ಬಿಜೆಪಿ ಸರ್ಕಾರ ಆರ್ಎಸ್ಎಸ್, ಅಂಗಸಂಸ್ಥೆಗಳಿಗೆ ಅಕ್ರಮ ಭೂಮಿ ಹಂಚಿಕೆ ಮಾಡಿದೆ: ದಿನೇಶ್ ಗುಂಡೂರಾವ್
ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಆರ್ಎಸ್ಎಸ್ ಮತ್ತು ಅದರ ಅಂಗ ಸಂಸ್ಥೆಗಳಿಗೆ ನೂರಾರು ಎಕರೆ ಭೂಮಿ ಹಂಚಿಕೆ ಮಾಡಿದ್ದು, ಈ ಬಗ್ಗೆ ಕರ್ನಾಟಕ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈಗಾಗಲೇ ಬಿಜೆಪಿ ಅವಧಿಯಲ್ಲಿ ನೀಡಿದ್ದ ಕೆಲವು ಟೆಂಡರ್ಗಳನ್ನು ರದ್ದುಗೊಳಿಸಲಾಗಿದ್ದು, ಇತರೆ ವಿಚಾರಗಳನ್ನು ಕೂಡ ಪರಿಶೀಲನೆ ನಡೆಸಲಾಗುವುದು ಎಂದು ಅವರು ಹೇಳಿದರು. ರಾಜ್ಯದಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಆರ್ಎಸ್ಎಸ್ ಮತ್ತು ಸಂಘ ಪರಿವಾರದ ಅಂಗ ಸಂಸ್ಥೆಗಳ ಹೆಸರಿನಲ್ಲಿ ಅತಿಕ್ರಮಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಸ್ಥೆಗಳ ಬೆಳವಣಿಗೆ, ಅವುಗಳ ವಿಚಾರಧಾರೆಗಳನ್ನು ಬೆಳೆಸಲು ಸಹಾಯ ಮಾಡುವು ಉದ್ದೇಶದಿಂದ ಭೂಮಿಯನ್ನು ಹಂಚಿಕೆ ಮಾಡಲಾಗಿದೆ. ಈ ರೀತಿ ಭೂಮಿ ಹಂಚಿಕೆ ಮಾಡಬಾರದು, ಎಲ್ಲವನ್ನೂ ಜನರಿಗೆ ತಿಳಿಸಬೇಕು. ಯಾವುದನ್ನೂ ಗುಟ್ಟಾಗಿ ಇಡಬಾರದು, ಜನರಿಗೆ ಎಲ್ಲಾ ವಿಚಾರಗಳು ತಿಳಿಯಬೇಕು. ಎಲ್ಲವನ್ನೂ ಒಂದೇ ರೀತಿಯಲ್ಲಿ ತೆಗೆದುಕೊಳ್ಳಲು ಆಗದು, ನಾವು ಕ್ರಮ ತೆಗೆದುಕೊಳ್ಳುತ್ತೇವೆ" ಎಂದು ಹೇಳಿದರು.
ಸರ್ಕಾರದಿಂದ ಪರಿಶೀಲಿಸಿ ಕ್ರಮ
ರಾಜ್ಯ ಸರ್ಕಾರ ಈ ಬಗ್ಗೆ ಇನ್ನೂ ಯಾವ ಕ್ರಮವನ್ನು ತೆಗೆದುಕೊಂಡಿಲ್ಲವೇ ಎಂದು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈಗಲೇ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದರು. ಆದರೆ ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಅವರು ಹೇಳಿದರು. ಸರ್ಕಾರದ ಮಟ್ಟದಲ್ಲಿ ಇದು ಆಗಬೇಕು, ಕಾನೂನು ಬದ್ಧವಾಗಿ ಹಂಚಿಕೆ ಮಾಡಿದ್ದಾರಾ? ಯಾವ ಬೆಲೆ ನಿಗದಿಪಡಿಸಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡಿದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಬೇಕು ಎಂದು ಗುಂಡೂರಾವ್ ಹೇಳಿದರು.
ಆರೋಗ್ಯ ಇಲಾಖೆ ಸುಧಾರಣೆಗೆ ಕ್ರಮ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅದರ ಅಧಿಕಾರಿಗಳು ಮತ್ತು ವೈದ್ಯರ ಕಾರ್ಯವೈಖರಿ ಮತ್ತು ಸಾರ್ವಜನಿಕರಿಗೆ ಉತ್ತಮ ಆರೋಗ್ಯವನ್ನು ಸೇವೆಯನ್ನು ನೀಡುವುನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮುಂದಿನ ವಾರ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ಕಾಂಗ್ರೆಸ್ ಸರ್ಕಾರ 108 ಆಂಬ್ಯುಲೆನ್ಸ್ ಟೆಂಡರ್ ಮತ್ತು ಡಯಾಲಿಸಿಸ್ ಒಪ್ಪಂದದಂತಹ ಕೆಲವು ಟೆಂಡರ್ಗಳನ್ನು ರದ್ದುಗೊಳಿಸಿದೆ ಎಂದು ಅವರು ಹೇಳಿದರು.
ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಅಸ್ತಿತ್ವದಲ್ಲಿರುವ ವ್ಯವಸ್ಥೆಯನ್ನು ಸುಧಾರಿಸಲು ತಮ್ಮ ಇಲಾಖೆಗೆ ಸಂಬಂಧಿಸಿದ ಕೆಲವು ನೀತಿ ವಿಷಯಗಳನ್ನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.












Click it and Unblock the Notifications