ಪ್ರಧಾನಿ ನರೇಂದ್ರ ಮೋದಿ ಭೇಟಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲವೇ?: ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್.02: ಏಪ್ರಿಲ್ 9 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದು, ಇದನ್ನು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇದು ಮಾದರಿ ನೀತಿ ಸಂಹಿತಿ ಉಲ್ಲಂಘನೆ ಅಲ್ಲವೇ ಎಂದಿದ್ದಾರೆ. ಈ ವರ್ಷ ರಾಜ್ಯಕ್ಕೆ ಪ್ರಧಾನಿಯವರ ಎಂಟನೇ ಭೇಟಿ ಇದಾಗಿದೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, '"ಈ ದೇಶದ ಪ್ರಧಾನಿಯಾಗಿರುವ ಅವರು ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು. ಅವರು ಸರ್ಕಾರಿ ಕಾರ್ಯಕ್ರಮದ ಅಂಗವಾಗಿ ರಾಜ್ಯಕ್ಕೆ ಹೇಗೆ ಬರುತ್ತಾರೆ. ಚುನಾವಣಾ ಆಯೋಗವು ಭೇಟಿಗೆ ಅವಕಾಶ ನೀಡಬಾರದು. ಇಸಿ ಅನುಮತಿ ನೀಡಿದರೆ ಅದು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗುತ್ತದೆ" ಎಂದು ಹೇಳಿದ್ದಾರೆ.

ಹುಲಿ ಯೋಜನೆಯ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಗೆ ಹೋಗುವ ನಿರೀಕ್ಷೆಯಿದೆ.
ಪ್ರಧಾನಿ ಮೋದಿಯವರು ಏಪ್ರಿಲ್ 9 ರಂದು ರಾಜ್ಯ ಭೇಟಿ ನೀಡುವುದು ಖಚಿತವಾಗಿದೆ. ಮೈಸೂರಿಗೆ ಆಗಮಿಸುವ ಅವರು ಬಂಡೀಪುರ ಅರಣ್ಯಕ್ಕೆ ತೆರಳಿ ಹುಲಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೂರು ದಿನಗಳ ಮೆಗಾ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಆದರೆ ಈ ವೇಳೆ ಪ್ರಧಾನಿ ಮೋದಿ ರಾಜಕೀಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಖಚಿತವಾಗಿಲ್ಲ. ಆದರೆ ಬಿಜೆಪಿ ನಾಯಕರು ಮತ್ತು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಅವರ ಭೇಟಿಗೆ ಚುನಾವಣಾ ಆಯೋಗವು ಅವಕಾಶ ನೀಡಬಾರದು. ಇದು ಮಾದರಿ ನಿತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು, ಏಪ್ರಿಲ್ 5 ರಂದು ಕೋಲಾರದಲ್ಲಿ ನಡೆಯಬೇಕಿದ್ದ ರಾಹುಲ್ ಗಾಂಧಿಯವರ 'ಸತ್ಯಮೇವ ಜಯತೆ' ರ್ಯಾಲಿಯನ್ನು ಏಪ್ರಿಲ್ 9ಕ್ಕೆ ಮೈಸೂರಿನಲ್ಲಿ ನಡೆಯಲಿರುವ 'ಪ್ರಾಜೆಕ್ಟ್ ಟೈಗರ್' ಸುವರ್ಣ ಮಹೋತ್ಸವದ ದಿನದಂದು ಮುಂದೂಡಲಾಗಿದೆ. ಸುವರ್ಣ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಳ್ಳಲಿದ್ದಾರೆ. ಪ್ರಾಜೆಕ್ಟ್ ಟೈಗರ್ ಆಚರಣೆ ಕಾರ್ಯಕ್ರಮಕ್ಕೆ ಟಕ್ಕರ್ ನೀಡಲು ಕೋಲಾರದಲ್ಲಿ 'ಸತ್ಯಮೇವ ಜಯತೆ' ಕಾರ್ಯಕ್ರಮದ ದಿನಾಂಕವನ್ನು ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜಾತ್ಯತೀತ ಜನತಾ ದಳ ನಡುವೆ ಚುನಾವಣಾ ಕದನ ಪ್ರಮುಖವಾಗಿ ನಡೆಯಲಿದೆ. ಈಗಾಗಲೇ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಚುನಾವಣೆ ಕದನವಾಗಿ ಮಾರ್ಪಟ್ಟಿದೆ.
ಚುನಾವಣಾ ಆಯೋಗವು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಾದ್ಯಂತ 58, 282 ಮತಗಟ್ಟೆಗಳನ್ನು ಸ್ಥಾಪಿಸಲಿದೆ. ಪ್ರತಿ ಮತಗಟ್ಟೆಗೆ ಸರಾಸರಿ ಮತದಾರರ ಸಂಖ್ಯೆಯನ್ನು 883 ಎಂದು ಗುರುತಿಸಿದೆ. ಅರ್ಧದಷ್ಟು ಮತದಾನ ಕೇಂದ್ರಗಳು ವೆಬ್ ಕಾಸ್ಟಿಂಗ್ ಸೌಲಭ್ಯವನ್ನು ಹೊಂದಿರುತ್ತವೆ. ಒಟ್ಟು 1320 ಮತಗಟ್ಟೆಗಳನ್ನು ಮಹಿಳಾ ಅಧಿಕಾರಿಗಳು ನಿರ್ವಹಿಸಲಿದ್ದಾರೆ.












Click it and Unblock the Notifications