ಬಿಬಿಎಂಪಿ ವಾರ್ಡ್ಗಳ ಸಂಖ್ಯೆ 225ಕ್ಕೆ ಏರಿಕೆ: ಚುನಾವಣೆ ಮುಂದೂಡಿಕೆಗೆ ಸರ್ಕಾರ ಪ್ರಯತ್ನ
ಬೆಂಗಳೂರು, ಸೆಪ್ಟೆಂಬರ್ 4: ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವ ದಿನ ಸಮೀಪಿಸುತ್ತಿರುವಂತೆಯೇ ರಾಜ್ಯ ಸರ್ಕಾರ ಬಿಬಿಎಂಪಿಯ ವಾರ್ಡ್ಗಳನ್ನು ಹೆಚ್ಚಿಸಲು ಮುಂದಾಗಿದೆ. ಗುರುವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಬಿಬಿಎಂಪಿಯ ವಾರ್ಡ್ಗಳ ಸಂಖ್ಯೆಯನ್ನು 198ರಿಂದ 225ಕ್ಕೆ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಜತೆಗೆ ಚುನಾವಣೆಯನ್ನು ಮುಂದೂಡುವ ಬಗ್ಗೆ ಹೈಕೋರ್ಟ್ನ ಅನುಮತಿ ಕೋರುವ ಬಗ್ಗೆ ಸಹ ಸಮಾಲೋಚನೆ ಮಾಡಲಾಗಿದೆ.
ಬಿಬಿಎಂಪಿಯ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಪ್ರತ್ಯೇಕ ಸಭೆ ನಡೆಸಲಿದ್ದೇವೆ. ಈಗಿರುವ 198 ವಾರ್ಡ್ಗಳ ಸಂಖ್ಯೆಯನ್ನು 225ಕ್ಕೆ ಹೆಚ್ಚಳ ಮಾಡಲು ಯೋಚಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಗುರುವಾರ ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಬಿಬಿಎಂಪಿ ಕುರಿತು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ಜಂಟಿ ಸಲಹಾ ಸದನ ಸಮಿತಿಯು ಸರ್ಕಾರವು ವಿಧಾನಸಭೆ ಮುಂದಿರಿಸಿರುವ ಬಿಬಿಎಂಪಿ ಮಸೂದೆಯನ್ನು ಪರಿಶೀಲಿಸುತ್ತಿದೆ. ಸಮಿತಿಯ ಸಭೆಯಲ್ಲಿ ವಾರ್ಡ್ಗಳ ಸಂಖ್ಯೆ ಏರಿಕೆಯ ವಿಚಾರ ಪ್ರಸ್ತಾಪಿಸಿ ಅದರ ಬಗ್ಗೆ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ನಡೆಯುವ ಚರ್ಚೆಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಮುಂದೆ ಓದಿ.
ಚುನಾವಣೆ ಮುಂದೂಡುವ ತಂತ್ರ
ಆದರೆ, ಪ್ರಸ್ತುತ ರಾಜ್ಯ ಸರ್ಕಾರವು ಬಿಬಿಎಂಪಿ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದೆ. ಒಂದು ವಾರ್ಡ್ಗೆ 40,000-42,000 ಜನಸಂಖ್ಯೆ ಇರಬೇಕು ಎಂದು ತಿಳಿಸಿದರು. ವಾರ್ಡ್ಗಳ ಮರುವಿಂಗಡಣೆಯು ಚುನಾವಣೆ ಮುಂದೂಡುವ ತಂತ್ರ ಎಂಬ ಆರೋಪ ಕೇಳಿಬಂದಿದೆ.
ಚುನಾವಣೆ ಮುಂದೂಡಿಕೆ ಅನಿವಾರ್ಯ
ವಾರ್ಡ್ಗಳ ಪುನರ್ ವಿಂಗಡಣೆಯು ನಡೆಯುವಂತಾದರೆ ಕೆಲವು ಸಮಯದವರೆಗೆ ಚುನಾವಣೆಯನ್ನು ಮುಂದೂಡಬೇಕಾಗುತ್ತದೆ. ಇದಕ್ಕಾಗಿ ನ್ಯಾಯಾಲಯದ ಅನುಮತಿ ಕೇಳಲಾಗುವುದು. ಈಗಿಗಿನ ಬಿಬಿಎಂಪಿ ಸಮಿಯ ಅವಧಿಯು ಈ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಅದಕ್ಕೂ ಮುನ್ನ ನ್ಯಾಯಾಲಯವನ್ನು ಸಂಪರ್ಕಿಸಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.
