Bengaluru Traffic: ಟ್ರಾಫಿಕ್ ನಿಯಂತ್ರಣದ ಕೆಲಸ, ಕಾಮಗಾರಿಗಳನ್ನು ಶೀಘ್ರವೇ ಮುಗಿಸಲು ಸಿಎಸ್ ಸೂಚನೆ
ಬೆಂಗಳೂರು, ನವೆಂಬರ್ 21: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ ಸಂಬಂಧಿಸಿದ ಇಲಾಖೆಗಳು ಸಾಕಷ್ಟು ಕ್ರಮ ಕೈಗೊಳ್ಳುತ್ತಿದ್ದರು ಯಾವುದೇ ಕೆಲಸಗಳು ತಿಂಗಳುಗಳಾದರು ಪೂರ್ಣವಾಗಿಲ್ಲ. ಇದೀಗ ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೆ ತ್ವರಿಗೆ ಕಾಮಗಾರಿ ಮುಗಿಸುವಂತೆ ಮೇಲಾಧಿಕಾರಿಗಳಿಂದ ಸೂಚನೆ ಬಂದಿದೆ.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಪ್ರಮುಖ 10 ಜಂಕ್ಷನ್ಗಳನ್ನು ಅಭಿವೃದ್ಧಿಪಡಿಸುವುದು. ರಸ್ತೆಗುಂಡಿ ದುರಸ್ತಿ, ಪೈಪ್ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಕುರಿತು ಸೋಮವಾರ ವಂದಿತಾ ಶರ್ಮಾ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುತ್ತಿವೆ. ಉದ್ದೇಶಿತ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಮಗಾರಿಗಳಿಗೆ ವೇಗ ನೀಡಬೇಕಿದೆ ಎಂದರು.
ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಿಂದ ಕೂಡಿರುವ 10 ಜಂಕ್ಷನ್ಗಳಿವೆ. ಸಿಲ್ಕ್ ಬೋರ್ಡ್ ಜಂಕ್ಷನ್, ಇಬ್ಬಲೂರು ಜಂಕ್ಷನ್, ಜಯದೇವ ಜಂಕ್ಷನ್, ಎಂ.ಎಂ.ಟೆಂಪಲ್ ಜಂಕ್ಷನ್(ಟಿನ್ ಪ್ಯಾಕ್ಟರಿ), ಹೆಬ್ಬಾಳ ಜಂಕ್ಷನ್, ಗೊರಗುಂಟೆಪಾಳ್ಯ ಜಂಕ್ಷನ್, ಸಾರಕ್ಕಿ ಜಂಕ್ಷನ್, ಕೆ.ಎಸ್.ಲೇಔಟ್ ಜಂಕ್ಷನ್, ಕಾಡುಬೀಸನಹಳ್ಳಿ ಜಂಕ್ಷನ್ ಹಾಗೂ ಬನಶಂಕರಿ ಜಂಕ್ಷನ್ ಟ್ರಾಫಿಕ್ ನಿಯಂತ್ರಿಸಲು ಕೈಗೊಂಡಿದ್ದ ಕ್ರಮಗಳನ್ನು ಶೀಘ್ರವೇ ಮುಗಿಸಬೇಕು.
ನಗರದ ಮುಖ್ಯ ರಸ್ತೆಗಳು ಸೇರಿದಂತೆ ಆರ್ಟಿರಿಯಲ್, ಸಬ್-ಆರ್ಟಿರಿಯಲ್ ರಸ್ತೆಗಳು ಹಾಗೂ ವಾರ್ಡ್ ರಸ್ತೆಗಳಲ್ಲಿ ಬಾಕಿಯಿರುವ ರಸ್ತೆ ಗುಂಡಿಗಳನ್ನು ಶೀಘ್ರವೇ ಮುಚ್ಚಿ. ನಗರ ಸಂಚಾರಿ ಪೊಲೀಸ್ ವಿಭಾಗದ ಅಧಿಕಾರಿಗಳು ಗುರುತಿಸಿ ಪಾಲಿಕೆ ಗೆ ತಿಳಿಸಿದ್ದ ರಸ್ತೆಗುಂಡಿಗಳು ದುರಸ್ತಿ ಮಾಡಬೇಕು ಎಂದು ನಿರ್ದೇಶಿಸಿದರು.
