Karnataka Budget 2023: ಫೆ. 10 ರಿಂದ 24 ರವರೆಗೆ ಬಜೆಟ್ ಅಧಿವೇಶನ, ವಿಧಾನಸೌಧದ ಸುತ್ತ ನಿಷೇಧಾಜ್ಞೆ
ವಿಧಾನಸೌಧದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಬೆಂಗಳೂರು, ಫೆಬ್ರವರಿ. 08: ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಫೆ.10 ರಿಂದ 24ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಪೊಲಿಸ್ ಇಲಾಖೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುತ್ತಿದೆ.
ಫೆಬ್ರವರಿ 10ರಿಂದ 24ರ ವರೆಗೆ ವಿಧಾನಸೌಧದಲ್ಲಿ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಅಧಿವೇಶನದ ಕಲಾಪಕ್ಕೆ ಅಡ್ಡಿ, ಸಾರ್ವಜನಿಕ ಶಾಂತಿ ಭಂಗ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿ ಐಪಿಸಿ ಸೆಕ್ಷನ್ 144 ರ ಅಡಿಯಲ್ಲಿ ತಡೆಯಾಜ್ಞೆ ನೀಡಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಒಂದೇ ಸ್ಥಳದಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರಿ ಮೆರವಣಿಗೆ, ಪ್ರತಿಭಟನೆ ನಡೆಸುವಂತಿಲ್ಲ. ದೈಹಿಕ ಹಿಂಸೆಗೆ ಉಪಯೋಗಿಸುವ ಆಯುಧ, ಕಲ್ಲು, ಇಟ್ಟಿಗೆಗಳನ್ನು ಕೊಂಡೊಯ್ಯುವಂತಿಲ್ಲ. ಸ್ಫೋಟಕಗಳನ್ನು ಸಿಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದರ ಜೊತೆಗೆ ಯಾವುದೇ ಪ್ರತಿಕೃತಿಗಳನ್ನು ಪ್ರದರ್ಶಿಸುವಂತಿಲ್ಲ ಅಥವಾ ಸುಡುವಂತಿಲ್ಲ ಎಂದು ಆದೇಶಿಸಲಾಗಿದೆ.
ವಿವಿಧ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜಕೀಯ ಪಕ್ಷಗಳು ವಿಧಾನಸೌಧ ಮುತ್ತಿಗೆ, ಧರಣಿ ಕಾರ್ಯಕ್ರಮ ನಡೆಸುವ ಸಾಧ್ಯತೆಗಳಿರುತ್ತವೆ.

ಫೆಬ್ರವರಿ 17ರಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. 2023ರ ವಿಧಾನಸಭಾ ಚುನಾವಣೆ ಸಮಯದಲ್ಲೇ ಬಜೆಟ್ ಮಂಡನೆಯಾಗಲಿದ್ದು, ಮತ್ತೆ ಅಧಿಕಾರಕ್ಕೆ ಏರುವ ಪ್ರಯತ್ನದಲ್ಲಿರುವ ಬಿಜೆಪಿ ರಾಜ್ಯದ ಜನರಿಗೆ ಭರ್ಜರಿ ಕೊಡುಗೆ ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಇನ್ನು, ಬಜೆಟ್ ಮಂಡನೆ ಬೆನ್ನಲ್ಲೆ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಚಿನ್ನದ ಬೆಲೆ 60 ಸಾವಿರ ಗಡಿ ದಾಟಿದ್ದು, ಬಂಗಾರದ ಜತೆಗೆ ಬೆಳ್ಳಿ ಬೆಲೆಯೂ ಏರಿಕೆಯಾಗಿದ್ದು ಕೆ.ಜಿ.ಗೆ 75 ಸಾವಿರ ರೂಪಾಯಿಯಾಗಿದೆ.












Click it and Unblock the Notifications