ಡ್ರಗ್ಸ್ ಮಾಫಿಯಾ: ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ವಲಯಗಳ ಸಂಖ್ಯೆ ಹೆಚ್ಚಳ
ವಾರ್ಡ್ಗಳ ಮರು ವಿಂಗಡಣೆಯಿಂದ ಬಿಬಿಎಂಪಿ ವ್ಯಾಪ್ತಿಯೊಳಗೆ ಮತ್ತಷ್ಟು ಹೊಸ ಪ್ರದೇಶಗಳು ಸಹ ಸೇರಿಕೊಳ್ಳಲಿವೆ. ಜತೆಗೆ ವಲಯಗಳ ಸಂಖ್ಯೆ 8 ರಿಂದ 15ಕ್ಕೆ ಏರಿಕೆಯಾಗಲಿವೆ. ಶುಕ್ರವಾರ ನಡೆಯುವ ಜಂಟಿ ಸಲಹಾ ಸದನ ಸಮಿತಿಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.
ಮಸೂದೆ ಮಂಡನೆ ವೇಳೆ ಆಕ್ಷೇಪ
ಮಾರ್ಚ್ನಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರ್ಕಾರ 'ಬಿಬಿಎಂಪಿ ಮಸೂದೆ 2020'ಯನ್ನು ಮಂಡಿಸಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಶಾಸಕ ಎಸ್. ರಘು ಅಧ್ಯಕ್ಷತೆಯಲ್ಲಿ ಆಗಸ್ಟ್ ತಿಂಗಳಲ್ಲಿ ಜಂಟಿ ಸಲಹಾ ಸದನ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಇನ್ನೂ ವರದಿ ನೀಡಿಲ್ಲ. ಅದಕ್ಕೂ ಮೊದಲೇ ವಾರ್ಡ್ಗಳ ಸಂಖ್ಯೆಯನ್ನು 225ಕ್ಕೆ ಹೆಚ್ಚಿಸಲು ಸರ್ಕಾರ ತರಾತುರಿಯಲ್ಲಿ ಮುಂದಾಗಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ಮತ್ತೆ ಮತದಾರರ ಪಟ್ಟಿ ಪರಿಷ್ಕರಣೆ
ಬಿಬಿಎಂಪಿ ವಾರ್ಡ್ಗಳ ಮರುವಿಂಗಡಣೆ ಸಂಬಂಧ ಮಾರ್ಚ್ 2ರಂದು ಕರಡು ಅಧಿಸೂಚನೆ ಪ್ರಕಟಿಸಿದ್ದ ಸರ್ಕಾರ, ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಜೂನ್ 23ರಂದು ಅಂತಿಮ ಅಧಿಸೂಚನೆ ಪ್ರಕಟಿಸಿತ್ತು. ಮರುವಿಂಗಡಣೆಗೊಂಡ ಬಿಬಿಎಂಪಿ ವಾರ್ಡ್ಗಳಲ್ಲಿನ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಬಿಬಿಎಂಪಿಗೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ ಆರಂಭವಾಗಿದೆ. ಸೆ. 10ರಂದು ಬಿಬಿಎಂಪಿ ಕೌನ್ಸಿಲ್ ಅವಧಿ ಮುಕ್ತಾಯಗೊಳ್ಳುವುದರಿಂದ ಈ ವೇಳೆಗಾಗಲೇ ಚುನಾವಣೆಗೆ ಸಿದ್ಧತೆ ನಡೆಯಬೇಕಿತ್ತು. ಆದರೆ ಈಗ ವಾರ್ಡ್ಗಳ ಮರುವಿಂಗಡಣೆ ಮಾಡಲು ಮುಂದಾದರೆ ಪುನಃ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಬೇಕಾಗುತ್ತದೆ. ಇದರಿಂದ ಚುನಾವಣೆ ಮತ್ತಷ್ಟು ವಿಳಂಬವಾಗುತ್ತದೆ.