ಮೈತ್ರಿ ಸರಕಾರ ಆಡಳಿತಕ್ಕೆ ರಾಮಾಯಣವೇ ಸ್ಫೂರ್ತಿ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಅಕ್ಟೋಬರ್ 24: ಮಾನವೀಯತೆ ಮರೆತು ಪ್ರಬುದ್ಧ ಭಾರತ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದ ಎಲ್ಲ ವರ್ಗದ ಜನರನ್ನು ಮುಖ್ಯವಾಹಿನಿಗೆ ತರುವುದು ನಮ್ಮ ಸರಕಾರದ ಪ್ರಮುಖ ಉದ್ದೇಶ. ಅಲ್ಲದೆ ದುಡಿಯುವ ಕೈಗಳನ್ನು ಬಲಪಡಿಸಲು ವಿವಿಧ ಜನಪರ ಯೋಜನೆಗಳನ್ನು ಹಮ್ಮಿಕೊಂಡು ಅನುಷ್ಠಾನಕ್ಕೆ ತರುತ್ತಿದೆ ಎಂದು ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ
ನಮ್ಮ ಸರಕಾರ ಕೊಟ್ಟ ಮಾತಿನಂತೆ ರೈತರ ಸಾಲಮನ್ನಾ ಮಾಡಿದೆ. ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯದ ಸ್ಫೂರ್ತಿಯಿಂದ ನಮ್ಮ ಮೈತ್ರಿ ಸರಕಾರ ಜನಪರ ಆಡಳಿತ ನೀಡುತ್ತಿದೆ ಎಂದರು.
ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ ಮಹಾನ್ ವ್ಯಕ್ತಿಗಳನ್ನು, ಸಮಾಜ ಸುಧಾರಕರನ್ನು ಒಂದೊಂದು ಸಮಾಜಕ್ಕೆ ಸೀಮಿತ ಮಾಡಿದ್ದೇವೆ. ಇದು ಸರಿಯಲ್ಲ. ಈ ಎಲ್ಲಾ ಮಹನೀಯರಿಗೆ ಇತಿಹಾಸದಲ್ಲಿ ಸಿಗಬೇಕಾದ ಸ್ಥಾನಮಾನ ಸರಿಯಾಗಿ ಸಿಗಲಿಲ್ಲ. ಅದಕ್ಕೆ ಮೊದಲು ನಮ್ಮ ಮನಸ್ಥಿತಿ ಬದಲಾಗಬೇಕು ಎಂದು ಹೇಳಿದರು.
ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ವಾಲ್ಮೀಕಿ ಸಮುದಾಯಕ್ಕೆ ಎಲ್ಲ ರೀತಿಯ ನೆರವು, ಸಹಕಾರ ನೀಡಿ, ಆ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಅದನ್ನು ಮನಗಂಡು ಆಯ್ಕೆ ಸಮಿತಿ ಈ ಬಾರಿಯ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ತಿಳಿಸಿದರು.
ವಾಲ್ಮೀಕಿ ಜಯಂತಿಗೆ ಸಿಎಂ ಗೈರು: ವಿಧಾನಸೌಧದ ಎದುರು ಪ್ರತಿಭಟನೆ
ಜಗತ್ತಿನ ಎಲ್ಲಾ ಜೀವರಾಶಿಗಳಿಗೆ ನ್ಯಾಯ ಒದಗಿಸುವ ಕೆಲಸ ಆದಲ್ಲಿ ನಮ್ಮದು ರಾಮರಾಜ್ಯವಾಗುತ್ತದೆ ಎಂದು ಶ್ರೀ ಮಹರ್ಷಿ ವಾಲ್ಮೀಕಿ ಆಯ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಹೈ ಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.
ಪ್ರಶಸ್ತಿಗಳನ್ನು ಜಾತೀಕರಣ ಮಾಡುವುದು ಸರಿಯಲ್ಲ. ಆಯಾ ಸಮಾಜದ ಪ್ರಶಸ್ತಿಗಳನ್ನು ಅದೇ ಸಮುದಾಯದವರಿಗೆ ನೀಡುವುದನ್ನು ಬಿಟ್ಟು, ಬೇರೆ ಸಮಾಜದವರು, ಇತರೆ ಸಮುದಾಯಗಳಿಗೆ ನೀಡಿರುವ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿ ನೀಡಿದರೆ ಒಳ್ಳೆಯದು ಎಂದು ಹೇಳಿದರು.
ಈ ಬಾರಿಯ ಪ್ರಶಸ್ತಿ ಪಡೆದ ಎಚ್.ಡಿ. ದೇವೇಗೌಡ ಅವರು ವಾಲ್ಮೀಕಿ ಸಮುದಾಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ವಾಲ್ಮೀಕಿ ಗುರುಪೀಠ ಸ್ಥಾಪನೆ. ಆ ಸಮಾಜದವರಿಗೆ ಸಚಿವ ಸ್ಥಾನ ನೀಡುವುದು, ಮೀಸಲು ಸೌಲಭ್ಯ ಕಲ್ಪಿಸಲು ದೇವೇಗೌಡ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗಾಗಿ ಅವರನ್ನು ಈ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಮಾತನಾಡಿ, ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸಲು ಸರಕಾರ ಮುಂದಾಗಬೇಕು. ಅಲ್ಲದೆ ಪ್ರತ್ಯೇಕ ಸಚಿವಾಲಯವನ್ನು ಪ್ರಾರಂಭಿಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.