ಕಾಂಗ್ರೆಸ್ ಟಿಕೆಟ್ ಘೋಷಣೆಯಾಗದ 124 ಸ್ಥಾನಗಳ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ಸಭೆ
ಬೆಂಗಳೂರು, ಮಾರ್ಚ್. 27: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಮೇಲೆ ಒತ್ತಡ ಕೂಡ ಹೆಚ್ಚಾಗಿದೆ. ಈಗಾಗಲೇ ಅಭ್ಯರ್ಥಿಗಳ ಒಂದು ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ಗೆ, ಉಳಿದ 100 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವಂತೆ ಆಕಾಂಕ್ಷಿಗಳು ಒತ್ತಾಯಿಸುತ್ತಿದ್ದು, ಈ ಬ್ಗೆಗ ಸೋಮವಾರ ಸ್ಕ್ರೀನಿಂಗ್ ಸಮಿತಿ ಸಭೆ ನಡೆಸಲಿದೆ.
ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕ್ಷೇತ್ರಗಳಲ್ಲಿ ಹೆಚ್ಚು ಪೈಪೋಟಿಯಿಲ್ಲದ ಕಾರಣ ಹೆಸರುಗಳನ್ನು ಅಂತಿಮಗೊಳಿಸಿತ್ತು. ಆದರೆ, ಇದರಲ್ಲೂ ಹಲವು ಅಸಮಾಧಾನ ಹೊಗೆಯಾಡುತ್ತಿದೆ. ಈಗ ಉಳಿದ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲು ಕಾಂಗ್ರೆಸ್ ವರಿಷ್ಠರು ಕಸರತ್ತು ನಡೆಸುತ್ತಿದ್ದಾರೆ.

ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಟಿಕೆಟ್ ಆಕಾಂಕ್ಷಿಗಳು ಪಕ್ಷದ ಮೇಲೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಸೋಮವಾರ ಬೆಂಗಳೂರು ಅಥವಾ ಬೆಂಗಳೂರು ಹೊರವಲಯದಲ್ಲಿ ಎಐಸಿಸಿ ನೇಮಕ ಮಾಡಿರುವ ಸ್ಕ್ರೀನಿಂಗ್ ಸಮಿತಿಯು ಸಭೆ ನಡೆಸಲಿದೆ. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸ್ಕ್ರೀನಿಂಗ್ ಸಮಿತಿ ಅಧ್ಯಕ್ಷ ಮೋಹನ್ ಪ್ರಕಾಶ್, ಸದಸ್ಯರಾದ ನೀರಜ್ ಡಾಂಗಿ, ಮೊಹಮ್ಮದ್ ಜಾವೇದ್ ಪಾಲ್ಗೊಳ್ಳಲಿದ್ದಾರೆ.
ಎರಡನೇ ಪಟ್ಟಿಯನ್ನು ಆದಷ್ಟು ಬೇಗನೇ ಅಂತಿಮಗೊಳಿಸುವ ಜವಾಬ್ದಾರಿ ಸ್ಕ್ರೀನಿಂಗ್ ಕಮಿಟಿ ಮೇಲಿದೆ. ಪಟ್ಟಿ ಘೋಷಣೆ ವಿಳಂಬವಾದರೆ ಬಾಕಿ ಉಳಿದಿರುವ ಕ್ಷೇತ್ರಗಳಲ್ಲಿ ಆಂತರಿಕ ಪೈಪೋಟಿ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ಪಕ್ಷ ಸಂಘಟನೆ ಮತ್ತು ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಬಹುದು ಎಂಬ ಆತಂಕ ಕಾಂಗ್ರೆಸ್ ನಾಯಕರಲ್ಲಿದೆ.

ಹೀಗಾಗಿ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯ ನಂತರ ಸಂಭವನಿಯ ಅಭ್ಯರ್ಥಿಗಳ ಪಟ್ಟಿಯನ್ಉ ನಿರ್ಧರಿಸಲಾಗುತ್ತದೆ. ಈ ಪಟ್ಟಿ ದೆಹಲಿಗೆ ತಲುಪಿ ಅಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಯುತ್ತದೆ. ಬಳಿಕ ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ.
ಚುನಾವಣೆ ಹಿನ್ನೆಲೆ ಈಗಾಗಲೇ ಕಾಂಗ್ರೆಸ್ ಪಕ್ಷ ಬಸ್ ಯಾತ್ರೆ, ಪ್ರಜಾಧ್ವನಿ ಯಾತ್ರೆ ಮೂಲಕ ಅಬ್ಬರದ ಪ್ರಚಾರ ನಡೆಸಿದೆ. ಚುನಾವಣೆಗೆ 224 ಕ್ಷೇತ್ರಗಳ ಪೈಕಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಅಂತಿಮಗೊಳಿಸಿ ಶನಿವಾರ ಬಿಡುಗಡೆ. ಜಾತಿವಾರು ಟಿಕೆಟ್ ಲಭಿಸಿರುವ ಮೊದಲ ಪಟ್ಟಿಯಲ್ಲಿ ಲಿಂಗಾಯತ ಸಮುದಾಯ ಅಗ್ರಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಮೂರನೇ ಸ್ಥಾನದಲ್ಲಿ ಒಕ್ಕಲಿಗ ಸಮುದಾಯವಿದೆ.
ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಹಾಗೂ ಗೊಂದಲಕ್ಕೆ ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕ್ಷೇತ್ರ ವಿಚಾರದಲ್ಲಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಹೈಕಮಾಂಡ್ ಒಪ್ಪಿಗೆ ಸೂಚಿಸಿದರೆ ಕೋಲಾರದಿಂದಲೂ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಅವರೇ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಆರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಮಹಿಳಾ ಅಭ್ಯರ್ಥಿಗಳಾ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಖನೀಜ ಫಾತಿಮಾ, ಸೌಮ್ಯ ರೆಡ್ಡಿ, ರೂಪಕಲಾ ಎಂ ಮತ್ತು ಕುಸುಮಾ ಟಿಕೆಟ್ ಪಡೆದಿದ್ದಾರೆ. ರಾಜಾಜಿನಗರದಿಂದ ಟಿಕೆಟ್ ಬಯಸಿದ್ದ ಭವ್ಯಾ ನರಸಿಂಹಮೂರ್ತಿ ಅವರಿಗೆ ಟಿಕೆಟ್ ಸಿಕ್ಕಿಲ್ಲ.












Click it and Unblock the Notifications