ಕರ್ನಾಟಕ ಚುನಾವಣೆ: 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿಯಿಂದ ಸಮೀಕ್ಷೆ
ಬೆಂಗಳೂರು, ಮಾರ್ಚ್. 30: ಕರ್ನಾಟಕದಲ್ಲಿ ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು (ಬಿಜೆಪಿ) ಚುನಾವಣೆಗೆ ಅಭ್ಯರ್ಥಿಗಳನ್ನು ನಿರ್ಧರಿಸಲು ಮಾರ್ಚ್ 31 ರಂದು 224 ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲಿದೆ ಎಂದು ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್ಸಿ ರವಿಕುಮಾರ್ ಬುಧವಾರ ತಿಳಿಸಿದ್ದಾರೆ.
ಈಗಾಗಲೇ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ ಇತರೆ ಪಕ್ಷಗಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ, ಬಿಜೆಪಿ ಮಾತ್ರ ಇದುವರೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ಹೀಇಗಾಗಿ ಮಾರ್ಚ್ 31 ರಂದು 224 ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಿದೆ.

"ಮಾರ್ಚ್ 31 ರಂದು ಒಂದೇ ದಿನದಲ್ಲಿ ನಾವು ಎಲ್ಲಾ 224 ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸುತ್ತಿದ್ದೇವೆ. ರಾಜ್ಯಾದ್ಯಂತ 20,000 ಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ತಮ್ಮ ಅಭಿಪ್ರಾಯಗಳನ್ನು ನೀಡಲಿದ್ದಾರೆ. ಕೋರ್ ಕಮಿಟಿ ಸದಸ್ಯರು ಹಾಗೂ ಪಕ್ಷದ ಇತರೆ ಸದಸ್ಯರು ಮೂರು ದಿನಗಳ ಕಾಲ ಪ್ರತಿ ಕ್ಷೇತ್ರಕ್ಕೆ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ನಂತರ ಸಂಸದೀಯ ಮಂಡಳಿ ಟಿಕೆಟ್ ಬಗ್ಗೆ ನಿರ್ಧರಿಸಲಿದೆ" ಎಂದು ಎಂಎಲ್ಸಿ ರವಿಕುಮಾರ್ ಹೇಳಿದ್ದಾರೆ.
ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಮುಂದಿನ ತಿಂಗಳ ಮೊದಲ ವಾರದಲ್ಲಿ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಆದರೆ, ಪಟ್ಟಿ ಬಿಡುಗಡೆ ನಂತರ ಪಕ್ಷದಲ್ಲಿ ಅಸಮಾಧಾನವೂ ಭುಗಿಲೇಳುವ ಸಾಧ್ಯತೆಯಿದೆ.
'ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿಯು ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಮರಳುವ ನಿರೀಕ್ಷೆಯಿರುವುದರಿಂದ ತೀವ್ರ ರಾಜಕೀಯ ಹೋರಾಟವನ್ನು ಎದುರಿಸಬೇಕಾಗಿದೆ. ಬಿಜೆಪಿ ಸ್ವಂತ ಬಲದಲ್ಲಿ, ಬಹುಮತ ಪಡೆದು ಸರಕಾರ ರಚಿಸಲಿದೆ. ಲಕ್ಷಾಂತರ ಕಾರ್ಯಕರ್ತರ ಆಸೆ- ಅಭಿಲಾಷೆಗಳಿಗೆ ಪ್ರಾತಿನಿಧ್ಯದ ರೂಪದಲ್ಲಿ ಬಹುಮತ ಪಡೆಯಲಿದೆ' ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ವಿಶ್ವಾಶ ವ್ಯಕ್ತಪಡಿಸಿದ್ದಾರೆ.

" ಪಕ್ಷದ 'ವಿಜಯ ಸಂಕಲ್ಪ ಯಾತ್ರೆ' ಯಶಸ್ವಿಯಾಗಿದ್ದು, 15 ಕ್ಷೇತ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೂರ್ನಾಲ್ಕು ತಿಂಗಳ ಹಿಂದಿನ ಜನರ ಮನಸ್ಥಿತಿಯಲ್ಲಿ ಈಗ ದೊಡ್ಡ ವ್ಯತ್ಯಾಸವಿದೆ. ಪಕ್ಷಕ್ಕೆ ಸ್ಪಷ್ಟ ಬಹುಮತ ಬರುವ ವಿಶ್ವಾಸವಿದೆ, ರಾಜ್ಯದ ಕಾಮನ್ಮ್ಯಾನ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸರಕಾರ ಮೀಸಲಾತಿಯನ್ನು ಹೆಚ್ಚಿಸುವ ಮೂಲಕ ಇತಿಹಾಸ ಬರೆದಿದೆ" ಎಂದಿದ್ದಾರೆ.
"10 ವರ್ಷಕ್ಕೆ ಒಮ್ಮೆಯಾದರೂ ಮೀಸಲಾತಿ ಪ್ರಗತಿ ಪರಿಶೀಲನೆ ಆಗಬೇಕೆಂದು ಡಾ. ಅಂಬೇಡ್ಕರ್ ಅವರೇ ಹೇಳಿದ್ದರು. ಆದರೆ, 60 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷವು ರಾಜ್ಯ- ಕೇಂದ್ರದಲ್ಲಿ ಈ ಕೆಲಸ ಮಾಡಿರಲಿಲ್ಲ ಎಂದು ಟೀಕಿಸಿದ ಅವರು, ಪ್ರಗತಿಯ ದಾರಿ, ವಿಶ್ಲೇಷಣೆ, ಚರ್ಚೆ ಮಾಡಲೇ ಇಲ್ಲ. ಇದು ಈ ದೇಶದ ಎಸ್ಸಿ, ಎಸ್ಟಿ, ಒಬಿಸಿ, ಸಾಮಾನ್ಯ ಜನರ ದುರಂತ" ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.
ಇನ್ನು, ಬಿಜೆಪಿ ಪಕ್ಷದ ಬಗ್ಗೆ ತಿಳಿದಿರುವ ನಾಯಕರ ಪ್ರಕಾರ, ರಾಜ್ಯದಲ್ಲಿ ಎರಡು ಪ್ರಬಲ ಸಮುದಾಯಗಳಾದ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮೀಸಲಾತಿ ನೀಡಿರುವುದು ಮತ್ತು ಬಿಜೆಪಿ ಸರ್ಕಾರ ನಡೆಸಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ ಎಂದು ಹೇಳಿದ್ದಾರೆ.
ಚುನಾವಣೆಗೆ ಪಕ್ಷ ಸಜ್ಜಾಗಿದೆ ಎಂದು ಬುಧವಾರ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದಿದ್ದಾರೆ. "ನಾವು ಸಂಪೂರ್ಣ ಮತ್ತು ಸ್ಪಷ್ಟ ಬಹುಮತವನ್ನು ಪಡೆಯುತ್ತೇವೆ. 2023 ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ" ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಆಗಾಗ್ಗೆ ಭೇಟಿ ನೀಡುತ್ತಿರುವುದು ರಾಜ್ಯದಲ್ಲಿ ಪಕ್ಷಕ್ಕೆ ಸಹಾಯ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.












Click it and Unblock the Notifications