Karnataka Budget 2024: ರೈತರನ್ನು ಮದುವೆಯಾಗುವ ಕನ್ಯೆಯರಿಗೆ 5 ಲಕ್ಷ ಪ್ರೋತ್ಸಾಹ ಧನ ನೀಡಿ!
ಬೆಂಗಳೂರು, ಫೆಬ್ರವರಿ.12: ಈ ಬಾರಿಯ ರಾಜ್ಯ ಬಜೆಟ್ಗೂ ಮುನ್ನ '2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ'ಗಳು ನಡೆಯುತ್ತಿವೆ. ಭಾನುವಾರ ರಾಜ್ಯ ರೈತ ಸಂಘದ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಈ ವೇಳೆ ರೈತ ಮುಖಂಡರು ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ.
ಈ ಬಾರಿಯ ಬಜೆಟ್ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಹಾಗೂ ಯುವ ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಐದು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಮನವಿ ಮಾಡಿರುವುದಾಗಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಮಾಹಿತಿ ನೀಡಿದ್ದಾರೆ.

ಸಂಪೂರ್ಣ ಸಾಲ ಮನ್ನಾ ಮಾಡಲು ಒತ್ತಾಯ
ಮುಖ್ಯಮಂತ್ರಿಗಳ ಜೊತೆಗಿನ ಸಭೆ ಬಳಿಕ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, "ಕೃಷಿ ಇಂದು ದಿಕ್ಕು ತಪ್ಪಿದೆ. ಕೃಷಿಯನ್ನು ಉಳಿಸಲು ಬಜೆಟ್ನಲ್ಲಿ ಹೆಚ್ಚಿನ ಒತ್ತು ಕೊಡಬೇಕು. ರೈತ ಪರ ಬಜೆಟ್ ಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು. ರೈತರು ಸಾಲದ ಸುಳಿಗೆ ಸಿಲುಕದಂತೆ ಕೃಷಿ ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದೇವೆ" " ಎಂದಿದ್ದಾರೆ.
ರಾಜ್ಯದಲ್ಲಿ ಮುಖ್ಯವಾಗಿ ಬರದ ಸಮಸ್ಯೆ ಇದೆ. ಬರಕ್ಕೆ ಶಾಶ್ವತ ಪರಿಹಾರ ಸಿಗಬೇಕು ಎಂದರೆ ಸಣ್ಣ ನೀರಾವರಿಗೆ ಒತ್ತು ಕೊಡಬೇಕು. 10 ವರ್ಷದ ಕಾರ್ಯಯೋಜನೆಯನ್ನು ಘೋಷಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ರೈತರನ್ನು ಮದುವೆಯಾಗುವ ಕನ್ಯೆಯರಿಗೆ ಪ್ರೋತ್ಸಾಹ ಧನ
ಇನ್ನು, ರೈತರನ್ನು, ರೈತರ ಮಕ್ಕಳನ್ನು ಮದುವೆಯಾಗಲು ಹೆಣ್ಣುಮಕ್ಕಳು ಸಿಗುತ್ತಿಲ್ಲ. ಹೀಗಾಗಿ 45 ವರ್ಷವಾದರೂ ಅವರಿಗೆ ಮದುವೆ ಆಗುತ್ತಿಲ್ಲ. ಇದರಿಂದ ಕೃಷಿಗೆ ಆದ್ಯತೆ ಕೂಡ ಸಿಗುತ್ತಿಲ್ಲ. ಹೀಗಾಗಿ ರೈತರನ್ನು ಮದುವೆ ಆಗುವ ಕನ್ಯೆಯರಿಗೆ ಐದು ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ವಾಪಸ್ ಪಡೆದು ಮಾತು ಉಳಿಸಿಕೊಳ್ಳಬೇಕು. ಈ ಬಗ್ಗೆ ಬಜೆಟ್ನಲ್ಲೇ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಬೇಕು. ಕರ ನಿರಾಕರಣ ಚಳವಳಿಯ ಭಾಗವಾಗಿ ಬಾಕಿ ಉಳಿದಿರುವ ರೈತ ಗೃಹ ವಿದ್ಯುತ್ ಬಿಲ್ ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಮನವಿ ಮಾಡಿದ್ದೇವೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ರೈತ ಸಂಘ ಸಂಸ್ಥೆಗಳ ಸುಮಾರು 218 ಮಂದಿ ಪ್ರತಿನಿಧಿಗಳು ಹಾಗೂ ರೈತ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದ್ದರು. ಸಭೆಯಲ್ಲಿ ಪಶುಸಂಗೋಪನೆ ಸಚಿವ ವೆಂಕಟೇಶ್ ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘಟನೆಗಳ ಮುಖಂಡರಾದ ಬಡಗಲಾಪುರ ನಾಗೇಂದ್ರ, ಎಚ್.ಆರ್ .ಬಸವರಾಜಪ್ಪ, ವೀರಸಂಗಯ್ಯ, ಚುಕ್ಕಿ ನಂಜುಂಡಸ್ವಾಮಿ, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರಾದ ಸುನಂದಾ ಜಯರಾಂ ಸೇರಿದಂತೆ ವಿವಿಧ ರೈತ ಸಂಘಟನೆಗಳ 218 ಮಂದಿ ಮುಖಂಡರು ಉಪಸ್ಥಿತರಿದ್ದರು.












Click it and Unblock the Notifications