Chickpet: ನಾಮಪತ್ರ ವಾಪಸ್ ಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಗಂಗಾಂಬಿಕೆ
ಬೇಸಿಗೆಯ ಬಿಸಿಲಿನ ಜೊತೆಗೆ 2023ರ ವಿಧಾನಸಭೆ ಚುನಾವಣೆಯ ಕಾವು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಾಮಪತ್ರ ಸಲ್ಲಿಸಿದ ನಂತರ ಅಭ್ಯರ್ಥಿಗಳು ಗೆಲುವಿಗಾಗಿ ಮತದಾರರ ಓಲೈಕೆಗೆ ಮುಂದಾಗಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ನಿಂದ ಟಿಕೆಟ್ ಸಿಗದೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಮನವೊಲಿಕೆಗೆ ಕೊನೆಯ ದಿನದಂದು ಭಾರೀ ಕಸರತ್ತು ನಡೆಸಲಾಗುತ್ತಿದೆ.

ಇದೇ ವೇಳೆ, ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಕೊನೆಯ ದಿನಂದು (ಏಪ್ರಿಲ್ 24) ನಾಮಪತ್ರ ವಾಪಸ್ ಪಡೆದಿದ್ದಾರೆ.
ಚಿಕ್ಕಪೇಟೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಬಿಎಂಪಿ ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಬದಲು ಮಾಜಿ ಶಾಸಕ ಆರ್.ವಿ. ದೇವರಾಜ್ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು. ಇದರಿಂದ ಬಂಡಾಯವೆದ್ದಿದ್ದ ಗಂಗಾಂಬಿಕೆ ಕೂಡ ನಾಮಪತ್ರ ಸಲ್ಲಿಸಿದ್ದರು.
ಕೊನೆಗೂ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ. ಇದು ಅಧಿಕೃತ ಅಭ್ಯರ್ಥಿ ಆರ್.ವಿ. ದೇವರಾಜ್ ಅವರ ಗೆಲುವಿಗೆ ಹೇಗೆ ಸಹಾಯವಾಗಲಿದೆ ಎಂಬುದನ್ನು ನೋಡಬೇಕಿದೆ.
ಇನ್ನು ಚಿಕ್ಕಪೇಟೆ ಕ್ಷೇತ್ರದಲ್ಲಿ ಕೆಜಿಎಫ್ ಬಾಬು ಅವರ ಪತ್ನಿ ಕೂಡ ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ, ಅವರು ನಾಮಪತ್ರ ವಾಪಸ್ ಪಡೆಯುವ ಸೂಚನೆ ಕಾಣಿಸುತ್ತಿಲ್ಲ. ರಾಜಕೀಯ ಎದುರಾಳಿ ಆರ್ವಿ ದೇವರಾಜ ಸೋಲಿಸಲು ಕೆಜಿಎಫ್ ಬಾಬು ತಮ್ಮ ಪತ್ನಿಯನ್ನು ಚುನಾವಣೆಗೆ ನಿಲ್ಲಿಸಿದ್ದಾರೆ.
ಈಗಾಗಲೇ ಏಪ್ರಿಲ್ 20ರೊಳಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇಂದು (ಏಪ್ರಿಲ್ 24) ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಯಾವ ಅಭ್ಯರ್ಥಿಗಳು ಕೊನೆಯ ದಿನದಂದು ಕಣದಿಂದ ಹಿಂದೆ ಸರಿಯಲಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications