DK Shivakumar: ಕೇವಲ ನಾಯಕತ್ವ ಎಂದರೆ ರಾಜಕೀಯ ಮಾತ್ರವಲ್ಲ: ಡಿಕೆ ಶಿವಕುಮಾರ್
ಬೆಂಗಳೂರು, ನವೆಂಬರ್ 30: ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ. ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ ಉಳಿಸಲಾರ. ನಿಮ್ಮ ಮುಂದಿನ ಪೀಳಿಗೆಗೆ ಅರೆಭಾಷಿಕರ ಸಂಸ್ಕೃತಿ, ಆಚಾರ, ವಿಚಾರಗಳನ್ನು ದಾಟಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ನಡೆದ 2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವಿಶಾಲವಾದ ಪ್ರಪಂಚದಲ್ಲಿ ನಾವು ಎಲ್ಲಿ ಬೇಕಾದರೂ ಬದುಕಬಹುದು. ಆದರೆ ನಮ್ಮ ಮೂಲವನ್ನು ಮರೆಯಬಾರದು. ನಾವು ಎಲ್ಲೇ ಇದ್ದರು ನಮ್ಮ ಸಾಹಿತ್ಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕೆಲಸ ಮಾಡಬೇಕು.

ಒಂದು ಸಮಾಜ ಅಕ್ಷರ ಮರೆತರೆ ಕಲಿಸಬಹುದು. ಆದರೆ ಕಲೆ, ಸಂಸ್ಕೃತಿ ಮರೆತರೆ ಮತ್ತೆ ಕಲಿಸುವುದಕ್ಕೆ ಸಾಧ್ಯವಿಲ್ಲ. ನಮ್ಮ ಹುಟ್ಟು ಸಾವಿನ ಮಧ್ಯದಲ್ಲಿ ಮನುಷ್ಯ ಏನು ಸಾಧನೆ ಮಾಡುತ್ತಾನೆ ಎನ್ನುವುದು ಮುಖ್ಯ ಎಂದರು.
ಕೇವಲ ನಾಯಕತ್ವ ಎಂದರೆ ರಾಜಕೀಯ ಮಾತ್ರವಲ್ಲ
ನಿಮ್ಮ ಜನಸಂಖ್ಯೆ ಕೇವಲ 4 ಲಕ್ಷ ಮಾತ್ರವಿದೆ ಎಂದು ಹಿಂಜರಿಕೆ ಬೇಡ. ಒಂದು ಪಬುದ್ಧ ನಾಯಕತ್ವ ಅಥವಾ ತೀರ್ಮಾನ ನಿಮ್ಮನ್ನು ಎಲ್ಲಿಗೆ ಬೇಕಾದರೂ ಕೊಂಡೊಯ್ಯಬಹುದು. ನಾಯಕನಾದವನಿಗೆ ಲಕ್ಷಾಂತರ ಜನ ಹಿಂಬಾಲಕರು ಬೇಡ. ಧೈರ್ಯ ಹಾಗೂ ತೀರ್ಮಾನ ಬೇಕು. ಅರೇಭಾಷಿಕರಾದ ನಿಮ್ಮ ಜನಸಂಖ್ಯೆ ಕಡಿಮೆ ಇದ್ದರೂ ಅನೇಕರು ದೊಡ್ಡ ಸ್ಥಾನಕ್ಕೆ ಹೋಗಿಲ್ಲವೇ? ಕೇವಲ ನಾಯಕತ್ವ ಎಂದರೆ ರಾಜಕೀಯ ಮಾತ್ರವಲ್ಲ. ಔದ್ಯೋಗಿಕ, ಶಿಕ್ಷಣ, ಸಾಹಿತ್ಯ, ಸಂಗೀತ ಹೀಗೆ ಅನೇಕ ಕ್ಷೇತ್ರದಲ್ಲಿ ಅರೆಭಾಷಿಕರು ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಅರೆಭಾಷೆ ಸಂಘಟನೆಯವರು ತಮ್ಮ ಚಟುವಟಿಕೆಗಳನ್ನು ನಡೆಸಲು ನಿವೇಶನದ ಅವಶ್ಯಕತೆಯಿದೆ ಎಂದು ಮನವಿ ಸಲ್ಲಿಸಿದ್ದಾರೆ. ನನ್ನ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಲಭ್ಯತೆ ನೋಡಿಕೊಂಡು ಜಾಗ ನೀಡಲಾಗುವುದು. ರಾಜಕೀಯ ಹೋಗುತ್ತದೆ, ಬರುತ್ತದೆ. ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದು ತಿಳಿಸಿದರು.
ನನ್ನ ಸಿಎಂ ಮಧ್ಯ ಭಿನ್ನಾಭಿಪ್ರಾಯ ಇಲ್ಲ
ಇದಕ್ಕೂ ಮುನ್ನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಧ್ಯ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಜನರು ನಮ್ಮ ಮೇಲಿಟ್ಟ ನಿರೀಕ್ಷೆ ಹುಸಿಯಾಗದಂತೆ ಕೆಲಸ ಮಾಡಬೇಕು. ಮುಂದಿನ 2028 ಚುನಾವಣೆಯೇ ನಮ್ಮ ಗುರಿ ಎನ್ನುವ ಮೂಲಕ ಅವರು ಸರ್ಕಾರದಲ್ಲಿ ಒಡಕು ಉಂಟಾಗಿದೆ ಎಂಬ ಆರೋಪ ತಳ್ಳಿ ಹಾಕಿದರು.












Click it and Unblock the Notifications