ಕಾಂಗ್ರೆಸ್ ರಾಜಭವನ ಚಲೋ: ಈಶ್ವರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು
ಬೆಂಗಳೂರು, ಫೆಬ್ರವರಿ 22: ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ನೀಡಿದ ಹೇಳಿಕೆ ಖಂಡಿಸಿ ರಾಜಭವನ ಚಲೋ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯಪಾಲರನ್ನು ಭೇಟಿ ಮಾಡಲಿರುವ ಕಾಂಗ್ರೆಸ್ ನಿಯೋಗ ಸಚಿವರ ವಿರುದ್ಧ ದೂರು ಸಲ್ಲಿಸಲಿದೆ.
ಮಂಗಳವಾರ ವಿಧಾನಸೌಧದಿಂದ ರಾಜಭವನದವರೆಗೂ ಕಾಂಗ್ರೆಸ್ ನಾಯಕರ ನಿಯೋಗ ಪಾದಯಾತ್ರೆ ನಡೆಯಸಲಿದೆ. ತದನಂತರ ಸಂಜೆ 4 ಗಂಟೆಗೆ ರಾಜಭವನಕ್ಕೆ ತಲುಪಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಿದೆ.
ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ನೀಡಿದ ಹೇಳಿಕೆಯ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು ಸಲ್ಲಿಸಲಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿಕೊಳ್ಳಲಿದೆ.

ಶಿವಮೊಗ್ಗ ಘಟನೆ ಬಗ್ಗೆ ರಾಜ್ಯಪಾಲರಿಗೆ ದೂರು:
ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಗ್ಗೆಯೂ ಕಾಂಗ್ರೆಸ್ ನಿಯೋಗ ರಾಜ್ಯಪಾಲರ ಗಮನಕ್ಕೆ ತರಲಿದೆ. ಈ ಹತ್ಯೆ ನಂತರದಲ್ಲಿ ಸಚಿವರು ನೀಡಿದ ಪ್ರಚೋದನಕಾರಿ ಹೇಳಿಕೆ ಮತ್ತು ಕಾನೂನು ಸುವ್ಯವಸ್ಥೆಯ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರು ಸಲ್ಲಿಸಲಿದೆ.
ವಿಧಾನಸಭೆ, ಪರಿಷತ್ ನಲ್ಲಿ ಅಹೋರಾತ್ರಿ ಧರಣಿ:
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಹಿನ್ನೆಲೆ ಸಚಿವ ಕೆ ಎಸ್ ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಕಾಂಗ್ರೆಸ್ ಐದು ದಿನಗಳಿಂದ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ. ಮಂಗಳವಾರ ಕೂಡ ಕಾಂಗ್ರೆಸ್ ನಾಯಕರು ತಮ್ಮ ಅಹೋರಾತ್ರಿ ಧರಣಿ ಮುಂದುವರಿಸಲು ನಿರ್ಧರಿಸಿದ್ದಾರೆ.












Click it and Unblock the Notifications