ಬೆಂ.ವಿವಿ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ ವಾಸಪ್ ಆದೇಶಕ್ಕೆ ತಡೆ
ಬೆಂಗಳೂರು, ಏ.13. ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಗೋವಿಂದ ರಾಜು ಮತ್ತು ಪ್ರೇಮ್ ಸೋಹನ್ಲಾಲ್ ನಾಮನಿರ್ದೇಶನ ವಾಪಸ್ ಮಾಡಿರುವ ವಿವಾದ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಮಧ್ಯೆ ಅವರಿಬ್ಬರನ್ನು ನಾಮ ನಿರ್ದೇಶನ ಮಾಡಿದ್ದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮೂರು ತಿಂಗಳು ಮಧ್ಯಂತರ ತಡೆಯಾಜ್ಞೆ ನೀಡಿದೆ.
ಹಾಗಾಗಿ ಸರಕಾರ ಮತ್ತು ಸಿಂಡಿಕೇಟ್ ಸದಸ್ಯರ ನಡುವಿನ ಶೀತಲ ಸಮರಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಡಾ.ಗೋವಿಂದ ರಾಜು ಮತ್ತು ಪ್ರೇಮ್ ಸೋಹನ್ಲಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಬೆಂಗಳೂರು ವಿವಿ ಕುಲಪತಿಯಾಗಿ ಪ್ರೊ.ಕೆ.ಆರ್.ವೇಣುಗೋಪಾಲ್ ಮುಂದುವರಿಕೆ
ಅಲ್ಲದೆ, ಅರ್ಜಿದಾರರ ನಾಮನಿರ್ದೇಶನ ಹಿಂಪಡೆದು 2022ರ ಏ.7ರಂದು ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿ ಅರ್ಜಿಯಲ್ಲಿ ಪ್ರತಿವಾದಿಗಳಾದ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರು, ಅರ್ಜಿದಾರರ ಸ್ಥಾನಕ್ಕೆ ನಿಯೋಜನೆಗೊಂಡಿರುವ ಡಾ.ಸಿ.ಆರ್. ಮಹೇಶ್ ಮತ್ತು ಡಾ.ಅನಿಲ್ ಕುಮಾರ್ ಈಶೋಗೆ ತುರ್ತು ನೋಟಿಸ್ ಜಾರಿ ಮಾಡಿ. ವಿಚಾರಣೆಯನ್ನು ರಜಾಕಾಲದ ನಂತರಕ್ಕೆ ಮುಂದೂಡಿತು.
ವಾದ ಆಲಿಸಿದ ಬಳಿಕ ನ್ಯಾಯಪೀಠ ''ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶಿತರಾದವರು ನಾಮ ನಿರ್ದೇಶಿಸಿತ ಪ್ರಾಧಿಕಾರ ನಿಗದಿಪಡಿಸಿದ ಸಮಯದವರಗೆ ಅಧಿಕಾರ ಹೊಂದಿರುತ್ತಾರೆ ಎಂಬುದು ಸ್ಪಷ್ಟ ಸಂಗತಿ. ಆದರೆ, ಅರ್ಜಿದಾರರ ನಾಮನಿರ್ದೇಶನ ಹಿಪಡೆದಿರುವುದಕ್ಕೆ ಯಾವುದೇ ಕಾರಣ ನೀಡಿಲ್ಲ. ಹಾಗಾಗಿ, ನ್ಯಾಯಾಲಯ ಪರಿಶೀಲಿಸಬೇಕಿದೆ'' ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅರ್ಜಿದಾರರ ಪರ ವಕೀಲರು, ಮೂರು ವರ್ಷದ ಅವಧಿಗೆ ಅರ್ಜಿದಾರರನ್ನು ಸಿಂಡಿಕೇಟ್ ಸದಸ್ಯ ಸ್ಥಾನಕ್ಕೆ 2019ರ ಡಿ.10ರಂದು ಸರ್ಕಾರ ನಾಮ ನಿರ್ದೇಶನ ಮಾಡಿತ್ತು. ಅದರೆ, ಅಧಿಕಾರಾವಧಿ ಪೂರ್ಣಗೊಳ್ಳುವ ಮುನ್ನವೇ ಅರ್ಜಿದಾರರ ನಾಮನಿರ್ದೇಶನವನ್ನು ಹಿಂಪಡೆದು 2022ರ ಏ.7ರಂದು ಸರ್ಕಾರ ಆದೇಶಿಸಿದೆ. ಕರ್ನಾಟಕ ವಿಶ್ವವಿದ್ಯಾಯಗಳ ಕಾಯ್ದೆ ಸೆಕ್ಷನ್ 39(1)(3) ಪ್ರಕಾರ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ ಹಿಂಪಡೆಯಬೇಕಾದರೆ ಸದಸ್ಯರ ವಿರುದ್ಧ ಗಂಭೀರ ಆರೋಪ ಕೇಳಿ ಬರಬೇಕು. ಆ ಸಂಬಂಧ ವಿಚಾರಣೆ ನಡೆದು ಆರೋಪ ಸಾಬೀತಾದರೆ ಮಾತ್ರ ನಾಮನಿರ್ದೇಶನ ಹಿಂಪಡೆಯಬೇಕಾಗುತ್ತದೆ. ಪ್ರಕರಣದಲ್ಲಿ ಈ ನಿಯಮವನ್ನು ಪಾಲಿಸದೆ ಸರ್ಕಾರ ಅರ್ಜಿದಾರರ ವಿರುದ್ಧ ಕಾನೂನು ಬಾಹಿರ ಹಾಗೂ ಏಕಪಕ್ಷೀಯವಾಗಿ ಆದೇಶ ಹೊರಡಿಸಿದ್ದು, ಅದನ್ನು ರದ್ದುಪಡಿಸಬೇಕು ಎಂದು ಕೋರಿದ್ದಾರೆ.
Recommended Video