Govt employees strike: ಬೆಂಗಳೂರಿನ ಬಿಬಿಎಂಪಿ ಕ್ಯಾಂಪಸ್ನಲ್ಲಿ ಸರ್ಕಾರಿ ನೌಕರರ ಪ್ರತಿಭಟನೆ
7ನೇ ವೇತನ ಆಯೋಗದ ವರದಿ ಜಾರಿ, ಹಳೆಯ ಪಿಂಚಣಿ ಯೋಜನೆಗೆ ಮರುಪಾವತಿ ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರಿ ನೌಕರರು ಮುಂದಿಟ್ಟಿದ್ದಾರೆ.
ಬೆಂಗಳೂರು, ಮಾರ್ಚ್. 01: 7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿರುವ ರಾಜ್ಯ ಸರ್ಕಾರಿ ನೌಕರರು ರಾಜಧಾನಿಯ ಬಿಬಿಎಂಪಿ ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಚಿವಾಲಯ, ವಿಧಾನ ಸಭೆ, ವಿಧಾನ ಪರಿಷತ್ ಸಿಬ್ಬಂದಿ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ಸರ್ಕಾರ ಅನಿರ್ದಿಷ್ಠಾವಧಿ ಪ್ರತಿಭಟನೆಗೆ ಅವಕಾಶ ಕೊಡದೇ, ತಕ್ಷಣವೇ ನಮ್ಮ ಬೇಡಿಕೆ ಈಡೇರಿಸಬೇಕು. ಕೊರೊನಾ ಸಮಯದಲ್ಲಿ ಕೆಲಸ ಮಾಡಿದ್ದೇವೆ, ಪ್ರವಾಹದ ಸಂದರ್ಭದಲ್ಲಿ ದೇಣಿಗೆ ನೀಡಿದ್ದೇವೆ. ನಾವು ಯಾವುದೇ ಬ್ಲಾಕ್ ಮೇಲ್ ಮಾಡುತ್ತಿಲ್ಲ, ಪ್ರತಿಭಟನೆ ನಮ್ಮ ಹಕ್ಕು ಎಂದು ಪ್ರತಿಭಟನಾನಿರತ ಸರ್ಕಾರಿ ಉದ್ಯೋಗಿಗಳು ಒತ್ತಾಯಿಸಿದ್ದಾರೆ.

7ನೇ ವೇತನ ಆಯೋಗಕ್ಕೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಕಚೇರಿಗಳಿಗೆ ಬೀಗ ಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನೌಕರರ ಸಂಗದ ಪದಾಧಿಕಾರಿಗಳ ಸಭೆ ವಿಫಲವಾದ ನಂತರ ಸುಮಾರು 6 ಲಕ್ಷ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ.
ಇತ್ತ, 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಸಿಎಂ ನಿರ್ಧಾರ ಕೈಗೊಳ್ಳುವವರೆಗೆ ನೌಕರರ ಪ್ರತಿಭಟನೆಯ ನಿರ್ಧಾರವನ್ನು ಹಿಂಪಡೆಯುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಯ್ಕೆ ನೀಡಿದ್ದೇ., ಸರ್ಕಾರದ ನಿರ್ಧಾರಕ್ಕೆ ಕಾಯುತ್ತೇವೆ. ಸರ್ಕಾರದ ಅಂತಿಮ ಅಧಿಕೃತ ಆದೇಶ ಹೊರಬರುವವರೆಗೆ ಮುಷ್ಕರ ಹಿಂತೆಗೆದುಕೊಳ್ಳುವುದಿಲ್ಲ, ಸಿಎಂ ಬಾಯಿ ಮಾತಿಗೆ ಭರವಸೆ ನೀಡಿದರೇ ಸಾಕಾಗುವುದಿಲ್ಲ ಎಂದು ನೌಕರರ ಸಂಘದ ಅಧ್ಯಕ್ಷ ಎಸ್. ಷಡಕ್ಷರಿ ಪಟ್ಟು ಹಿಡಿದಿದ್ದಾರೆ.
ಇನ್ನು, ಸರ್ಕಾರಿ ನೌಕರರು ಪ್ರತಿಭಟನೆ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ. ನೂತನ ಪಿಂಚಣಿ ಯೋಜನೆ ಬಗ್ಗೆಯೂ ವರದಿ ತರಿಸಿಕೊಳ್ಳುತ್ತೇವೆ. ಬೇರೆ ರಾಜ್ಯಗಳಲ್ಲಿ ಯಾವ ರೀತಿ ಜಾರಿ ಆಗಿದೆ ವರದಿ ಪಡೆಯುತ್ತೇನೆ ಎಂದಿದ್ದಾರೆ.












Click it and Unblock the Notifications