Nirmala Sitharaman: ಚುನಾವಣಾ ಬಾಂಡ್ ಪ್ರಕರಣ; ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ
ಚುನಾವಣಾ ಬಾಂಡ್ಗಳ ಮೂಲಕ ಸುಲಿಗೆ ಮಾಡಿರುವ ಆರೋಪದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸದ್ಯ ಚುನಾವಣಾ ಬಾಂಡ್ ಪ್ರಕರಣದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಬಿವೈ ವಿಜಯೇಂದ್ರ ಮತ್ತು ನಳಿನ್ ಕುಮಾರ್ ಕಟೀಲ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಮಾರು 8,000 ಕೋಟಿ ರುಪಾಯಿಗಳಿಗೂ ಅಧಿಕ ಹಣವನ್ನು ಸುಲಿಗೆ ಮಾಡಲಾಗಿದೆ ಎಂದು 'ಜನಾಧಿಕಾರ ಸಂಘರ್ಷ ಪರಿಷತ್' (ಜೆಎಸ್ಪಿ) ಸಹ-ಅಧ್ಯಕ್ಷ ಆದರ್ಶ್ ಆರ್ ಅಯ್ಯರ್ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಸೂಚಿಸಿತ್ತು.

ಭಾರತೀಯ ನ್ಯಾಯಸಂಹಿತೆ 384, 120 ಬಿ, 34ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು, ನಿರ್ಮಲಾ ಸೀತಾರಾಮನ್ ಎ1 ಆರೋಪಿಯಾಗಿದ್ದು, ನಳಿನ್ ಕುಮಾರ್ ಕಟೀಲ್ ಎ4 ಮತ್ತು ಬಿವೈ ವಿಜಯೇಂದ್ರರನ್ನು ಎ5 ಎಂದು ಹೆಸರಿಸಲಾಗಿತ್ತು.
ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಅಕ್ಟೋಬರ್ 22ಕ್ಕೆ ವಿಚಾರಣೆಯನ್ನು ನಿಗದಿಪಡಿಸಿದೆ.
ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಿಸುತ್ತಿದ್ದಂತೆ ಕಾಂಗ್ರೆಸ್ ರಾಜೀನಾಮೆಗೆ ಆಗ್ರಹಿಸಿದೆ. ಚುನಾವಣಾ ಬಾಂಡ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಎಸ್ಐಟಿ ಮೂಲಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಕೆಲಸಕ್ಕೆ ಮುನ್ನ ಮತ್ತು ಕೆಲಸದ ಬಳಿಕ ಲಂಚವನ್ನು ಪಡೆಯಲಾಗಿದೆ. ಕೆಲವು ಕಂಪನಿಗಳ ಮೇಲೆ ದಾಳಿ ಮಾಡಿದ ಬಳಿಕ ಬಾಂಡ್ ಮೂಲಕ ಹಣ ಸಂಗ್ರಹಿಸಲಾಗಿದೆ, ಕೆಲವು ನಕಲಿ ಕಂಪನಿಗಳ ಹೆಸರಿನಲ್ಲಿ ಕೂಡ ಹಣ ಪಡೆಯಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಕಾಂಗ್ರೆಸ್ ತಂತ್ರ ಎಂದ ಶೆಟ್ಟರ್
ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಾಗಿರುವುದಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ. ಕೋರ್ಟ್ ಆದೇಶದಂತೆ ಎಫ್ಐಆರ್ ದಾಖಲಿಸಲಾಗಿದೆ. ಎಫ್ಐಆರ್ ದಾಖಲಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಿಬೇಕು, ತಮಗೆ ಅನ್ಯಾಯವಾಗಿದೆ ಎಂದು ಯಾರು ದೂರು ಕೊಟ್ಟಿಲ್ಲ ಎಂದು ಹೇಳಿದರು.












Click it and Unblock the Notifications