Bengaluru traffic: ಈ ಕೆಲಸ ಮಾಡಿದ್ರೆ ಬೆಂಗಳೂರಲ್ಲಿ ಟ್ರಾಫಿಕ್ ಇರಲ್ಲ: ತೇಜಸ್ವಿ ಸೂರ್ಯ ಕೊಟ್ಟ ಸಲಹೆ ಏನು?
ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಬರೋಬ್ಬರಿ 54,000 ರೂಪಾಯಿ ಮೊತ್ತದ ವಿವಿಧ ಯೋಜನೆಗಳಿಗೆ ಕೈಹಾಕುತ್ತಿದೆ. ಇದರಲ್ಲಿ ಹೊಸ ರಸ್ತೆಗಳ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಒಳಗೊಂಡಿದೆ. ಆದರೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಹೊಸ ರಸ್ತೆಗಳಿಂದ ಬೆಂಗಳೂರಿನ ಟ್ರಾಫಿಕ್ ಕಡಿಮೆಯಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸಲು ಕರ್ನಾಟಕ ಸರ್ಕಾರವು 54,000 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಲು ಮುಂದಾಗಿದೆ. ಇದೊಂದು ಹುಚ್ಚತನ, ಬೆಂಗಳೂರಿನಲ್ಲಿ ಹೆಚ್ಚಿನ ರಸ್ತೆಗಳನ್ನು ನಿರ್ಮಿಸುವುದರಿಂದ ಟ್ರಾಫಿಕ್ ಜಾಮ್ ಎಂದಿಗೂ ಕಡಿಮೆಯಾಗೋದಿಲ್ಲ. ಇದರಿಂದ ಇನ್ನೂ ಹೆಚ್ಚು ಖಾಸಗಿ ವಾಹನಗಳು ರಸ್ತೆಗಿಳಿಯುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರವು ಈ 54,000 ಕೋಟಿ ರೂಪಾಯಿ ಖರ್ಚು ಮಾಡಿ ಈ ಹುಚ್ಚುತನದ ಕೆಲಸ ಮಾಡುವ ಬದಲು ಅದೇ ಹಣವನ್ನು ಸಾರ್ವಜನಿಕ ಸಾರಿಗೆಯಲ್ಲಿ ಹೂಡಿಕೆ ಮಾಡಿ ಎಂದು ಸಂಸದ ತೇಜಸ್ವಿ ಸೂರ್ಯ ಮಹತ್ವದ ಸಲಹೆ ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದೇ ಟ್ರಾಫಿಕ್ ನಿಯಂತ್ರಣಕ್ಕೆ ಉತ್ತಮ ಮಾರ್ಗ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿಗಾಗಿ ಬರೋಬ್ಬರಿ 54,000 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳನ್ನು ಮುಂದಿನ 30 ವರ್ಷಗಳ ಅವಧಿಗಾಗಿ ರೂಪಿಸಲಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಮಿತಿಮೀರುತ್ತಿರುವ ಟ್ರಾಫಿಕ್ ಜಾಮ್ ನಿಯಂತ್ರಣ ಮಾಡುವುದು ಹಾಗೂ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದೊಂದಿಗೆ 16 ಫೈಓವರ್ಗಳು, ಅಂಡರ್ಪಾಸ್ ಹಾಗೂ ಎರಡು ಡಬಲ್ ಡೆಕ್ಕರ್ ಕಾರಿಡಾರ್, ಸುರಂಗ ರಸ್ತೆ ನಿರ್ಮಾಣವಾಗಲಿದೆ.

ಬೆಂಗಳೂರು ಸಮಗ್ರ ಸಂಚಾರ ನಿರ್ವಹಣೆ ಯೋಜನೆಯಡಿ ನಗರದ ಸಂಚಾರ ದಟ್ಟಣೆ ತಗ್ಗಿಸುವುದು ಹಾಗೂ ಅವುಗಳ ನಿರ್ವಹಣೆಗಾಗಿ ಮೂಲಸೌಕರ್ಯ ಒದಗಿಸುವ ಕಾಮಗಾರಿಗಳು ಅನುಷ್ಠಾನಗೊಳ್ಳಲಿದ್ದು, ಇದಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಸಂಸ್ಥೆಯೊಂದು ಬಿಬಿಎಂಪಿಗೆ ಕಾರ್ಯಸಾಧ್ಯತಾ ವರದಿಯನ್ನು ಈಗಾಗಲೇ ಸಲ್ಲಿಸಿದೆ.
ಈಗಿರುವ ರಸ್ತೆ ಹಾಗೂ ಜಂಕ್ಷನ್ಗಳಲ್ಲೂ ಸುಗಮ ಸಂಚಾರಕ್ಕೆ ಮಹತ್ವದ ಸಲಹೆಗಳನ್ನು ಕೂಡ ಉಲ್ಲೇಖ ಮಾಡಲಾಗಿದೆ. ಜೊತೆಗೆ ಈ ಹೊಸ ಯೋಜನೆಗಳೂ ಸೇರಿದಂತೆ ಪ್ರಮುಖವಾಗಿ ಮೈಸೂರು ರಸ್ತೆ, ತುಮಕೂರು ರಸ್ತೆ, ಹಳೆ ಮದ್ರಾಸ್ ರಸ್ತೆಗಳಲ್ಲಿ ಅತಿ ಹೆಚ್ಚು ದಟ್ಟಣೆ ಉಂಟಾಗುವ ಪ್ರದೇಶಗಳಲ್ಲಿರುವ ಟ್ರಾಫಿಕ್ ಸಿಗ್ನಲ್ಗಳ ಸಮಸ್ಯೆಯನ್ನು ಕೂಡ ಇದರಲ್ಲಿ ಉಲ್ಲೇಖಿಸಲಾಗಿದ್ದು, ಇದಕ್ಕೆ ಪರಿಹಾರವನ್ನೂ ಸೂಚಿಸಲಾಗಿದೆ.
2024-25ನೇ ಸಾಲಿನ ಬಜೆಟ್ನಲ್ಲಿ ಬೆಂಗಳೂರಿಗಾಗಿ ಘೋಷಣೆಯಾಗಿರುವ ಹಲವು ಯೋಜನೆಗಳು, ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಘೋಷಿಸಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಬಿಬಿಎಂಪಿ ಕೈಗೆತ್ತಿಕೊಂಡಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ವರದಿ ಒಳಗೊಂಡಿದೆ. ಆದರೆ ಇದರಿಂದ ಬೆಂಗಳೂರಿಗೆ ಪ್ರಯೋಜನವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ದಟ್ಟಣೆ ನಿಯಂತ್ರಣಕ್ಕೆ ಸಲಹೆಯನ್ನೂ ನೀಡಿದ್ದಾರೆ.












Click it and Unblock the Notifications