ಡಿ. ಕೆ. ಶಿವಕುಮಾರ್ಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ
ಬೆಂಗಳೂರು, ಜೂನ್ 11 : ಕಾಂಗ್ರೆಸ್ ನಾಯಕ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್ಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ. ಪದಗ್ರಹಣ ಸಮಾರಂಭ ಭಾರಿ ಚರ್ಚೆಗೆ ಕಾರಣವಾಗಿತ್ತು.
Recommended Video
ಗುರುವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಕುರಿತು ಹೇಳಿಕೆ ನೀಡಿದರು. "ಡಿ. ಕೆ. ಶಿವಕುಮಾರ್ ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ. ನಮ್ಮದೇನು ಅಭ್ಯಂತರವಿಲ್ಲ" ಎಂದು ಸ್ಪಷ್ಟಪಡಿಸಿದರು.
ಮಾರ್ಚ್ 12ರಂದು ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಆದರೆ, ಇದುವರೆಗೂ ಅಧಿಕೃತವಾಗಿ ಪದಗ್ರಹಣ ನಡೆದಿಲ್ಲ. ಲಾಕ್ ಡೌನ್ ಪರಿಣಾಮ ಪದಗ್ರಹಣ ಕಾರ್ಯಕ್ರಮವನ್ನು ಮುಂದೂಡದಲಾಗಿತ್ತು.
ಜೂನ್ 14ರಂದು ಪದಗ್ರಹಣ ಕಾರ್ಯಕ್ರಮ ನಡೆಸುತ್ತೇನೆ ಅನುಮತಿ ನೀಡಿ ಎಂದು ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದರು. ಆದರೆ, ಮಂಗಳವಾರ ಸರ್ಕಾರ ಕಾರ್ಯಕ್ರಮಕ್ಕೆ ಒಪ್ಪಿಗೆ ಕೊಟ್ಟಿರಲಿಲ್ಲ.

ದೂರವಾಣಿ ಕರೆ
"ಡಿ. ಕೆ. ಶಿವಕುಮಾರ್ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದೇನೆ. ಹೆಚ್ಚು ಜನ ಸೇರಬಾರದು ಎಂದು ಹೇಳಿದ್ದೇನೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ" ಎಂದು ಯಡಿಯೂರಪ್ಪ ಹೇಳಿದರು.

ಪ್ರತಿಜ್ಞಾ ದಿನ
'ಪ್ರತಿಜ್ಞಾ ದಿನ' ಹೆಸರಿನಲ್ಲಿ ಡಿ. ಕೆ. ಶಿವಕುಮಾರ್ ಪದಗ್ರಹಣ ಸಮಾರಂಭ ನಡೆಯಲಿದೆ. ಇದಕ್ಕಾಗಿ ಕರ್ನಾಟಕ ಕಾಂಗ್ರೆಸ್ ಘಟಕ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಜೂನ್ 14ರಂದು ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದ್ದು, ಕಾರ್ಯಕ್ರಮ ನಡೆಸಲು ಸರ್ಕಾರದ ಒಪ್ಪಿಗೆ ಕೇಳಲಾಗಿತ್ತು.

7,800 ಪ್ರದೇಶಗಳು
ಡಿ. ಕೆ. ಶಿವಕುಮಾರ್ ಪದಗ್ರಹಣ ಸಮಾರಂಭವನ್ನು 7,800 ಪ್ರದೇಶಗಳಲ್ಲಿ ಕಾರ್ಯಕರ್ತರು ವೀಕ್ಷಣೆ ಮಾಡಲಿದ್ದಾರೆ. ಈಗಾಗಲೇ ಪದಗ್ರಹಣ ಸಮಾರಂಭದ ಬಗ್ಗೆ ಸಭೆಯನ್ನು ಸಹ ಮಾಡಲಾಗಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಮೂರು ಬಾರಿ ದಿನಾಂಕ ನಿಗದಿ
ಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಲು ಮೊದಲು ಮಾರ್ಚ್ 31ರ ದಿನಾಂಕ ನಿಗದಿ ಮಾಡಲಾಗಿತ್ತು. ಕೊರೊನಾ ವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಘೋಷಣೆಯಾದ ಕಾರಣ ಅದನ್ನು ಮುಂದೂಡಲಾಯಿತು. ಜೂನ್ 7ಕ್ಕೆ ಮತ್ತೆ ಕಾರ್ಯಕ್ರಮ ನಿಗದಿ ಆಯಿತು. ಬಳಿಕ ಪುನಃ ಜೂನ್ 14ಕ್ಕೆ ಮುಂದೂಡಲಾಯಿತು.












Click it and Unblock the Notifications