Narendra Modi Road Show: ಏ.29ರಂದು 45 ನಿಮಿಷ ಬೆಂಗಳೂರಿನಲ್ಲಿ ನರೇಂದ್ರ ಮೋದಿ ಮೆಗಾ ರೋಡ್ ಶೋ
2023ರ ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದ್ದು, ತಮ್ಮ ಪಕ್ಷದ ಅಭ್ಯರ್ಥಿಗಳ ಮಾತಯಾಚಿಸಲು ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ಕರ್ನಾಟಕದತ್ತ ಮುಖ ಮಾಡಿದ್ದಾರೆ.
ಹೀಗಾಗಲೇ ಅಮಿತ್ ಶಾ, ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಸಮಾವೇಶ, ರೋಡ್ ಶೋ ಮೂಲಕ ಪ್ರಚಾರ ಕೈಗೊಂಡಿದ್ದಾರೆ.

ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶೀಘ್ರದಲ್ಲೇ ಕರ್ನಾಟಕಕ್ಕೆ ಎಂಟ್ರಿ ಕೊಡಲಿದ್ದು, ಕೇವಲ ಆರು ದಿನಗಳಲ್ಲಿ 20ರಿಂದ 25 ಸ್ಥಳಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ಏಪ್ರಿಲ್ 29ರಂದು ರಾಜ್ಯಕ್ಕೆ ಆಗಮಿಸಲಿರುವ ನರೇಂದ್ರ ಮೋದಿ ಅವರು ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಈ ಮೆಗಾ ರೋಡ್ ಶೋ 45 ನಿಮಿಷಗಳ ಕಾಲ ನಡೆಯಲಿದ್ದು, ಬೆಂಗಳೂರಿನ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
ಸುಮ್ಮನಹಳ್ಳಿ ಜಂಕ್ಷನ್ವರೆಗೂ ರೋಡ್ ಶೋ
ಏಪ್ರಿಲ್ 29ರಂದು ಸಂಜೆ 6.15ರಿಂದ ಬರೋಬ್ಬರಿ 45 ನಿಮಿಷಗಳ ಕಾಲ ಬೆಂಗಳೂರಿನ ಮಾಗಡಿ ರಸ್ತೆಯ ನೈಸ್ ರೋಡ್ ಜಂಕ್ಷನ್ನಿಂದ ಸುಮ್ಮನಹಳ್ಳಿ ಜಂಕ್ಷನ್ವರೆಗೂ ರೋಡ್ ಶೋ ಇರಲಿದೆ. ಈ ರೋಡ್ ಶೋ ನಂತರ ನರೇಂದ್ರ ಮೋದಿ ಅಂದು ರಾತ್ರಿ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ಮುನ್ನ ನರೇಂದ್ರ ಮೋದಿ ಏಪ್ರಿಲ್ 29ರಂದು ಹುಮ್ನಾಬಾದ್, ವಿಜಯಪುರ, ಕುಡಚಿಯ ಪ್ರಚಾರ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.
ನಂತರ ಏಪ್ರಿಲ್ 30ರಂದು ಕೋಲಾರ, ಚನ್ನಪಟ್ಟಣ ಹಾಗೂ ಮೈಸೂರು ಜಿಲ್ಲೆಗಳಲ್ಲಿ ನಡೆಯುವ ಬೃಹತ್ ಸಮಾವೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರಿಗೆ ಮತ್ತು ಬಿಜೆಪಿಗೆ ದೊಡ್ಡ ಉತ್ಸಾಹ ತುಂಬಲಿದೆ ಎಂದು ಅಂದಾಜಿಸಲಾಗಿದೆ.
ನಂತರ ಏಪ್ರಿಲ್ 30ರಂದು ಕೋಲಾರ, ರಾಮನಗರ, ಹಾಸನ ಹಾಗೂ ಮೈಸೂರು ಜಿಲ್ಲೆಗಳಲ್ಲಿ ನಡೆಯುವ ಬೃಹತ್ ಸಮಾವೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರಿಗೆ ಮತ್ತು ಬಿಜೆಪಿಗೆ ದೊಡ್ಡ ಉತ್ಸಾಹ ತುಂಬಲಿದೆ ಎಂದು ಅಂದಾಜಿಸಲಾಗಿದೆ.
ಎರಡು ದಿನಗಳ ನಂತರ ಮತ್ತೊಮ್ಮೆ ಕೇಸರಿ ಕಲರವ ಸೃಷ್ಟಿಸಲಿರುವ ನರೇಂದ್ರ ಮೋದಿ ಮೇ 2ರಂದು ಚಿತ್ರದುರ್ಗ, ವಿಜಯನಗರ, ಸಿಂಧನೂರು ಮತ್ತು ಕಲಬುರಗಿಯಲ್ಲಿ ಪ್ರಚಾರ ಯಾತ್ರೆ ಕೈಗೊಳ್ಳಲಿದ್ದಾರೆ.
ಇನ್ನು ಮೇ 3ರಂದು ಮೂಡಬಿದಿರೆ, ಕಾರವಾರ, ಕಿತ್ತೂರು ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು, ಪಕ್ಷದ ಗೆಲುವಿಗೆ ಅಬ್ಬರದ ಸಮಾವೇಶ ಮತ್ತು ರೋಡ್ ಶೋ ನಡೆಸಲಿದ್ದಾರೆ.
ಕರ್ನಾಟಕದಲ್ಲಿ ಇಷ್ಟಕ್ಕೆ ನಿಲ್ಲದ ನರೇಂದ್ರ ಮೋದಿ ಮೇನಿಯಾ ಮೇ 6ರಂದು ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿಯೂ ಮುಂದುವರೆಯಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕೊನೆಯ ಹಂತದ ಪ್ರಚಾರದಲ್ಲಿ ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ, ಮೇ 7ರಂದು ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ ಮತ್ತು ಬೆಂಗಳೂರು ಕೇಂದ್ರದಲ್ಲಿ ಮೋದಿ ಹವಾ ಎಬ್ಬಿಸಲಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications