ಎಲ್ಲೆಂದರಲ್ಲಿ ಧ್ವನಿವರ್ಧಕ ಬಳಕೆ: ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ
ಬೆಂಗಳೂರು,ಜನವರಿ 12: ಎಲ್ಲೆಂದರಲ್ಲಿ ಧ್ವನಿವರ್ಧಕಗಳ ಬಳಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ ನೀಡಿದೆ.
2010ರ ಶಬ್ಧ ಮಾಲಿನ್ಯ ನಿಯಂತ್ರಣಾ ನಿಯಮಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.
ಸಾರ್ವಜನಿಕ ಸ್ಥಳಗಳು, ಧಾರ್ಮಿಕ ಕೇಂದ್ರಗಳಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸುವವರ ವಿರುದ್ಧ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಅನ್ವಯ ಕ್ರಮ ಕೈಗೊಳ್ಳಲು ಪೊಲೀಸರು ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ 3 ವಾರಗಳಲ್ಲಿ ಸೂಕ್ತ ನಿರ್ದೇಶನ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಶಬ್ಧ ಮಾಲಿನ್ಯ ನಿಯಂತ್ರಣಾ ನಿಯಮಗಳನ್ನು ಪಾಲಿಸುತ್ತಿಲ್ಲ, ಇದು ನಾಗರಿ ಹಕ್ಕುಗಳ ಉಲ್ಲಂಘನೆ ಆಗಲಿದೆ. ನಿಯಮ ಪಾಲಿಸದೆ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡು ಮೂರು ವಾರಗಳಲ್ಲಿ ಅನುಸರಣಾ ವರದಿ ಸಲ್ಲಿಸಬೇಕು' ಎಂದು ಸರ್ಕಾರಕ್ಕೆ ಈ ನಿರ್ದೇಶನ ನೀಡಿದ ನ್ಯಾಯಾಲಯವು ವಿಚಾರಣೆಯನ್ನು ಫೆ.8ಕ್ಕೆ ಮುಂದೂಡಿದೆ.
'ಧ್ವನಿವರ್ಧಕ ಬಳಕೆ ವಿರುದ್ಧ ಮಾಲಿನ್ಯ ನಿಯಂತ್ರಣಾ ಮಂಡಳಿ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇಂತಹ ನಿರ್ದೇಶನಗಳನ್ನು ರಾಜ್ಯ ಸರ್ಕಾರ ತಕ್ಷಣ ಪರಿಗಣಿಸಬೇಕು' ಎಂದು ಪೀಠ ಹೇಳಿತು.