ಕೊರೊನಾ ಎಫೆಕ್ಟ್: ಸರ್ಕಾರಿ ವೈದ್ಯರು, ಗುತ್ತಿಗೆ ಸಿಬ್ಬಂದಿ ರಜೆ ರದ್ದು
ಬೆಂಗಳೂರು, ಮಾರ್ಚ್.13: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದೆ. ದೇಶದಲ್ಲೇ ಮಾರಕ ಸೋಂಕಿಗೆ ಕರ್ನಾಟಕದ ಕಲಬುರಗಿಯಲ್ಲಿ ಮೊದಲ ವ್ಯಕ್ತಿ ಪ್ರಾಣ ಬಿಟ್ಟಿದ್ದು ಆಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದೆ.
ರಾಜ್ಯದ ಎಲ್ಲ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿ ಮತ್ತು ಅರೆ ಸಿಬ್ಬಂದಿಗೆ ನೀಡುತ್ತಿದ್ದ ವಾರದ ರಜೆಯನ್ನು ಕೂಡಾ ರದ್ದುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
Coronavirus Effect: ಕಲಬುರಗಿಯಲ್ಲಿ 46ಕ್ಕೂ ಅಧಿಕ ಮಂದಿ ಮೇಲೆ ನಿಗಾ
ಕಲಬುರಗಿಯಲ್ಲಿ ಕೊರೊನಾ ವೈರಸ್ ಗೆ ಮಹ್ಮದ್ ಹುಸೇನ್ ಸಿದ್ದಿಕಿ ಎಂಬ 76 ವರ್ಷದ ವೃದ್ಧ ಬಲಿಯಾಗಿದ್ದು, ಮಾರಕ ಸೋಂಕು ಮತ್ತು ಸೋಂಕಿತರ ಬಗ್ಗೆ ಹೆಚ್ಚು ನಿಗಾ ವಹಿಸುವಂತೆ ವೈದ್ಯರಿಗೆ ಸರ್ಕಾರವು ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳ ರಜೆ ರದ್ದುಗೊಳಿಸಿ ಆದೇಶ
ರಾಜ್ಯದ ಕೆಲವು ಭಾಗಗಳಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ಸಲುವಾಗಿ ಆರೋಗ್ಯ ಇಲಾಖೆಯು ತುರ್ತು ಕ್ರಮಗಳನ್ನು ಕೈಗೊಂಡಿದೆ. ಸದರಿ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಲು ದಿನಾಂಕ.14-03-2020(ಎರಡನೇ ಶನಿವಾರ), 15-03-2020 ಭಾನುವಾರದ ರಜೆಯನ್ನು ರದ್ದುಗೊಳಿಸಲಾಗಿದೆ.
ಕೊರೊನಾ ಭೀತಿ ಕಡಿಮೆಯಾಗುವವರೆಗೂ ರಜೆಯಿಲ್ಲ
ಇದರ ಜೊತೆಗೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವವರೆಗೂ ಎಲ್ಲ ಸಾರ್ವತ್ರಿಕ ರಜೆ ದಿನಗಳೆಂದು ಆರೋಗ್ಯ ಇಲಾಖೆ ಅಧೀನದಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರುಗಳು ಕಚೇರಿಯ ಸಿಬ್ಬಂದಿ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಎಲ್ಲಾ ಖಾಯಂ ಮತ್ತು ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುವ ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ವೈದ್ಯರು, ಸಿಬ್ಬಂದಿಗೆ ರಜೆ ನೀಡದಂತೆ ಸೂಚನೆ ರವಾನೆ
ಇನ್ನು, ಪರಿಸ್ಥಿತಿ ಸುಧಾರಿಸುವವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು. ಆಸ್ಪತ್ರೆಯ ಮತ್ತು ಕಚೇರಿ ಮುಖ್ಯಸ್ಥರು ಎಲ್ಲ ವೈದ್ಯರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯಾವುದೇ ರೀತಿ ರಜೆ ಮಂಜೂರು ಮಾಡದಂತೆ ಸೂಚನೆ ನೀಡಲಾಗಿದೆ.
ರಜೆ ಮೇಲೆ ಹೋದವರು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ
ರಾಜ್ಯದಲ್ಲಿ ಕೊರೊನಾ ವೈರಸ್ ನಿಂದಾಗ ಜನರು ಆತಂಕದಲ್ಲಿ ದಿನ ಕಳೆಯುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಮಧ್ಯೆ ರಜೆ ಮೇಲೆ ತೆರಳಿರುವ ವೈದ್ಯರು ತಕ್ಷಣ ಕರ್ತವ್ಯಕ್ಕೆ ಹಾಜಾರಾಗತಕ್ಕದ್ದು ಎಂದು ಆರೋಗ್ಯ ಇಲಾಖೆಯು ತನ್ನ ಸುತ್ತೋಲೆಯಲ್ಲಿ ಸೂಚಿಸಿದೆ.