಿದ್ದರು.
ಸೋಮಣ್ಣ ಅವರ ಹೊಸ ಬೇಡಿಕೆಗಳು ಬಿಜೆಪಿಯಲ್ಲಿ ದಿಗಲನ್ನು ಹುಟ್ಟಿಸಿವೆ. ಕಾರಣ, ಹಳೇ ಮೈಸೂರು ಭಾಗದಲ್ಲಿ ಸೋಮಣ್ಣನವರು ಲಿಂಗಾಯತರ ವರ್ಚಸ್ವಿ ನಾಯಕರಾಗಿದ್ದಾರೆ. ವಿಧಾನಸಭೆ ಚುಣಾವಣೆಯಲ್ಲಿ ಅವರನ್ನು ಬಲಿಪಶು ಮಾಡಲಾಯಿತು ಎಂದು ಲಿಂಗಾಯರು ಮುನಿಸಿಕೊಂಡಿದ್ದಾರೆ ಎಂಬ ಮಾತುಗಳು ಹೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಬೇಡಿಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಲಿಂಗಾಯರನ್ನು ಕಡೆಗಣಿಸಿದೆ ಎಂಬ ಹೇಳಲಾಗುತ್ತಿದೆ. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರಿಗೆ ಬಿಜೆಪಿ ಅವಮಾನ ಮಾಡಿದೆ. ಸೋಮಣ್ಣ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲಾಗಿದೆ ಎಂದು ಪಕ್ಷದ ನಾಯಕರೇ ಹೇಳಿಕೆ ನೀಡಿದ್ದಾರೆ. ಒಂದು ವೇಳೆ, ಸೋಮಣ್ಣ ಅವರ ಬೇಡಿಕೆಯನ್ನು ಈಡೇರಿಸದೇ ಹೋದರೆ ಬಿಜೆಪಿ ಮತ್ತಷ್ಟು ಹಾನಿಯಾಗಬಹುದು ಎಂದು ಹೇಳಲಾಗುತ್ತದೆ.
ಚುನಾವಣಾ ಫಲಿತಾಂಶ ಪ್ರಕಟಗೊಂಡು 60 ದಿನಗಳು ಕಳೆದರೂ ಬಿಜೆಪಿ ಇನ್ನೂ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಹೆಸರನ್ನು ಘೋಷಿಸಿಲ್ಲ. ಕಳೆದ ವರ್ಷ ಕೊನೆಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿಯನ್ನು ಚುನಾವಣೆ ಮುಗಿಯುವವರೆಗೆ ವಿಸ್ತರಿಸಲಾಯಿತು. ಅವರ ಸ್ಥಾನವನ್ನು ಬದಲಾಯಿಸುವ ಬಗ್ಗೆ ಪಕ್ಷವು ಇನ್ನೂ ನಿರ್ಧರಿಸಿಲ್ಲ.












Click it and Unblock the Notifications