ಮಳೆ ನೀರು ನಿಲ್ಲುವ ಸ್ಥಳಕ್ಕೆ ಭೇಟಿ ನೀಡಿ
ನಗರದ ಪ್ರಮುಖ ರಸ್ತೆಗಳಲ್ಲಿ ಮಳೆಯಾದರೆ ನೀರು ನಿಂತು ವಾಹನ ಸವಾರರಿಗೆ ಸಮಸ್ಯೆ ಸೃಷ್ಟಿಸುವ ಸ್ಥಳಗಳನ್ನು ಸಂಚಾರಿ ಪೊಲೀಸರು ಗುರುತಿಸಿದ್ದಾರೆ. ಆ ಎಲ್ಲ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕಾಮಗಾರಿ ನಡೆಸಬೇಕು. ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಆದರೆ, ಕೆಲವು ಸ್ಥಳದಲ್ಲಿ ದುರಸ್ತಿ ಕೆಲಸ ಮಾಡಿದ್ದರೂ ಸಮಸ್ಯೆ ಪೂರ್ಣ ಪ್ರಮಾಣದಲ್ಲಿ ಬಗೆಹರಿದಿಲ್ಲ ಎಂದು ಪೊಲೀಸರು ಸಭೆಗೆ ತಿಳಿಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸ್ಥಳ ಪರಿಶೀಲಿಸಿ ಸಮಸ್ಯೆ ಬಗೆಹರಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
112 ಎತ್ತರ ಮ್ಯಾನ್ಹೋಲ್ಗಳು
ನಗರದ ಪ್ರಮುಖ ರಸ್ತೆಗಳಲ್ಲೇ ರಸ್ತೆ ಮಟ್ಟಕ್ಕಿಂತ ಎತ್ತರವಿರುವ ಮ್ಯಾನ್ಹೋಲ್ಸ್ (ಒಳಚರಂಡಿ) ಗಳಿಂದ ಅಪಘಾತವಾಗುವ ಸಂಭವಿಸುತ್ತಿವೆ. ಈ ಪೈಕಿ ಸಂಚಾರಿ ಪೊಲೀಸ್ ಅಧಿಕಾರಿಗಳು 112 ಮ್ಯಾನ್ಹೋಲ್ಗಳನ್ನು ಗುರುತಿಸಿದ್ದಾರೆ. ಇನ್ನು ನಗರದಲ್ಲಿ ಬೆಂಗಳೂರು ಜಲಮಂಡಳಿ ವತಿಯಿಂದ 53 ಒಳಚರಂಡಿಗಳನ್ನು ಸರಿಪಡಿಸಲಾಗಿದೆ. ಬಾಕಿ ಇರುವ 59 ಒಳಚರಂಡಿಗಳನ್ನು ಕೂಡಲೇ ಸರಿಪಡಿಸುವಂತೆ ವಂದಿತಾ ಶರ್ಮಾ ತಿಳಿಸಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳೇ ಹಾಲಿ ಸಮಸ್ಯೆಗಳು
ನಗರದಲ್ಲಿ 107 ಕಡೆಗಳಲ್ಲಿ ರಸ್ತೆಗಳಲ್ಲಿ ಡಾಂಬರೀಕರಣ ಕೆಲಸ ನಡೆಯುತ್ತಿದೆ. 210 ಕಡೆ ಬೀದಿ ದೀಪ ಅಳವಡಿಸುವುದು, 47 ಕಡೆ ಬಿದಿ ದೀಪಗಳನ್ನು ದುರಸ್ತಿಪಡಿಸಲಾಗುತ್ತಿದೆ. ಒಟ್ಟು 33 ಕಡೆ ಕಸ ಸುರಿಯುವ ಸ್ಥಳ (ಬ್ಲಾಕ್ ಸ್ಪಾಟ್)ಗಳನ್ನು ತೆರವುಗೊಳಿಸುವುದು, 22 ಕಡೆ ರಸ್ತೆ ಬದಿ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಜಲಮಂಡಳಿ ವತಿಯಿಂದ ಪೈಪ್ಗಳನ್ನು ಹಾಕಲಾಗಿದೆ. 157 ಕಡೆ ಪಾದಚಾರಿ ಮಾರ್ಗಗಳಲ್ಲಿ ಪೆಟ್ಟಿ ಅಂಗಡಿಗಳಿದ್ದು, 51 ಕಡೆ ಕಟ್ಟಡ ಭಗ್ನಾವಶೇಷಗಳನ್ನು ಹಾಕಲಾಗಿದೆ. 330 ಕಡೆ ಹೈ-ಮಸ್ಟ್ ಲೈಟ್ ಅಳವಡಿಸುವ ಕೆಲಸ ನಡೆಯುತ್ತಿದೆ. 427 ಕಡೆ ಅವೈಜ್ಞಾನಿಕ ರಸ್ತೆ ಉಬ್ಬುಗಳಿರುವುದನ್ನು ಕೂಡಲೇ ಸರಿಪಡಿಸಬೇಕು. ಏಕೆಂದರೆ ಇವುಗಳಿಂದಲೂ ನಿತ್ಯ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಈ ಎಲ್ಲ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಸ್ತೆ ಬದಿ ನಿಂತ ಅನಾಥ ವಾಹನ ತೆರವು
ನಗರದ ಹಲವು ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಮಾಲೀಕರಿಲ್ಲದ ಅನಾಹುತಗಳನ್ನು ನಿಲ್ಲಸಲಾಗಿದೆ. ಬಿಬಿಎಂಪಿ ಅಧಿಕಾರಿಗಳು ಹಾಗೂ ಬೆಂಗಳೂರು ನಗರ ಸಂಚಾರಿ ಪೊಲೀಸ್ ಅಧಿಕಾರಿಗಳು ಸಮನ್ವಯತೆಯಿಂದ ತೆರವು ಕಾರ್ಯಾಚರಣೆ ನಡೆಸಬೇಕು ಎಂದರು.
ಸಭೆಯಲ್ಲಿ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಫರ್ವೇಜ್, ಸಂಚಾರಿ ಪೋಲಿಸ್ ವಿಭಾಗದ ವಿಶೇಷ ಆಯುಕ್ತ ಸಲೀಮ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಪಾಲಿಕೆಯ ಎಲ್ಲಾ ವಿಶೇಷ ಆಯುಕ್ತರು ಮತ್ತಿತರ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.