ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವನೆ, ಉಗುಳುವುದು ನಿಷೇಧ
ಬೆಂಗಳೂರು, ಮೇ 30: ಕೊರೊನಾ ವೈರಸ್ ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುವುದು, ಉಗುಳುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ವಿಶ್ವ ತಂಬಾಕು ರಹಿತ ದಿನಕ್ಕೂ (ಮೇ 31) ಒಂದು ದಿನ ಮುಂಚೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವನೆ ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಸೇವನೆ ಮಾಡಿದ್ರೆ ಕಾನೂನು ಕ್ರಮ ಜರುಗಿಸುವುದಾಗಿ ಎಂದು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವ ಶ್ರೀರಾಮುಲು ವಿಧಾನಸೌದಲ್ಲಿ ಹೇಳಿದ್ದಾರೆ.
ತಂಬಾಕು ಬೆಳೆಗಾರರ ನೆರವಿಗೆ ಧಾವಿಸಲು ವಿಶ್ವನಾಥ್ ಆಗ್ರಹ
ರಾಜ್ಯ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗು ಉಗುಳುವುದು ಕಂಡುಬಂದಲ್ಲಿ ಐಪಿಸಿ ಸೆಕ್ಷನ್ 188, 268, 269, 270 ರಡಿ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ತಂಬಾಕು ಜಿಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತದ ಐಸಿಎಂಆರ್ ಸಹ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಇನ್ನಿತರ ಮಸಾಲ ಉತ್ಪನ್ನಗಳನ್ನು ಜಿಗಿದು ಉಗುಳುವುದರ ಬಗ್ಗೆ ಎಚ್ಚರಿಕೆ ವಹಿಸುವಂತೆ ತಿಳಿಸಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಸೇವನೆ ನಿಷೇಧ ಮಾಡಲಾಗಿದೆ.
ಈಗಾಗಲೇ ಝಾರ್ಖಂಡ್ ಮತ್ತು ಬಿಹಾರ್ ರಾಜ್ಯಗಳಲ್ಲಿ ಎಲ್ಲ ರೀತಿಯ ಜಿಗಿಯುವ ತಂಬಾಕು ವಸ್ತುಗಳನ್ನು ನಿಷೇಧಿಸಿದೆ.