ಯಶವಂತಪುರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ?
Recommended Video
ಬೆಂಗಳೂರು, ಏಪ್ರಿಲ್ 17 : ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ?. ಯಶವಂತಪುರದಿಂದ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ಬಿಜೆಪಿಯ 3ನೇ ಪಟ್ಟಿಯಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.
ಯಶವಂತಪುರದ ಹಾಲಿ ಶಾಸಕರು ಕಾಂಗ್ರೆಸ್ನ ಎಸ್.ಟಿ.ಸೋಮಶೇಖರ್. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮಶೇಖರ್ ಆಪ್ತರು. ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕಿಳಿಸಿ, ಸೋಮಶೇಖರ್ ಅವರನ್ನು ಸೋಲಿಸಲು ಬಿಜೆಪಿ ತಂತ್ರ ರೂಪಿಸಿದೆ.
ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು?
ಮೊದಲು ಯಡಿಯೂರಪ್ಪ ಹೊರತು ಪಡಿಸಿ ಯಾವ ಸಂಸದರಿಗೂ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ಹೇಳಿತ್ತು. ಆದರೆ, ಮೊದಲ ಪಟ್ಟಿಯಲ್ಲಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಿ.ಶ್ರೀರಾಮುಲು ಅವರಿಗೆ ಟಿಕೆಟ್ ನೀಡಿತ್ತು. ಈಗ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ.
2013ರ ಚುನಾವಣೆಯಲ್ಲಿ ಕೃಷ್ಣಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದರು, 12,747 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜಯಗಳಿಸಲು ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ ಅವರು 2008ರ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 57,643 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಬಾರಿ ಅವರನ್ನು ಪುನಃ ಕಣಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ.
ಸದ್ಯದ ಮಾಹಿತಿ ಪ್ರಕಾರ ಶೋಭಾ ಕರಂದ್ಲಾಜೆ ಅವರು ಅಭ್ಯರ್ಥಿಯಾಗುವುದು ಖಚಿತವಾಗಿದೆ. ಬಿಜೆಪಿಯ 3ನೇ ಪಟ್ಟಿಯಲ್ಲಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಈ ಮೂಲಕ ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣಕ್ಕೆ ವಾಪಸ್ ಬರಲಿದ್ದಾರೆ.
ರಾಜಾಜಿನಗರದಿಂದ ಸ್ಪರ್ಧೆ
2013ರ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು ಕರ್ನಾಟಕ ಜನತಾ ಪಕ್ಷದಿಂದ ರಾಜಾಜಿನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. 20,909 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಬಿಜೆಪಿಗೆ ವಾಪಸ್ ಆಗಿದ್ದರು.
ಈ ಬಾರಿ ಯಶವಂತಪುರ ಕ್ಷೇತದಲ್ಲಿ ಸೂಕ್ತ ಅಭ್ಯರ್ಥಿಯಾಗಿ ಬಿಜೆಪಿ ಹುಡುಕಾಟ ನಡೆಸುತ್ತಿತ್ತು. ಅಂತಿಮವಾಗಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಪಕ್ಷ ತೀರ್ಮಾನ ಮಾಡಿದೆ.
ಮುಖ್ಯಮಂತ್ರಿಗಳ ಆಪ್ತನ ವಿರುದ್ಧ ಕಣಕ್ಕೆ
ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತನ ವಿರುದ್ಧ ಕಣಕ್ಕಿಳಿಯಲಿದ್ದಾರೆ. 2013ರ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ 1,20,380 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
2008ರಲ್ಲಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಕೇವಲ 1 ಸಾವಿರ ಮತಗಳ ಅಂತರದಿಂದ ಸೋತಿದ್ದ ಎಸ್.ಟಿ.ಸೋಮಶೇಖರ್ ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಅವರು ಅಭ್ಯರ್ಥಿಯಾಗಿದ್ದಾರೆ.
ಶೋಭಾ ಕರಂದ್ಲಾಜೆ ಅವರು ಯಶವಂತಪುರ ಕ್ಷೇತ್ರದಿಂದ ಕಣಕ್ಕಿಳಿದರೆ ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಕದನ ಕುತೂಹಲಕ್ಕೆ ಕಾರಣವಾಗಲಿದೆ.
ಟಿ.ಎನ್.ಜವರಾಯಿ ಗೌಡ
ಯಶವಂತಪುರ ಕ್ಷೇತ್ರಕ್ಕೆ ಟಿ.ಎನ್.ಜವರಾಯಿ ಗೌಡ ಅವರು ಜೆಡಿಎಸ್ ಅಭ್ಯರ್ಥಿ. 2008, 2013ರ ಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದರು. ಎರಡು ಬಾರಿಯೂ ಅವರು ಸೋಲು ಕಂಡಿದ್ದಾರೆ.
ಈ ಅನುಕಂಪದಿಂದಾಗಿಯೇ ಈ ಚುನಾವಣೆಯಲ್ಲಿ ಅವರು ಜಯಗಳಿಸಬಹುದು? ಎಂದು ನಿರೀಕ್ಷೆ ಮಾಡಲಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಅವರು ಬಿರುಸಿನಿಂದ ಪ್ರಚಾರ ಮಾಡುತ್ತಿದ್ದಾರೆ.
ಶೋಭಾ ಕರಂದ್ಲಾಜೆ ಅವರು ಅಭ್ಯರ್ಥಿಯಾದರೆ ಯಶವಂತಪುರದಲ್ಲಿ ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ.
ಕಳೆದ ಚುನಾವಣೆಯಲ್ಲಿ ಸೋಲು-ಗೆಲುವು
2013ರ ಚುನಾವಣೆಯಲ್ಲಿ ಕಾಂಗ್ರೆಸ್ನ ಎಸ್.ಟಿ.ಸೋಮಶೇಖರ್ 1,20,380 ಮತ ಪಡೆದು ಜಯಗಳಿಸಿದ್ದರು. ಜೆಡಿಎಸ್ನ ಟಿ.ಎನ್.ಜವರಾಯಿ ಗೌಡ 91,280 ಮತ ಪಡೆದಿದ್ದರು. ಬಿಜೆಪಿಯ ಕೃಷ್ಣಪ್ಪ 12,747 ಮತ ಪಡೆದಿದ್ದರು.
ಕಳೆದ ಚುನಾವಣೆಯಲ್ಲಿನ ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ಈ ಬಾರಿ ತಂತ್ರ ರೂಪಿಸುತ್ತಿದೆ. ಸಿದ್ದರಾಮಯ್ಯ ಆಪ್ತರಾದ ಎಸ್.ಟಿ.ಸೋಮಶೇಖರ್ ಅವರನ್ನು ಸೋಲಿಸಲು ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕೆ ಇಳಿಸುತ್ತಿದೆ. ಈ ಲೆಕ್ಕಾಚಾರ ಹೇಗೆ ಫಲ ನೀಡುತ್ತದೆ? ಎಂಬುದನ್ನು ಕಾದು ನೋಡಬೇಕು.